ಬೆಂಗಳೂರು, ಜು.23- ರಸ್ತೆ ಬದಿ ಹಾಗೂ ಫುಟ್ಪಾತ್ಗಳಲ್ಲಿ ವರ್ಷಗಳಿಂದ ಬಿದ್ದಿರುವ ಅನಾಥ ವಾಹನಗಳನ್ನು ತೆರವುಗೊಳಿಸುವ ಕಾರ್ಯಚರಣೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ.ಕಳೆದ ವಾರ ಬೆಂಗಳೂರು ಉಸ್ತುವಾರಿ ಸಚಿವರ ಸೂಚನೆಯ ಮೇರೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಆರಂಭಿಸಿದ್ದ ಕಾರ್ಯಾಚರಣೆ ಇದೀಗ ಜಾಗದ ಕೊರತೆಯಿಂದ ಸ್ಥಗಿತಗೊಂಡಿದೆ.
ರಸ್ತೆ ಹಾಗೂ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿದ್ದ ಅನಾಥ ವಾಹನಗಳನ್ನು ತೆರವುಗೊಳಿಸಿ ವಶಕ್ಕೆ ಪಡೆಯುವಂತೆ ಸೂಚನೆ ನೀಡಲಾಗಿತ್ತು. ಆದರೆ ತೆರವುಗೊಳಿಸಿದ ವಾಹನಗಳನ್ನು ಸುರಕ್ಷಿತವಾಗಿ ಡಂಪ್ ಮಾಡಲು ಸೂಕ್ತ ಸ್ಥಳದ ವ್ಯವಸ್ಥೆ ಇಲ್ಲದಿರುವುದು ಕಾರ್ಯಾಚರಣೆಗೆ ಪ್ರಮುಖ ಅಡ್ಡಿಯಾಗಿದೆ.ಕಾರ್ಯಾಚರಣೆಯ ಮೊದಲ ದಿನ ಕೆಲವೇ ವಾಹನಗಳನ್ನು ತೆರವುಗೊಳಿಸಿದ ನಗರಪಾಲಿಕೆಗಳು, ಬಳಿಕ ಕಾರ್ಯವನ್ನು ಮುಂದುವರಿಸಲು ಸಾಧ್ಯವಾಗದೆ ಹಿಂಜರಿದಿವೆ.
ಪ್ರಸ್ತುತ ಐದು ನಗರಪಾಲಿಕೆಗಳ ವ್ಯಾಪ್ತಿಯಲ್ಲೂ ಅನಾಥ ವಾಹನಗಳ ತೆರವು ಕಾರ್ಯಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ವಾಹನಗಳನ್ನು ಸಂಗ್ರಹಿಸಲು ಸೂಕ್ತ ಜಾಗ ಗುರುತಿಸುವ ಕೆಲಸ ನಡೆಯುತ್ತಿದ್ದು, ಜಾಗ ದೊರೆತ ನಂತರವೇ ಕಾರ್ಯಾಚರಣೆ ಮರುಪ್ರಾರಂಭವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನೂಜಿಬಿಎ ಅಧಿಕಾರಿಗಳ ಪ್ರಕಾರ, ವಾಹನಗಳನ್ನು ತೆರವುಗೊಳಿಸುವುದಕ್ಕಿಂತ ಅವುಗಳನ್ನು ಕಾನೂನುಬದ್ಧವಾಗಿ ಸಂಗ್ರಹಿಸಿ ನಿರ್ವಹಿಸುವುದೇ ದೊಡ್ಡ ಸವಾಲಾಗಿದ್ದು, ಈ ಸಮಸ್ಯೆ ಬಗೆಹರಿಯುವವರೆಗೆ ಅನಾಥ ವಾಹನಗಳ ತೆರವು ಕಾರ್ಯಾಚರಣೆ ಸ್ಥಗಿತವಾಗಿರಲಿದೆ ಎಂದು ತಿಳಿಸಿದ್ದಾರೆ.
