ಬೆಂಗಳೂರು, ಜೂ.2- ಬೆಳಗಾವಿಯಲ್ಲಿ ವರದಿಯಾಗಿರುವ ಸಾಮೂಹಿಕ ಅತ್ಯಾಚಾರ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಈಗಾಗಲೇ ಐದು ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಳೆದ ಡಿಸೆಂಬರ್ ಅಥವಾ ಜನವರಿಯಲ್ಲಿ ಈ ಪ್ರಕರಣ ನಡೆದಿದ್ದು, ಈವರೆಗೂ ಯಾರ ಬಳಿಯೂ ಹೇಳಿಕೊಂಡಿರಲಿಲ್ಲ. ದೂರು ಕೂಡ ನೀಡಿರಲಿಲ್ಲ. ಈಗ ದೂರು ನೀಡಲಾಗಿದ್ದು, ತಕ್ಷಣವೇ ಐದು ಜನರನ್ನು ಬಂಧಿಸಲಾಗಿದೆ. ಪೋಟ್ರೊ ಕಾಯ್ದೆಯಡಿ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ತುಮಕೂರಿನಲ್ಲಿ ಹೇಮಾವತಿ ಲಿಂಕ್ ಕೆನಾಲ್ ಯೋಜನೆಯಿಂದ ಯಾರಿಗೂ ತೊಂದರೆಯಾಗುವುದಿಲ್ಲ. ಅನಗತ್ಯವಾಗಿ ಯಾರೂ ಆತಂಕಕ್ಕೆ ಒಳಗಾಗಬಾರದು ಮತ್ತು ಸಂಯಮ ಕಾಯ್ದುಕೊಳ್ಳಬೇಕು ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.
ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಬಗ್ಗೆ ತಾಂತ್ರಿಕ ಸಮಿತಿ ರಚಿಸಲಾಗಿತ್ತು. ಸಮಿತಿಯ ವರದಿಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಹೀಗಾಗಿ ನೀರಾವರಿ ಇಲಾಖೆ ಕಾಮಗಾರಿ ಆರಂಭಿಸಲು ಸೂಚನೆ ನೀಡಿದೆ ಎಂದು ತಿಳಿಸಿದರು. ಇದರ ನಡುವೆ ರೈತರು, ಶಾಸಕರು ಪ್ರತಿಭಟನೆ ಮಾಡುತ್ತಿದ್ದಾರೆ. ಇಂದು ತಾವು ತುಮಕೂರಿಗೆ ಭೇಟಿ ನೀಡುತ್ತಿದ್ದು, ಹೇಮಾವತಿ ನಾಲಾ ವಿಭಾಗದ ಅಧಿಕಾರಿಗಳ ಜೊತೆ ಸಭೆ ನಡೆಸುವುದಾಗಿ ತಿಳಿಸಿದರು.
ಮಾಗಡಿಗೆ ನೀರು ತರಲು ಅಡ್ಡಿಪಡಿಸಿದರೆ ತುಮಕೂರಿನ ಹಾಲು ಮತ್ತು ತರಕಾರಿಯನ್ನು ಮಾಗಡಿಯಲ್ಲಿ ಮಾರಾಟ ಮಾಡಲು ಬಿಡುವುದಿಲ್ಲ ಎಂದು ಶಾಸಕ ಬಾಲಕೃಷ್ಣ ನೀಡಿರುವ ಎಚ್ಚರಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಇದು ತಮ್ಮ ಗಮನಕ್ಕೆ ಬಂದಿಲ್ಲ. ಶಾಸಕರು ಸಂಯಮದಿಂದ ವರ್ತಿಸಬೇಕು ಎಂದು ಸಲಹೆ ನೀಡಿದರು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸ್ವಾಮೀಜಿಯ ವಿರುದ್ಧ ಪ್ರಕರಣ ದಾಖಲಿಸಿರುವ ಬಗ್ಗೆ ತಾವು ತುಮಕೂರಿಗೆ ಹೋದ ಬಳಿಕ ಪರಿಶೀಲನೆ ನಡೆಸುವುದಾಗಿ ಹೇಳಿದರು.