‘ಸಿದ್ದರಾಮಯ್ಯನವರಿಗೆ ಯಾವಾಗ ಏನು ಮಾಡಬೇಕೆಂಬ ಕನಿಷ್ಟ ಜ್ಞಾನವೂ ಇಲ್ಲ’ : ಶೆಟ್ಟರ್
ಹುಬ್ಬಳ್ಳಿ, ಸೆ.11- ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವುದೊಂದು, ಮಾಡುವುದು ಒಂದು. ಯಾವ ಸಂದರ್ಭದಲ್ಲಿ ಏನು ಮಾಡಬೇಕೆಂಬ ಕನಿಷ್ಟ ಜ್ಞಾನ ಸಹ ಅವರಿಗೆ ಇಲ್ಲ ಎಂದು ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ವಾಗ್ದಾಳಿ ಮಾಡಿದರು. ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಮಹದಾಯಿ ನೀರಿನ ವಿಷಯ ವಾಗಿ ಗೋವಾ ಮುಖ್ಯಮಂತ್ರಿ ಜೊತೆ ದೂರವಾಣಿ ಮುಖಾಂತರ ಮಾತುಕತೆ ನಡೆಸುವಂತೆ ನಾವು ಹೇಳಿದ್ದೆವು. ಆದರೆ ಸಿದ್ದರಾಮಯ್ಯ ಫೋನ್ ಮಾಡಿದ್ದೇವೆ ಎಂದು ಹೇಳುತ್ತಾರೆ. ಅದರ ಬೆಳವಣಿಗೆ ಏನಾಗಿದೆ ಎಂಬುದು ಯಾರಿಗೂ ತಿಳಿಯದು ಎಂದು ಟೀಕಿಸಿದರು. ಕಾಂಗ್ರೆಸ್ ಸರ್ಕಾರದ ಆಡಳಿತ ಯಂತ್ರ ಕುಸಿದಿದೆ. ಆಡಳಿತ ನಡೆಸಲು ವಿಫವಾದಾಗಲೆಲ್ಲ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರತ್ತ ಬೊಟ್ಟು ತೋರಿಸುತ್ತಾರೆ. ಸರಿಯಾಗಿ ಆಡಳಿತ ನಡೆಸಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ ಎಂದು ಒತ್ತಾಯಿಸಿದರು.
ಮಹದಾಯಿ ವಿಚಾರದಲ್ಲಿ ಸರ್ಕಾರ ಕಾಟಾಚಾರದ ಪ್ರಯತ್ನ ಮಾಡುತ್ತಿದೆ. ಸಿಎಂ ಎಲ್ಲವನ್ನು ಹಗರುವಾಗಿ ತೆಗೆದುಕೊಳ್ಳುತ್ತಿದ್ದಾರೆ. ಇದು ಸರಿಯಲ್ಲ ಎಂದರು. ಉತ್ತರ ಕರ್ನಾಟಕ ಭಾಗದಲ್ಲಿ ಎಚ್.ಡಿ.ಕುಮಾರಸ್ವಾಮಿಯವರು ವಾಸ್ತವ್ಯ ಹೂಡುತ್ತಿರುವುದು ಸ್ವಾಗತಾರ್ಹ. ಇದು ಉತ್ತರ ಕರ್ನಾಟಕ ಭಾಗದ ಅಭಿವೃದ್ದಿಗೆ ಪೂರಕವಾಗಲಿದೆ ಎಂದು ಹೇಳಿದರು.
► Follow us on – Facebook / Twitter / Google+