ಬೆಂಗಳೂರು, ಏ.21- ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕರ್ನಾಟಕ ರಾಜ್ಯ ಹಾಗೂ ಬೆಂಗಳೂರಿನ ಬಗ್ಗೆ ಅರಿವಿಲ್ಲ. ಗ್ರೇಟರ್ ಬೆಂಗಳೂರು ಕ್ಷೇತ್ರ ಪುನರ್ ವಿಂಗಡನೆಗಳ ವಿಚಾರದಲ್ಲಿ ತಾವು ವಿರೋಧ ಪಕ್ಷಗಳ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಾಗಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರ ಪಕ್ಷದ ಶಾಸಕರೂ ಕೂಡ ಬೆಂಗಳೂರಿನ ಕ್ಷೇತ್ರ ಪುನರ್ ವಿಂಗಡನೆ ಸಭೆಯಲ್ಲಿ ಭಾಗವಹಿಸಿದ್ದರು ಎಂದು ಹೇಳಿದರು.
ಕುಮಾರಸ್ವಾಮಿ ಅವರಿಗೆ ಮಾಹಿತಿ ಇಲ್ಲ ಎಂದಾದರೆ, ಸಮಿತಿಯಲ್ಲಿದ್ದ ಅವರ ಪಕ್ಷದ ಶಾಸಕರಿಂದ ಕೇಳಿ ತಿಳಿದುಕೊಳ್ಳಲಿ. ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷಗಳ ಶಾಸಕರು ಸಮಿತಿಯ ಸಭೆಯಲ್ಲಿ ಭಾಗವಹಿಸಿ ದ್ದರು. ಎಲ್ಲರ ಅಭಿಪ್ರಾಯ ಪಡೆದ ನಂತರವೇ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ವಿರೋಧ ಪಕ್ಷಗಳ ಅಭಿಪ್ರಾಯಗಳು ಏನೇ ಇರಬಹುದು. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷದ ನಾಯಕರನ್ನು ಹೇಗೆ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕೆಂಬ ಸಣ್ಣ ಅನುಭವ ತಮಗಿದೆ. ಸಭೆಯಲ್ಲಿ ಎಷ್ಟು ಗಂಟೆ ಯಾವ ರೀತಿ ಚರ್ಚೆ ನಡೆಸಲಾಗಿದೆ ಎಂದು ಶಾಸಕರನ್ನು ಕೇಳಿ ಕುಮಾರಸ್ವಾಮಿ ತಿಳಿದುಕೊಳ್ಳಲಿ ಎಂದರು.
ಜಿಬಿಎಗೆ ಚುನಾವಣೆ ನಡೆಸಲು ಈಗಾಗಲೇ ನಾವು ಸಿದ್ಧರಿದ್ದೇವೆ. ನ್ಯಾಯಾಲಯ ಸೂಕ್ತ ನಿರ್ದೇಶನ ನೀಡಬೇಕು. ಸರ್ಕಾರ ಅದರಂತೆ ತೀರ್ಮಾನ ತೆಗೆದುಕೊಳ್ಳಬೇಕು. ಜಿಬಿಎ ವತಿಯಿಂದ ಎಲ್ಲಾ ರೀತಿಯ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಚುನಾವಣೆ ನಡೆಯದ ಹಿನ್ನೆಲೆಯಲ್ಲಿ ಕೇಂದ್ರದಿಂದ ಅನುದಾನ ಬರುತ್ತಿಲ್ಲ ಎಂದು ಜಿಬಿಎ ಮುಖ್ಯ ಆಯುಕ್ತರು ಪತ್ರ ಬರೆದಿರುವುದು ನನ್ನ ಗಮನಕ್ಕೆ ಬಂದಿಲ್ಲ. ಒಂದು ವೇಳೆ ಆ ರೀತಿ ಪತ್ರ ಬರೆದಿದ್ದರೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.
ಯಾವುದೇ ಹಗೆ ಇಲ್ಲ: ಅಲ್ಪಸಂಖ್ಯಾತರ ವಿಚಾರವಾಗಿ ಕಾಂಗ್ರೆಸ್ನಲ್ಲಿ ಯಾರೂ ಹಗೆ ಸಾಧಿಸುತ್ತಿಲ್ಲ. ಪಕ್ಷದ ಶಿಸ್ತಿನಲ್ಲಿ ನೀಡುವ ಸೂಚನೆಗಳನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು. ಹೈಕಮಾಂಡ್ ನಿರ್ದೇಶನ ಪ್ರಕಾರ ಕೆಪಿಸಿಸಿ ಕ್ರಮ ಕೈಗೊಂಡಿದೆ ಎಂದು ಸ್ಪಷ್ಟಪಡಿಸಿದರು.
ಕುಡಿಯುವ ನೀರಿನ ಸಮಸ್ಯೆಗೆ ಮುಂಜಾಗ್ರತೆ: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯ ಇರುವ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಂತರ್ಜಲ ಅಭಿವೃದ್ಧಿ ಹಾಗೂ ನೀರು ಪೂರೈಕೆ ಸಂಬಂಧಪಟ್ಟಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಜೊತೆ ಚರ್ಚೆ ನಡೆಸಿ ಅಗತ್ಯ ಸೂಚನೆ ನಡೆಸಲಾಗಿದೆ.ಯಾವುದೇ ರೀತಿಯ ಪರಿಸ್ಥಿತಿ ಎದುರಾದರೂ ನಿಭಾಯಿಸುತ್ತೇನೆ. ಜನರಿಗೆ ತೊಂದರೆಯಾಗಲು ಬಿಡುವುದಿಲ್ಲ ಎಂದು ಹೇಳಿದರು.
