ಬೆಂಗಳೂರು, ಫೆ. 23- ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಪ್ರಸಕ್ತ ಸಾಲಿನ ನಾಲ್ಕನೆ ಕಂತಿನ ಅನುದಾನವನ್ನು ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ 30 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ 150,28,50,000ರೂ.ಗಳನ್ನು ಬಿಡುಗಡೆ ಮಾಡಿದೆ. ವಿಧಾನಸಭೆಯ 225 ಸದಸ್ಯರು ಹಾಗೂ ವಿಧಾನ ಪರಿಷತ್ನ 75 ಸದಸ್ಯರಿಗೆ ಈ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
ಈಗಾಗಲೇ ಮೊದಲ ಮೂರು ಕಂತಿನಲ್ಲಿ ತಲಾ 50,09,500ರೂ.ನಂತೆ ಒಟ್ಟು 450,85,50,000ರೂ.ಗಳನ್ನು ಬಿಡುಗಡೆ ಮಾಡಿತ್ತು. ಈಗ ನಾಲ್ಕನೆ ಕಂತಿನ ಅನುದಾನವನ್ನು ಬಿಡುಗಡೆ ಮಾಡಿದ್ದು, ಪ್ರತಿ ತಿಂಗಳು ಆರ್ಥಿಕ ಮತ್ತು ಭೌತಿಕ ಪ್ರಗತಿಯ ವಿವರನ್ನು ಸರ್ಕಾರಕ್ಕೆ ಸಲ್ಲಿಸಲು ಸೂಚಿಸಿದೆ.
ನಿಯಮಾನುಸಾರ ಹಣ ಬಳಕೆ ಪ್ರಮಾಣ ಪತ್ರವನ್ನು ಜಿಲ್ಲಾಧಿಕಾರಿಗಳ ಅಥವಾ ಉಪವಿಭಾಗಾಧಿಕಾರಿಗಳ ಮೇಲು ಸಹಿಯೊಂದಿಗೆ ಸರ್ಕಾರಕ್ಕೆ ಸಲ್ಲಿಸಬೇಕು. ಬಿಡುಗಡೆ ಮಾಡಿದ ಅನುದಾನವನ್ನು ನಿಗದಿತ ಅವಧಿಯಲ್ಲಿ ಬಳಕೆ ಮಾಡಿಕೊಳ್ಳಬೇಕು ಎಂಬ ಷರತ್ತು ವಿಧಿಸಲಾಗಿದೆ.
ಅಲ್ಲದೆ, ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ಕಾಯ್ದೆಯನ್ವಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಉಪಯೋಗವಾಗುವ ಕಾರ್ಯಕ್ರಮಗಳಿಗೆ ಮಾತ್ರ ವೆಚ್ಚ ಮಾಡಬೇಕು. ಡಿಸೆಂಬರ್ನಲ್ಲಿ ನಿವೃತ್ತರಾದ ವಿಧಾನ ಪರಿಷತ್ ಸದಸ್ಯರಿಗೂ ಅನುದಾನ ಬಿಡುಗಡೆ ಮಾಡಲಾಗಿದೆ. ಆದರೆ, ಹೊಸದಾಗಿ ಆಯ್ಕೆಯಾದ 25 ವಿಧಾನ ಪರಿಷತ್ ಸದಸ್ಯರಿಗೆ ಮುಂದಿನ ಆರ್ಥಿಕ ವರ್ಷದಿಂದ ಅನುದಾನ ನೀಡುವುದಾಗಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
