ಬೆಂಗಳೂರು, ಮಾ.1-ರಷ್ಯಾ ದಾಳಿಗೆ ತುತ್ತಾಗಿರುವ ಉಕ್ರೇನ್ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳ ಪೈಕಿ ನಿನ್ನೆ ರಾತ್ರಿ ಹಾಗೂ ಇಂದು 8 ಮಂದಿ ತಾಯ್ನಾಡಿಗೆ ಮರಳಿದ್ದಾರೆ. ಕಳೆದ ಫೆ.27ರಿಂದ ಈತನಕ ಒಟ್ಟು 45 ವಿದ್ಯಾರ್ಥಿಗಳು ರಾಜ್ಯಕ್ಕೆ ಮರಳಿದಂತಾಗಿದೆ. ಮೊದಲ ದಿನ ಮುಂಬೈ ಮೂಲಕ 12 ಮಂದಿ ವಿದ್ಯಾರ್ಥಿಗಳು ವಾಪಸಾಗಿದ್ದರು. ಉಳಿದವರು ದೆಹಲಿ ಮೂಲಕ ಬೆಂಗಳೂರಿಗೆ ಮರಳಿದ್ದಾರೆ ಎಂದು ಕೆಎಸ್ಡಿಎಂಎ ಆಯುಕ್ತ ಹಾಗೂ ನೋಡಲ್ ಅಧಿಕಾರಿ ಮನೋಜ್ ರಾಜನ್ ತಿಳಿಸಿದ್ದಾರೆ.
ಯುದ್ಧಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಕೇಂದ್ರ ಸರ್ಕಾರದ ನೆರವಿನೊಂದಿಗೆ ಈತನಕ 45 ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲಾಗಿದೆ. ಅಲ್ಲಿನ ರಾಯಭಾರಿ ಕಚೇರಿಗಳೊಂದಿಗೆ ಸಂಪರ್ಕದಲ್ಲಿದ್ದು, ಉಳಿದ ವಿದ್ಯಾರ್ಥಿಗಳು ಹಾಗೂ ನಾಗರಿಕರನ್ನು ಕರೆತರುವ ಪ್ರಯತ್ನ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.
ಒಟ್ಟು 451 ಮಂದಿ ಉಕ್ರೇನ್ನಲ್ಲಿ ಸಿಲುಕಿಕೊಂಡಿದ್ದರು. ಅವರನ್ನು ಕರೆತರುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಕೇಂದ್ರ ಸರ್ಕಾರದ ಆಪರೇಷನ್ ಗಂಗಾ ಅಡಿಯಲ್ಲಿ ಸುರಕ್ಷಿತವಾಗಿ ವಿಮಾನದ ಮೂಲಕ ಕರೆತರುವ ಕಾರ್ಯವಾಗುತ್ತಿದೆ ಎಂದು ಹೇಳಿದ್ದಾರೆ.
