ಬೆಂಗಳೂರು,ಜೂ.29- ರಾಜ್ಯ ಸರ್ಕಾರ ಮೇ ಅಂತ್ಯದೊಳಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸುವುದಾಗಿ ಘೋಷಿಸಿದ್ದರೂ, ಕರ್ನಾಟಕದ ಸರ್ಕಾರಿ ಪದವಿಪೂರ್ವ ಕಾಲೇಜುಗಳ (ಪಿಯುಸಿ) ಸಾವಿರಾರು ವಿದ್ಯಾರ್ಥಿಗಳಿಗೆ ಇನ್ನೂ ಪುಸ್ತಕಗಳು ಲಭ್ಯವಾಗಿಲ್ಲ. ಶೈಕ್ಷಣಿಕ ವರ್ಷ ಆರಂಭವಾಗಿ ಹಲವು ವಾರಗಳೇ ಕಳೆದರೂ ವಿದ್ಯಾರ್ಥಿಗಳು ಪಾಠ ಕಲಿಯಲು ಸಮಸ್ಯೆ ಅನುಭವಿಸುತ್ತಿದ್ದಾರೆ. ರಾಜ್ಯ ಸರ್ಕಾರ ಇದೂವರೆಗೆ 1ರಿಂದ 10ನೇ ತರಗತಿವರೆಗೆ ಮಾತ್ರ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಿದೆ. ಪಿಯುಸಿ ಪುಸ್ತಕಗಳ ವಿತರಣೆಯಲ್ಲಿ ವಿಳಂಬವಾಗಿದೆ.
ಬೆಂಗಳೂರು, ಯಾದಗಿರಿ, ಹಾಸನ, ತುಮಕೂರು, ಮೈಸೂರು, ಬಳ್ಳಾರಿ ಹಾಗೂ ರಾಯಚೂರು ಸೇರಿದಂತೆ ಕನಿಷ್ಠ ಏಳು ಜಿಲ್ಲೆಗಳ ಸರ್ಕಾರಿ ಪಿಯು ಕಾಲೇಜುಗಳಿಗೆ ಭಾಗಶಃ ಪುಸ್ತಕಗಳು ಮಾತ್ರ ತಲುಪಿವೆ. ಬಂದಿರುವ ಪುಸ್ತಕಗಳು ವಿದ್ಯಾರ್ಥಿಗಳಿಗೆ ಸಾಕಾಗುತ್ತಿಲ್ಲ. ಪಿಯು ಶಿಕ್ಷಣ ಅತ್ಯಂತ ಮಹತ್ವದ ಹಂತವಾಗಿದೆ.
ಶ್ರೀಮಂತ ಕುಟುಂಬಗಳ ವಿದ್ಯಾರ್ಥಿಗಳು ಖಾಸಗಿ ಸಂಪನೂಲಗಳು, ಡಿಜಿಟಲ್ ಸಾಧನಗಳು ಮತ್ತು ಇತರ ಅಧ್ಯಯನ ಸಾಮಗ್ರಿಗಳನ್ನು ಬಳಸಿಕೊಳ್ಳಬಹುದು. ಆದರೆ ಬಡ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳೇ ಪ್ರಮುಖ ಕಲಿಕಾ ಸಾಧನ. ಆದ್ದರಿಂದ ಮುಖ್ಯಮಂತ್ರಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂಬುದು ವಿದ್ಯಾರ್ಥಿಗಳ ಆಳಲು.
ಈ ವಿಳಂಬವು ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಆರ್ಥಿಕವಾಗಿ ಸದೃಢವಾಗಿರುವ ಕುಟುಂಬಗಳ ಮಕ್ಕಳು ಖಾಸಗಿ ಕಾಲೇಜುಗಳಲ್ಲಿ ಓದುತ್ತಾರೆ. ಆದರೆ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳು ಮೊಬೈಲ್ ಫೋನ್ ಮತ್ತು ಉಚಿತ ಪಠ್ಯಪುಸ್ತಕಗಳನ್ನೇ ಅವಲಂಬಿಸಬೇಕಾದ ಪರಿಸ್ಥಿತಿಯಲ್ಲಿದ್ದಾರೆ.
ಸರ್ಕಾರದ ಈ ನಿರ್ಲಕ್ಷ್ಯ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದೊಡ್ಡ ಹೊಡೆತ ನೀಡುತ್ತಿದೆ/ಇಂತಹ ನಿರ್ಲಕ್ಷ್ಯದಿಂದ ರಾಜ್ಯದಲ್ಲಿ ಶಿಕ್ಷಣದ ಖಾಸಗೀಕರಣಕ್ಕೆ ಮತ್ತಷ್ಟು ಉತ್ತೇಜನ ಸಿಗುವ ಅಪಾಯವಿದೆ ಎಂದೂ ಅನೇಕ ವಿದ್ಯಾರ್ಥಿಗಳು ಕಳವಳ ವ್ಯಕ್ತಪಡಿಸಿದ್ದಾರೆ.
