ಜೈಪುರ, ಜು. 13- ವೇಗವಾಗಿ ಚಲಿಸುತ್ತಿದ್ದ ಕಾರೊಂದು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಬಾಲೋತ್ರಾ ಜಿಲ್ಲೆಯಲ್ಲಿ ನಡೆದಿದೆ.ಬಾರ್ರ್ಮೇಜೋಧ್ಪುರ ರಾಷ್ಟ್ರೀಯ ಹೆದ್ದಾರಿಯ ಭಡಿಯಾವಾಸ್ ಗ್ರಾಮದ ಸಮೀಪ ತಡರಾತ್ರಿ ಈ ಅಪಘಾತ ಸಂಭವಿಸಿದೆ.
ಮುಂದೆ ಸಾಗುತ್ತಿದ್ದ ಲಾರಿಗೆ ಎಸ್ಯುವಿ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರೊಳಗೆ ಪ್ರಯಾಣಿಕರು ಸಿಲುಕಿಕೊಂಡಿದ್ದರು. ಸಹಾಯಕ್ಕಾಗಿ ಕೇಳಿಬಂದ ಕಿರುಚಾಟವನ್ನು ಕೇಳಿದ ದಾರಿಹೋಕರು ಸ್ಥಳಕ್ಕೆ ಧಾವಿಸಿ, ಪೊಲೀಸರು ಬರುವ ಮುನ್ನವೇ ಗಾಯಾಳುಗಳನ್ನು ಹೊರತೆಗೆದರು.
ಗಾಯಾಳುಗಳು ಹಾಗೂ ಅಪಘಾತಕ್ಕೊಳಗಾದ ಎಲ್ಲರನ್ನು ಬಾಲೋತ್ರಾದ ನಹಾಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ವೈದ್ಯರು ಮೂವರನ್ನು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.
ಗಂಭೀರವಾಗಿ ಗಾಯಗೊಂಡಿದ್ದ ಐವರನ್ನು ಹೆಚ್ಚಿನ ಚಿಕಿತ್ಸೆಗೆ ಜೋಧ್ಪುರದ ಆಸ್ಪತ್ರೆಗೆ ರವಾನಿಸಲಾಗಿತ್ತು. ಅವರಲ್ಲಿ ಇಬ್ಬರು ಚಿಕಿತ್ಸೆಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಉಳಿದ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
