Homeರಾಷ್ಟ್ರೀಯನೀಟ್‌ ಗೊಂದಲ : ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಎಚ್ಚರಿಕೆ

ನೀಟ್‌ ಗೊಂದಲ : ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಎಚ್ಚರಿಕೆ

"Can't Let This Go On Like This": Supreme Court To Centre On NEET Paper Leak Row

ನವದೆಹಲಿ,ಜು.24- ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌-ಯುಜಿ ಸುತ್ತಲಿನ ಅಕ್ರಮ, ಗೊಂದಲಗಳ ಸರಣಿಯನ್ನು ತಕ್ಷಣವೇ ಕೊನೆಗೊಳಿಸಬೇಕೆಂದು ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಖಡಕ್‌ ಸೂಚನೆ ನೀಡಿದೆ.ನಾವು ಈ ವ್ಯವಸ್ಥೆಯನ್ನು ಹೀಗೆಯೇ ಮುಂದುವರಿಯಲು ಬಿಡುವುದಿಲ್ಲ ಎಂದು ಎಚ್ಚರಿಸಿರುವ ನ್ಯಾಯಾಲಯ, ಪರೀಕ್ಷಾ ಅಕ್ರಮಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಆಡಳಿತಕ್ಕೆ ನಿರ್ದೇಶಿಸಿದೆ.

ನ್ಯಾಯಮೂರ್ತಿಗಳಾದ ಪಿ.ಎಸ್‌‍.ನರಸಿಂಹ ಮತ್ತು ಅಲೋಕ್‌ ಆರಾಧೆ ಅವರಿದ್ದ ಪೀಠವು ವಿಚಾರಣೆ ನಡೆಸಿದ್ದು, ಪರೀಕ್ಷಾ ಅಕ್ರಮ ತಡೆಯುವ ಪ್ರಕ್ರಿಯೆಯನ್ನು ನ್ಯಾಯಾಲಯವು ಬಹಳ ನಿಕಟವಾಗಿ ಮೇಲ್ವಿಚಾರಣೆ ಮಾಡಲಿದೆ ಮತ್ತು ನಿಯಮಿತವಾಗಿ ಪರಿಶೀಲಿಸಲಿದೆ ಎಂದು ಸ್ಪಷ್ಟಪಡಿಸಿದೆ.ಪರೀಕ್ಷೆಯನ್ನು ಸಂಪೂರ್ಣವಾಗಿ ಆನ್‌ಲೈನ್‌ ಅಥವಾ ಕಂಪ್ಯೂಟರ್‌ ಆಧಾರಿತ ಪರೀಕ್ಷೆಗೆ ಬದಲಾಯಿಸುವ ಯೋಜನೆಯ ಕುರಿತು ಕೇಂದ್ರದಿಂದ ಸುಪ್ರೀಂಕೋರ್ಟ್‌ ವಿವರಣೆ ಕೇಳಿದೆ.

ಪರೀಕ್ಷೆಯನ್ನು ಸಂಪೂರ್ಣ ಆನ್‌ಲೈನ್‌ ಮೋಡ್‌ಗೆ ಬದಲಾಯಿಸಲು ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳೇನು? ಡೇಟಾ ಸುರಕ್ಷತೆ: ಕಂಪ್ಯೂಟರ್‌ ಆಧಾರಿತ ಪರೀಕ್ಷೆಗೆ ಬದಲಾಯಿಸಿದಾಗ ಅಭ್ಯರ್ಥಿಗಳ ಡೇಟಾ ಹಾಗೂ ಪ್ರಶ್ನೆ ಪತ್ರಿಕೆಯ ಭದ್ರತೆಯನ್ನು ಹೇಗೆ ಕಾಪಾಡುತ್ತೀರಿ? ಪ್ರಕ್ರಿಯೆಯ ಪ್ರತಿಯೊಂದು ಹಂತವೂ ಸಾಂಸ್ಥಿಕವಾಗಿ ಮತ್ತು ಪಾರದರ್ಶಕವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳುವುದು ನ್ಯಾಯಾಲಯದ ಮುಖ್ಯ ಉದ್ದೇಶವಾಗಿದೆ.

ಇದಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರದ ಪರ ಭಾರತದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ವಿದ್ಯಾರ್ಥಿಗಳ ಹಿತರಕ್ಷಣೆ ಮತ್ತು ಅವರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ 10 ಹೆಜ್ಜೆ ಹೆಚ್ಚುವರಿಯಾಗಿಡಲು ಸಿದ್ಧವಿದೆ ಎಂದು ಪೀಠಕ್ಕೆ ತಿಳಿಸಿ, ಪ್ರಕರಣದ ಕುರಿತು ಸುಪ್ರೀಂಕೋರ್ಟ್‌ಗೆ ಸಾಕ್ಷ್ಯಾಧಾರಿತ ಹಾಗೂ ಸಮಗ್ರ ದೃಷ್ಟಿಕೋನ ವನ್ನು ಮಂಡಿಸಲು ನ್ಯಾಯಾಲಯದಿಂದ ಸ್ವಲ್ಪ ಕಾಲಾವಕಾಶ ಕೋರಿದರು.

ಸುಪ್ರೀಂ ಕೋರ್ಟ್‌ ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 27ಕ್ಕೆ ನಿಗದಿಪಡಿಸಿದೆ.ಒಂದೆಡೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದರೆ, ಇನ್ನೊಂದೆಡೆ ದೆಹಲಿಯ ಬೀದಿಗಳಲ್ಲಿ ಪ್ರತಿಭಟನೆ ಕಾವು ಪಡೆದುಕೊಂಡಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರ ರಾಜೀನಾಮೆಗೆ ಒತ್ತಾಯಿಸಿ ಜಂತರ್‌ ಮಂತರ್‌ನಲ್ಲಿ ವಿದ್ಯಾರ್ಥಿಗಳು ಬೃಹತ್‌ ಧರಣಿ ನಡೆಸುತ್ತಿದ್ದಾರೆ.

ಈ ವಾರದ ಆರಂಭದಲ್ಲಿ ಸಂಸತ್ತಿಗೆ ಹಮಿಕೊಳ್ಳಲಾಗಿದ್ದ ಚಲೋ ಸಂಸದ್‌ ಮೆರವಣಿಗೆಯ ವೇಳೆ ದೆಹಲಿಯ ಬೀದಿಗಳಲ್ಲಿ ಹಿಂಸಾಚಾರ ನಡೆಯಿತು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಲಾಠಿಚಾರ್ಜ್‌ ನಡೆಸಿದ್ದರಿಂದ ಹಲವು ವಿದ್ಯಾರ್ಥಿಗಳು ಹಾಗೂ ಪೊಲೀಸರು ಗಾಯಗೊಂಡಿದ್ದರು.ಪೊಲೀಸರ ಕ್ರಮವನ್ನು ವಿದ್ಯಾರ್ಥಿ ಸಂಘಟನೆಗಳು ಕ್ರೂರ ನಡೆ ಎಂದು ಖಂಡಿಸಿದ್ದರೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅಗತ್ಯವಿದ್ದಷ್ಟು ಮಾತ್ರ ಸಂಯಮದಿಂದ ವರ್ತಿಸಿದ್ದೇವೆ ಎಂದು ದೆಹಲಿ ಪೊಲೀಸರು ಸಮರ್ಥಿಸಿಕೊಂಡಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಜೂನ್‌ 28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತ ಸೋನಮ್‌ ವಾಂಗ್ಚುಕ್‌ ಅವರ ಆರೋಗ್ಯ ಸ್ಥಿತಿ ಏರುಪೇರಾಗಿತ್ತು. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿರುವ ನೀಟ್‌ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ಜನಾಕ್ರೋಶ ವ್ಯಕ್ತವಾಗುತ್ತಿದೆ.

ಸುಪ್ರೀಂಕೋರ್ಟ್‌ನ ಕಟ್ಟುನಿಟ್ಟಿನ ನಿಲುವು ಇದೀಗ ಕೇಂದ್ರ ಸರ್ಕಾರಕ್ಕೆ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪುನರ್ರಚಿಸುವ ಸವಾಲನ್ನು ತಂದೊಡ್ಡಿದೆ. ಜುಲೈ 27ರ ಸುಪ್ರೀಂಕೋರ್ಟ್‌ ವಿಚಾರಣೆ ಈ ದಿಸೆಯಲ್ಲಿ ಅತ್ಯಂತ ನಿರ್ಣಾಯಕ ಎನಿಸಿದೆ.

RELATED ARTICLES

Latest News