ಬೆಂಗಳೂರು, ಜು.13- ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸ್ವದೇಶಕ್ಕೆ ಮರಳಿದ ಬೆನ್ನಲ್ಲೇ ಸಚಿವಾಕಾಂಕ್ಷಿಗಳ ಚಟುವಟಿಕೆಗಳು ಗರಿಗೆದರಿವೆ. ರಾಹುಲ್ ಗಾಂಧಿ ಇಂದು ಅಥವಾ ನಾಳೆ ರಾಜ್ಯದ ನಾಯಕರನ್ನು ದೆಹಲಿಗೆ ಕರೆಸಬಹುದು ಎಂಬ ಅಂದಾಜಿನಲ್ಲಿ ರಾಜ್ಯದ ಕೆಲ ಶಾಸಕರು ದೆಹಲಿಯತ್ತ ಮುಖ ಮಾಡಿದ್ದಾರೆ.
ಕರ್ನಾಟಕ ಭವನದಲ್ಲಿ ಕೊಠಡಿಗಳಿಗೆ ಬೇಡಿಕೆ ಹೆಚ್ಚಾಗಿದೆ. ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಯಾವುದೇ ಕ್ಷಣದಲ್ಲಿ ದೆಹಲಿಗೆ ಭೇಟಿ ನೀಡಬಹುದಾದ ಸಾಧ್ಯತೆ ಇರುವುದರಿಂದ ಅವರನ್ನು ಭೇಟಿ ಮಾಡಲು ಅನುಕೂಲವಾಗುವಂತೆ ಕೆಲ ಶಾಸಕರು ದೆಹಲಿಗೆ ತೆರಳುತ್ತಿದ್ದಾರೆ. ಸಂಪುಟದಲ್ಲಿ 20 ಸ್ಥಾನಗಳು ಖಾಲಿಯಿದ್ದು, ಅವುಗಳಿಗೆ ಸುಮಾರು 60 ಕ್ಕೂ ಹೆಚ್ಚು ಶಾಸಕರು ಆಕಾಂಕ್ಷಿಗಳಾಗಿದ್ದಾರೆ, 20ಕ್ಕೂ ಹೆಚ್ಚು ಮಂದಿ ಹೊಸ ಶಾಸಕರು,
40ಕ್ಕೂ ಹೆಚ್ಚು ಹಿರಿಯ ಶಾಸಕರು ಹಾಗೂ ನಾಲ್ಕೈದು ಮಂದಿ ವಿಧಾನಪರಿಷತ್ ಸದಸ್ಯರು ಸಂಪುಟ ಸೇರಲು ಲಾಬಿ ನಡೆಸುತ್ತಿದ್ದಾರೆ.ಮೊದಲ ಹಂತದ ಸಂಪುಟದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿದರೆ, ಉಳಿದ ಎಲ್ಲರೂ ಮರಳಿ ಅವಕಾಶ ಪಡೆದವರೇ ಆಗಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯ ಅವರ ಸಂಪುಟ ರಚನೆಯಾಗುವ ವೇಳೆ ಎರಡೂವರೆ ವರ್ಷದ ಬಳಿಕ ಹಳಬರನ್ನು ಬದಿಗಿಟ್ಟು ಹೊಸಬರಿಗೂ ಅವಕಾಶ ಕಲ್ಪಿಸುವುದಾಗಿ ಹೈಕಮಾಂಡ್ ಭರವಸೆ ನೀಡಿತ್ತು. ಆದರೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ, ಬದಲಾಗಿ ಪ್ರಭಾವಕ್ಕೆ ಮಣಿದು ಹಳಬರಿಗೆ ಅವಕಾಶ ನೀಡಲಾಗುತ್ತಿದೆ. ಪಕ್ಷಕ್ಕಾಗಿ ನಿಷ್ಠೆಯಿಂದ ಕೆಲಸ ಮಾಡಿದವರು ಅವಕಾಶಕ್ಕಾಗಿ ಅಂಗಲಾಚುವ ಪರಿಸ್ಥಿತಿ ಬಂದಿದೆ ಎಂದು ಸಿಡಿಮಿಡಿಗಳು ವ್ಯಕ್ತವಾಗುತ್ತಿದೆ.
ಬಾಕಿಯಿರುವ ಎರಡು ವರ್ಷಗಳಿಗಾದರೂ ಹೇಗಾದರೂ ಮಾಡಿ ಸಚಿವ ಸ್ಥಾನ ಗಿಟ್ಟಿಸಲೇಬೇಕೆಂದು ಕೆಲವರು ಹಠಕ್ಕೆ ಬಿದ್ದು, ವರಿಷ್ಠರ ಬೆನ್ನು ಬಿದ್ದಿದ್ದಾರೆ. ರಾಹುಲ್ ಗಾಂಧಿ ಸ್ವದೇಶಕ್ಕೆ ಮರಳಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ, ಈ ಕುರಿತು ಅಧಿಕೃತ ಮಾಹಿತಿಗಳು ಖಚಿತಗೊಂಡಿಲ್ಲ. ಆದರೂ ಕೆಲ ಶಾಸಕರು ದೆಹಲಿಗೆ ತೆರಳಿ ಲಾಬಿ ನಡೆಸುತ್ತಿದ್ದಾರೆ.
