ತಿ.ನರಸೀಪುರ.ಜು.23-ತಾಲೂಕಿನ ತುಂಬಲ -ಕೆಂಪಯ್ಯನಹುಂಡಿ ರಸ್ತೆಯಲ್ಲಿ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಮರ್ಮಾಂಗ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಚ್ಚಿ ಬೀಳಿಸಿದೆ. ಹತ್ಯೆ ಮಾಡಿದ ಆರೋಪಿಯೇ ಸ್ವತಃ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಮಾಹಿತಿ ನೀಡಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ.
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಉಗನಿಯಪಾಳ್ಯ ಗ್ರಾಮದ ನಿವಾಸಿ ಗೋವಿಂದ(30) ಹತ್ಯೆಗೊಳಗಾಗಿದ್ದು, ಅದೇ ಗ್ರಾಮದ ಪ್ರಸನ್ನ ಎಂಬಾತ ಹತ್ಯೆ ಮಾಡಿರುವುದಾಗಿ ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.
ಕೊಲೆ ಆರೋಪಿ ಪ್ರಸನ್ನ ಹತ್ಯೆ ಮಾಡಿದ ಬಳಿಕ ಪೊಲೀಸ್ಕಂಟ್ರೋಲ್ ರೂಂಗೆ ಕರೆ ಮಾಡಿ ನಾನು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದೇನೆ. ಮೃತದೇಹ ತಾಲೂಕಿನ ತುಂಬಲ-ಕೆಂಪಯ್ಯನಹುಂಡಿ ರಸ್ತೆಯಲ್ಲಿದೆ. ನನ್ನನ್ನು ಕರೆದುಕೊಂಡು ಹೋದ ಬಳಿಕ ನಿಮಗೆ ಎಲ್ಲಾ ಮಾಹಿತಿ ತಿಳಿಸುತ್ತೇನೆ ಎಂದು ಹೇಳಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಶವ ಜಮೀನೊಂದರಲ್ಲಿ ಪತ್ತೆಯಾಗಿದೆ. ಬಳಿಕ ಪ್ರಕರಣದ ಗಂಭೀರತೆ ಅರಿತು ಜಿಲ್ಲಾ ಪೊಲೀಸ್ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ಮಾಹಿತಿ ನೀಡಲಾಯಿತು. ಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಮಾಹಿತಿ ಸಂಗ್ರಹಿಸಿದ್ದಾರೆ.
ಬಳಿಕ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಡಿವೈಎಸ್ಪಿ ರಘು, ಸರ್ಕಲ್ ಇನ್ಸ್ಪೆಕ್ಟರ್ ಧನಂಜಯ, ಎಸ್ಐ ಮಲ್ಲೇಶ್ ಹಾಗೂ ಸಿಬ್ಬಂದಿ ಸ್ಥಳದಲ್ಲಿದ್ದರು.
