ಬೆಂಗಳೂರು,ಮೇ24-ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಂಚ ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ಅಂತಿಮ ಗಡುವು ನೀಡಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಚುನಾವಣಾ ಪೂರ್ವ ಸಿದ್ಧತೆ ಆರಂಭಿಸಿದೆ. ಪಕ್ಷದ ಗ್ರೇಟರ್ ಬೆಂಗಳೂರು ಅಧ್ಯಕ್ಷ ಹೆಚ್. ಎಂ. ರಮೇಶ್ಗೌಡ ಅಧ್ಯಕ್ಷತೆಯಲ್ಲಿ ಜಿಬಿಎ ವ್ಯಾಪ್ತಿಯ ಪಕ್ಷದ ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರು, ವಿವಿಧ ವಿಭಾಗಗಳ ಅಧ್ಯಕ್ಷರು ಮತ್ತು ಬಿಎಲ್ಎ ಗಳ ಸಭೆಯನ್ನು ನಾಳೆ ಬೆಳಿಗ್ಗೆ 11.30 ಗಂಟೆಗೆ ಜೆಡಿಎಸ್ ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಕರೆಯಲಾಗಿದೆ.
ಈ ಸಭೆಯಲ್ಲಿ ಶಾಸಕರು, ಮಾಜಿ ಶಾಸಕರು ಹಾಗೂ ಜಿಬಿಎ ನಗರ ಪಾಲಿಕೆವಾರು ಜಿಲ್ಲಾಧ್ಯಕ್ಷರುಗಳು ಭಾಗವಹಿಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಪಂಚ ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿ ಪ್ರಮುಖರಿಗೆ ಜವಾಬ್ದಾರಿಯನ್ನು ನೀಡಲಾಗುತ್ತದೆ. ಪಕ್ಷ ಸಂಘಟನೆಯ ಜತೆಗೆ ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಜನಾಂದೋಲನ ಮಾಡುವುದು ಹಾಗೂ ವಾರ್ಡ್ವಾರು ಅಭ್ಯರ್ಥಿಗಳನ್ನು ಗುರುತಿಸುವ ಬಗ್ಗೆ ಸಭೆಯಲ್ಲಿ ಗಂಭೀರ ಸಮಾಲೋಚನೆ ನಡೆಸಲಾಗುತ್ತದೆ.
ಜಿಬಿಎ ಚುನಾವಣೆಯಲ್ಲೂ ಬಿಜೆಪಿ ಜೊತೆ ಮೈತ್ರಿ ಮುಂದುವರೆದರೆ ಯಾವ ಯಾವ ವಾರ್ಡ್ಗಳನ್ನು ಉಳಿಸಿಕೊಳ್ಳಬೇಕು ಎಂಬೆಲ್ಲಾ ವಿಚಾರದ ಬಗ್ಗೆ ಚರ್ಚೆಸಿ, ಸೂಕ್ತ ತೀರ್ಮಾನ ಕೈಗೊಂಡು ರಾಜ್ಯ ಘಟಕ್ಕೆ ವರದಿ ನೀಡುವ ಸಾಧ್ಯತೆಗಳಿವೆ. ಈ ಸಂದರ್ಭದಲ್ಲಿ ಬೆಂಗಳೂರು ನಗರದ ವಿಭಾಗಗಳ ಅಧ್ಯಕ್ಷರುಗಳಿಗೆ ಆಯಾ ವಿಭಾಗಗಳ ಜಿ.ಬಿ.ಎ. ಅಧ್ಯಕ್ಷರುಗಳಿಗೆ ನೇಮಕಾತಿ ಆದೇಶ ಪತ್ರವನ್ನು ನೀಡಲಾಗುತ್ತದೆ ಎಂದು ಜೆಡಿಎಸ್ ತಿಳಿಸಿದೆ.
