ಬೆಂಗಳೂರು, ಜು.16- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಧರ್ಮ ಪತ್ನಿ ಚನ್ನಮ ದೇವೇಗೌಡ ಅವರನ್ನು ನಿನ್ನೆ ರಾತ್ರಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಯೋ ಸಹಜ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗುಣಮುಖರಾಗುತ್ತಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಚನ್ನಮ ದೇವೇಗೌಡರ ಆರೋಗ್ಯ ಸುಧಾರಿಸುತ್ತಿದ್ದು, ಒಂದೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಲಿದ್ದಾರೆ ಎಂದು ಮೂಲಗಳು ಹೇಳಿವೆ. ಕಫದ ಸಮಸ್ಯೆಯಿಂದ ಚನ್ನಮ ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆಯಾಗುತ್ತಿದೆ. ಚಿಕಿತ್ಸೆಗೆ ಅವರು ಉತ್ತಮ ರೀತಿಯಲ್ಲಿ ಸ್ಪಂಧಿಸುತ್ತಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಆಸ್ಪತ್ರೆಯ ತಜ್ಞ ವೈದ್ಯರಾದ ಡಾ.ಸತ್ಯನಾರಾಯಣ ಹಾಗೂ ಡಾ.ಸನೀಲ್ ಕಾರಂತ್ ಅವರ ನೇತೃತ್ವದ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ರಾತ್ರಿ ದೇವೇಗೌಡರು ಆಸ್ಪತ್ರೆಗೆ ಭೇಡಿ ನೀಡಿ ಚನ್ನಮ ಅವರಿಗೆ ನೀಡುತ್ತಿರುವ ಚಿಕಿತ್ಸೆ ಹಾಗೂ ಅವರ ಆರೋಗ್ಯ ವಿಚಾರಿಸಿದ್ದರು.
