ಪಾಟ್ನಾ,ಜು.27- ಬಿಹಾರದಲ್ಲಿ ಪ್ರತಿಭಟನಾಕಾರರ ಮೇಲೆ ಎಕೆ-47 ಬಂದೂಕಿನಿಂದ ಗುಂಡು ಹಾರಿಸಿದ ಪೊಲೀಸ್ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಆ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಈ ಘಟನೆಯ ಗಂಭೀರತೆಯನ್ನು ಪರಿಗಣಿಸಿ, ರಾಷ್ಟ್ರೀಯ ಜನತಾ ದಳದ ರಾಜ್ಯಸಭಾ ಸಂಸದರಾದ ಮನೋಜ್ ಕುಮಾರ್ ಝಾ ಅವರು ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಿದ್ದಾರೆ.
ಬಿಹಾರದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಪ್ರತಿಭಟನಾಕಾರರ ಮೇಲೆ ಎಕೆ-47 ರೈಫಲ್ನಿಂದ ಕನಿಷ್ಠ ಮೂರು ಸುತ್ತು ಗುಂಡು ಹಾರಿಸಿದ್ದರು.
ಸಾರ್ವಜನಿಕವಾಗಿ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಗುಂಡು ಹಾರಿಸಿದ ಆ ಪೊಲೀಸ್ ಸಿಬ್ಬಂದಿಯನ್ನು ಕೂಡಲೇ ಅಮಾನತುಗೊಳಿಸಲಾಗಿದೆ.
ಸುಪ್ರೀಂ ಕೋರ್ಟ್ನಲ್ಲಿ ಪಿಐಎಲ್ :
ಪ್ರಜಾಪ್ರಭುತ್ವದಲ್ಲಿ ನಾಗರಿಕರು ಮತ್ತು ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆಯ ಹಕ್ಕಿನ ರಕ್ಷಣೆಗಾಗಿ ಹಾಗೂ ಪೊಲೀಸ್ ದೌರ್ಜನ್ಯದ ವಿರುದ್ಧ ರಾಜ್ಯಸಭಾ ಸಂಸದ ಮನೋಜ್ ಕುಮಾರ್ ಝಾ ಅವರು ಸುಪ್ರೀಂ ಕೋರ್ಟ್ನಲ್ಲಿ ಪಿಐಎಲ್ ದಾಖಲಿಸಿ, ಉನ್ನತ ಮಟ್ಟದ ತನಿಖೆ ಹಾಗೂ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಜುಲೈ 25 ರಂದು ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆದ ಬಿಹಾರ ಬಂದ್ ಪ್ರತಿಭಟನೆಯ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಪೊಲೀಸ್ ಕಾನ್ಸ್ಟೆಬಲ್ ಒಬ್ಬರು ಎಕೆ-47 ರೈಫಲ್ ಹಿಡಿದು ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಿದ ಬಿಹಾರ ಪೊಲೀಸ್ ಪ್ರಧಾನ ಕಚೇರಿಯು ಕೂಡಲೇ ಸಂಬಂಧಪಟ್ಟ ಸಿಬ್ಬಂದಿಯನ್ನು ಅಮಾನತುಗೊಳಿಸಿ, ಇಲಾಖಾ ತನಿಖೆಗೆ ಆದೇಶಿಸಿದೆ.
ಘಟನೆಯ ವಿವರಗಳು :
ರಾಜ್ಯಾದ್ಯಂತ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಗಳು ಬಿಹಾರ ಬಂದ್ಗೆ ಕರೆ ನೀಡಿದ್ದವು. ಈ ಸಂದರ್ಭದಲ್ಲಿ ಸಿವಾನ್ ಜಿಲ್ಲೆಯ ಗಾಂಧಿ ಮೈದಾನದ ಕಡೆಗೆ ಸಾವಿರಾರು ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಸಿ, ಪರಿಸ್ಥಿತಿ ವಿಕೋಪಕ್ಕೆ ತಿರುಗಿತು.
ಈ ಘರ್ಷಣೆಯ ಸಮಯದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ವಿವೇಚನೆಯಿಲ್ಲದೆ ಎಕೆ-47 ನಂತಹ ಅತ್ಯಾಧುನಿಕ ಮಾರಕ ಶಸ್ತ್ರಾಸ್ತ್ರ ಬಳಸಿ ಗುಂಡು ಹಾರಿಸಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಯಿತು.
ಈ ಗೋಲಿಬಾರ್ನಲ್ಲಿ ಕುತ್ತಿಗೆಗೆ ಗುಂಡೇಟು ತಗುಲಿದ್ದ 15 ವರ್ಷದ ಬಾಲಕ ಎಂಡಿ ಆರಿಫ್ ಸೇರಿದಂತೆ ಮೂವರು ಗಾಯಗೊಂಡಿದ್ದು, ಪಾಟ್ನಾದ ಜಯಪ್ರಭಾ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಗುಂಡನ್ನು ಹೊರತೆಗೆದಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರು ಘಟನೆಯ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ದೆಹಲಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ಗಳು ಮತ್ತು ಬಿಹಾರದಲ್ಲಿ ಎಕೆ-47ಗಳ ಬಳಕೆ ನಡೆಯುತ್ತಿದೆ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಘಟನೆ ಕುರಿತು ಸ್ಪಷ್ಟನೆ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿಗಳು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಜವಾಬ್ದಾರಿಯೇ ಹೊರತು ಸಾರ್ವಜನಿಕರ ಮೇಲೆ ಮಾರಕ ದಾಳಿ ಮಾಡುವುದಲ್ಲ ಎಂದಿದ್ದಾರೆ. ಪೊಲೀಸ್ ಪ್ರೋಟೋಕಾಲ್ ಮೀರಿ ಶಸ್ತ್ರಾಸ್ತ್ರಗಳನ್ನು ಬಳಸಲಾಗಿದೆಯೇ ಎಂಬುದರ ಕುರಿತು ಸಮಗ್ರ ಇಲಾಖಾ ವಿಚಾರಣೆಗೆ ಆದೇಶಿಸಲಾಗಿದ್ದು, ತನಿಖೆಯ ವರದಿ ಬಂದ ಬಳಿಕ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
