ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ವಿದ್ಯುತ್ ಚಾಲಿತ ದ್ವಿಚಕ್ರವಾಹನ

Social Share

ಬೆಂಗಳೂರು,ಸೆ.16- ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100ರಂತೆ ಬಾಬು ಜಗಜೀವನರಾಮ್ ಅವರ ಹೆಸರಿನಲ್ಲಿ ಎಸ್ಸಿ-ಎಸ್ಟಿ ಸಮುದಾಯದವರಿಗೆ ವಿದ್ಯುತ್ ಚಾಲಿತ ದ್ವಿಚಕ್ರವಾಹನಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ , ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು.

ಇದನ್ನೂ ಓದಿ : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-09-2022)

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100ರಂತೆ ವಿದ್ಯುತ್ ಚಾಲಿತ ದ್ವಿಚಕ್ರವಾಹನಗಳನ್ನು ನೀಡುತ್ತಿರುವುದು ಎಸ್ಸಿ-ಎಸ್ಟಿಯ ಸಮುದಾಯಕ್ಕೆ ಅನುಕೂಲವಾಗಲಿದೆ. ಸ್ತ್ರೀ ಶಕ್ತಿ ಸಂಘ ಮತ್ತು ಯುವಕರು ಇದರ ಅನುಕೂಲ ಪಡೆಯಬೇಕು ಎಂದರು.
ಈ ಯೋಜನೆಯನ್ನು 10 ಮಹಾನಗರ ಪಾಲಿಕೆಗಳಿಗೂ ವಿಸ್ತರಿಸಲಾಗುವುದು. 400 ಜನರಿಗೆ ಇದರಿಂದ ಅನುಕೂಲವಾಗಲಿದೆ.

ವಿದೇಶದಲ್ಲಿ ಕಾರಿನಲ್ಲಿ ಬಂದು ಸ್ವಚ್ಚತಾ ಕಾರ್ಯ ಮಾಡಿಹೋಗುತ್ತಾರೆ ಎಂದು ಕೇಳಿದ್ದೇವೆ. ಅಂಥ ಶಕ್ತಿ ನಮ್ಮಲ್ಲಿಯೂ ದೊರೆಯಲಿ. ಅವರ ಕಲ್ಯಾಣಕ್ಕೆ ಸಂಬಂಸಿದ ಎಲ್ಲ ವಿಚಾರಗಳಲ್ಲೂ ಸರ್ಕಾರ ಸ್ಪಂದಿಸುತ್ತಿದೆ ಎಂದು ಹೇಳಿದರು.
ಸರ್ಕಾರ ಬಡವರ ಮತ್ತು ದುಡಿಯುವ ವರ್ಗದವರ ಪರವಾಗಿದ್ದು, ಸಾಮಾಜಿಕ ನ್ಯಾಯ ಎಂಬುದು ಮಾತಿನಲ್ಲಿ ಅಲ್ಲ, ಕೃತಿಯಲ್ಲಿ ಇರಬೇಕು ಎಂದರು.

ವಿದ್ಯುತ್ ಚಾಲಿತ ದ್ವಿಚಕ್ರವಾಹನ ನೀಡುತ್ತಿರುವುದು ಒಳ್ಳೆಯ ಕಾರ್ಯಕ್ರಮ. ಸೌಲಭ್ಯಗಳ ಮೂಲಕ ಅವರ ಬದುಕಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದೇವೆ. ದಣಿವರಿಯದೆ ಇವರು ಕೆಲಸ ಮಾಡುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಪುರಸ್ಕರಿಸುವ ಕಾರ್ಯ ಇದಾಗಿದೆ ಎಂದು ಎಂದು ಮೆಚ್ಚುಗೆ ವ್ಕಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಕೋಟಾ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಿವಣ್ಣ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Articles You Might Like

Share This Article