ಬೆಂಗಳೂರು,ಜೂ.16- ವಿಜಯಪುರ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ನೀಡಬೇಕು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯಲ್ಲಿ ಐವರು ಶಾಸಕರಿದ್ದು, ಇಂತವರಿಗೆ ಸಚಿವ ಸ್ಥಾನ ಕೊಡಿ ಎಂದು ಹೇಳುವುದಿಲ್ಲ. ಯಾರಿಗೆ ಸಚಿವ ಸ್ಥಾನ ನೀಡಬೇಕೆಂಬುದು ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ. ಕೇಳುವುದು ಮಾತ್ರ ನಮ ಕರ್ತವ್ಯ ಎಂದರು.
ಎಲ್ಲಾ ಶಾಸಕರೂ ಸಚಿವರಾಗಲು ಅರ್ಹರಿದ್ದು, ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ. ಸಚಿವಾಕಾಂಕ್ಷಿಗಳು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಡುವುದು ತಪ್ಪಿಲ್ಲ. ಇದರ ಬಗ್ಗೆ ಹೈಕಮಾಂಡ್ ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ ಎಂದು ಹೇಳಿದರು.
ಬೆಂಗಳೂರು ಅಭಿವೃದ್ಧಿ ಸಚಿವ ಶಿಸ್ತಿನ ಸಿಪಾಯಿಯಾಗಿದ್ದು, ಮಂತ್ರಿ ಮಾಡದಿದ್ದರೂ ಪರವಾಗಿಲ್ಲ ಎಂದಿದ್ದರು. ಅಸಮಾಧಾನದ ವಿಚಾರದ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದರು.
ಮೃತಪಟ್ಟವರಿಗೆ, ಅನರ್ಹರಿಗೆ ಗ್ಯಾರಂಟಿ ಯೋಜನೆ ಫಲ ದೊರೆಯುವುದನ್ನು ತಪ್ಪಿಸಲು ಪರಿಷ್ಕರಣೆ ಮಾಡಲಾಗುತ್ತಿದೆ. ಬಿಜೆಪಿಯವರು ನಮ ಗ್ಯಾರಂಟಿ ವಿರೋಧಿಸುತ್ತಾ ಬೇರೆ ರಾಜ್ಯಗಳಲ್ಲಿ ಅದನ್ನು ಜಾರಿ ಮಾಡಿದ್ದಾರೆ ಎಂದು ಆರೋಪಿಸಿದರು.
ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಲು ಪ್ರಧಾನಿಯವರನ್ನು ಬಿಜೆಪಿಯವರು ಆಗ್ರಹಿಸಲಿ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆಗಳು ಹೆಚ್ಚಾಗಿವೆ. ಅಚ್ಚೇ ದಿನ್ ಇನ್ನೂ ಬಂದಿಲ್ಲ ಎಂದು ಟೀಕಿಸಿದರು.
ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಐವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ನಮಗೆ ಯಾವುದೇ ರೀತಿಯ ಆತಂಕ ಇಲ್ಲ. ಅದು ಬೇರೆಯವರಿಗೆ ಇರಬೇಕು. 10 ರಿಂದ 15 ಶಾಸಕರು ಕೇಂದ್ರ ಸಚಿವ ಕುಮಾರಸ್ವಾಮಿಯವರ ಸಂಪರ್ಕದಲ್ಲಿದ್ದಾರೆ ಎಂಬ ಊಹಾಪೋಹ ಹಬ್ಬಿಸುವ ಕೆಲಸವಾಗುತ್ತಿದೆ. ಇದು ರಿವರ್ಸ್ ಆಗಿರಬೇಕು ಎಂದರು.
ಇಂದು ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಚುನಾವಣೆ ಕುರಿತಂತೆ ಚರ್ಚೆ ಮಾಡುತ್ತೇವೆ. ನಮಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಯುವಕರಿಗೆ ಅವಕಾಶ ಮಾಡಿಕೊಡಿ ಎಂದು ಹೈಕಮಾಂಡ್ ಹೇಳಿತ್ತು. ಅದರಂತೆ ನಡೆದುಕೊಂಡಿದ್ದಾರೆ. ರಾಜೀನಾಮೆ ನಂತರ ಅವರ ವರ್ಚಸ್ಸು ವೃದ್ಧಿಸಿದೆ ಎಂದು ಪಾಟೀಲ್ ಹೇಳಿದರು.
