ಮಸ್ತಕಾಭಿಷೇಕಕ್ಕೆ ನೆರವು ನೀಡುವಂತೆ ಕೇಂದ್ರ ಹಣಕಾಸು ಸಚಿವ ಜೇಟ್ಲಿಗೆ ಗೌಡರ ಮನವಿ
ಬೆಂಗಳೂರು, ಮಾ.3- ಹಾಸನ ಜಿಲ್ಲೆಯ ಶ್ರವಣಬೆಳಗೊಳದ ಗೊಮ್ಮಟೇಶ್ವರ ಮೂರ್ತಿಗೆ ನಡೆಯಲಿರುವ ಮಹಾ ಮಸ್ತಕಾಭಿಷೇಕಕ್ಕೆ ನೆರವು ನೀಡುವಂತೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೋರಲಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ಕೇಂದ್ರ ಹಾಗೂ ಹಣಕಾಸು ಸಚಿವ ಅರುಣ ಜೇಟ್ಲಿ ಅವರನ್ನು ಭೇಟಿ ಮಾಡಲಿರುವ ದೇವೇಗೌಡರು ಮಹಾಮಸ್ತಕಾಭಿಷೇಕಕ್ಕೆ 500 ಕೋಟಿ ರೂ. ನೆರವು ನೀಡುವಂತೆ ಕೋರಲಿದ್ದಾರೆ ಎಂದು ಜೆಡಿಎಸ್ ಪಕ್ಷದ ಮೂಲಗಳು ತಿಳಿಸಿವೆ. ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಕೈಗೊಳ್ಳಬೇಕಿರುವ ಕಾಮಗಾರಿಗಳು ಹಾಗೂ ಪೂರ್ವಸಿದ್ಧತೆಗಾಗಿ ಗೌಡರು ನೆರವು ಕೋರಲಿದ್ದು, ಈಗಾಗಲೇ ಪ್ರಧಾನಿ ನರೇಂದ್ರಮೋದಿಯವರಿಗೂ ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಆವರಿಸಿರುವ ತೀವ್ರ ಬರಗಾಲದ ಪರಿಸ್ಥಿತಿ ಎದುರಿಸಲು ಕೂಡ ಹೆಚ್ಚಿನ ನೆರವು ನೀಡುವಂತೆ ಇದೇ ಸಂದರ್ಭದಲ್ಲಿ ಮನವಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
< Eesanje News 24/7 ನ್ಯೂಸ್ ಆ್ಯಪ್ >