Homeಬೆಂಗಳೂರುಬೆಂಗಳೂರಿನಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ಅಪಘಾತಗಳಲ್ಲಿ ಮೂವರ ಸಾವು

ಬೆಂಗಳೂರಿನಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ಅಪಘಾತಗಳಲ್ಲಿ ಮೂವರ ಸಾವು

Three people killed in three separate accidents in Bengaluru

ಬೆಂಗಳೂರು,ಜೂ.22- ನಗರದಲ್ಲಿ ತಡರಾತ್ರಿಯಿಂದೀಚೆಗೆ ಸಂಭವಿಸಿದ ಮೂರು ಪ್ರತ್ಯೇಕ ಅಪಘಾತಗಳಲ್ಲಿ ಸೆಕ್ಯೂರಿಟಿ ಗಾರ್ಡ್‌ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.

ಉದ್ಯೋಗಿ ಸಾವು:
ಟಿಟಿ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಕಂಪನಿ ಉದ್ಯೋಗಿ ಮೃತಪಟ್ಟಿರುವ ಘಟನೆ ಪೀಣ್ಯ ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ.ಮಂಜುನಾಥನಗರದ ನಿವಾಸಿ ಗೌರಿಶಂಕರ (34) ಮೃತಪಟ್ಟ ಬೈಕ್‌ ಸವಾರ.

ಇಂದು ಬೆಳಗಿನ ಜಾವ 4.45 ರ ಸುಮಾರಿನಲ್ಲಿ ಗೌರಿ ಶಂಕರ ಅವರಿ ಬೈಕ್‌ನಲ್ಲಿ ಯಶವಂತಪುರ ಹೆಚ್‌ಎಂಟಿ ಲೇಔಟ್‌ನ ಸೂಪರ್‌ ಮಾರ್ಕೆಟ್‌ ಸರ್ಕಲ್‌ ಬಳಿ ಹೋಗುತ್ತಿದ್ದಾಗ ಅತಿ ವೇಗವಾಗಿ ಬಂದ ಟಿಟಿ ವಾಹನ ಡಿಕ್ಕಿ ಹೊಡೆದು ಬೈಕನ್ನು ಸ್ವಲ್ಪ ದೂರ ಎಳೆದೊಯ್ದ ಪರಿಣಾಮ ಅವರು ಗಂಭೀರ ಗಾಯಗೊಂಡರು.

ದಾರಿಹೋಕರು ಗಮನಿಸಿ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಪರೀಕ್ಷಿಸಿ ಮಾರ್ಗಮಧ್ಯೆ ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ. ಸುದ್ದಿ ತಿಳಿದು ಪೀಣ್ಯ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಸಪ್ತಗಿರಿ ಆಸ್ಪತ್ರೆಗೆ ರವಾನಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಸೆಕ್ಯೂರಿಟಿ ಗಾರ್ಡ್‌ ಸಾವು:
ರಸ್ತೆ ದಾಟುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ಗೆ ವಾಟರ್‌ಟ್ಯಾಂಕ್‌ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಟ್ಟಿರುವ ಘಟನೆ ವೈಟ್‌ಫೀಲ್‌್ಡ ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ನೇಪಾಳ ಮೂಲದ ಕಪೇಂದ್ರ ಮಾಜೆ (39) ಮೃತಪಟ್ಟವರು.

ವರ್ತೂರಿನಲ್ಲಿ ವಾಸವಾಗಿದ್ದ ಇವರು ರಾತ್ರಿ ಕೆಲಸ ಮುಗಿಸಿಕೊಂಡು ವರ್ತೂರು-ಗುಂಜೂರು ಮುಖ್ಯ ರಸ್ತೆಯ ಗಾಂಧಿ ಸರ್ಕಲ್‌ ಹತ್ತಿರ ರಾತ್ರಿ 8 ಗಂಟೆ ಸುಮಾರಿನಲ್ಲಿ ರಸ್ತೆ ದಾಟುತ್ತಿದ್ದರು. ಅದೇ ಸಮಯದಲ್ಲಿ ವರ್ತೂರು ಕಾಲೇಜ್‌ ಕಡೆಗೆ ಹೋಗುತ್ತಿದ್ದ ವಾಟರ್‌ ಟ್ಯಾಂಕ್‌ ಇವರಿಗೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಅವರ ಮೇಲೆಯೇ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡರು.

ತಕ್ಷಣ ವಾಟರ್‌ ಟ್ಯಾಂಕ್‌ ಚಾಲಕ ಸಾರ್ವಜನಿಕರ ಸಹಾಯದಿಂದ ಆಸ್ಪತ್ರೆಗೆ ಕರೆದೊಯ್ದರಾದರೂ ವೈದ್ಯರು ಪರೀಕ್ಷಿಸಿ ಮಾರ್ಗಮಧ್ಯೆ ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ. ಈ ಬಗ್ಗೆ ವೈಟ್‌ಫೀಲ್‌್ಡ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಾಟರ್‌ ಟ್ಯಾಂಕರ್‌ ವಾಹನದ ಚಾಲಕ ಪದತಾಪ (32) ಎಂಬಾತನ ಮೇಲೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ವಯಂ ಅಪಘಾತ:
ಅತಿ ವೇಗವಾಗಿ ಹೋಗುತ್ತಿದ್ದ ಸ್ಕೂಟರ್‌ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಕೆಆರ್‌ಪುರ ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಕನ್ನಮಂಗಲ ನಿವಾಸಿ ರಾಜೇಂದ್ರ (60) ಮೃತಪಟ್ಟ ಸ್ಕೂಟರ್‌ ಸವಾರ. ಇಂದು ಬೆಳಗ್ಗೆ 8 ಗಂಟೆ ಸುಮಾರಿನಲ್ಲಿ ರಾಜೇಂದ್ರ ಅವರು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ಆವಲಹಳ್ಳಿ-ಸ್ಕೈವಾಕ್‌ ಬಳಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದು, ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.ಸುದ್ದಿ ತಿಳಿದು ಕೆಆರ್‌ಪುರ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News