ಉಡುಪಿ,ಜು.29- ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪ್ರತಿಭಟನಾನಿರತ ವಿದ್ಯಾರ್ಥಿಗಳ ವಿರುದ್ಧ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿ ಕ್ಷೇತ್ರದ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಉಡುಪಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಎಫ್ಐಆರ್ ದಾಖಲಾಗಿದೆ.
ನೀಟ್ ಪರೀಕ್ಷಾ ಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಆಯೋಜಿಸಲಾಗಿದ್ದ ಪ್ರತಿಭಟನೆಯ ವೇಳೆ ಶಾಸಕ ಯಶ್ಪಾಲ್ ಸುವರ್ಣ ಅವರು ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ವಿದ್ಯಾರ್ಥಿಗಳ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿ, ಕಾಂಗ್ರೆಸ್ ಬೆಂಬಲಿಗರ ವಿರುದ್ಧ ಬಿಜೆಪಿ ಕಾರ್ಯಕರ್ತರನ್ನು ಪ್ರಚೋದಿಸಲು ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.
ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ನಡೆದ ಘಟನೆಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು ಅವರು ಪೊಲೀಸರಿಗೆ ಅಧಿಕೃತ ದೂರು ನೀಡಿದ್ದರು. ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವುದು, ಗಲಭೆಗೆ ಪ್ರಚೋದನೆ ನೀಡುವುದು, ಕ್ರಿಮಿನಲ್ ಬೆದರಿಕೆ ಹಾಗೂ ಸಾರ್ವಜನಿಕ ಶಾಂತಿಭಂಗ ಉಂಟುಮಾಡುವ ಬಿಎನ್ಎಸ್ನ ಸಂಬಂಧಿತ ಕಠಿಣ ನಿಬಂಧನೆಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಶಾಸಕರ ಈ ವಿವಾದಾತಕ ಹೇಳಿಕೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.
ವೈಯಕ್ತಿಕ ನಿಂದನೆ, ದ್ವೇಷ ಭಾಷಣ ಮತ್ತು ಬೆದರಿಕೆಯ ಮೂಲಕ ನೀಟ್ ಪತ್ರಿಕೆ ಸೋರಿಕೆ ವಿಷಯದ ವಿರುದ್ಧ ಧ್ವನಿ ಎತ್ತಿದವರನ್ನು ಗುರಿಯಾಗಿಸಿಕೊಂಡಿರುವುದು ಬಿಜೆಪಿಯ ವಿದ್ಯಾರ್ಥಿ ವಿರೋಧಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಪ್ರಜಾಪ್ರಭುತ್ವದಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳಿಗೆ ಬೆದರಿಕೆಗಳಿಂದ ಉತ್ತರಿಸಲಾಗುವುದಿಲ್ಲ ಎಂದು ಮಂಜುನಾಥ ಭಂಡಾರಿ ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯ ಗೃಹ ಸಚಿವರಿಗೆ ನೇರವಾಗಿ ಮನವಿ ಸಲ್ಲಿಸಿ ಸಮಗ್ರ ತನಿಖೆಗೆ ಒತ್ತಾಯಿಸುವುದಾಗಿ ತಿಳಿಸಿರುವ ಅವರು, ಪ್ರತಿಭಟನಾ ಸ್ಥಳದಲ್ಲಿದ್ದ ಇಖಿರ ಬಿಜೆಪಿ ನಾಯಕರು ಶಾಸಕರ ಮಾತುಗಳನ್ನು ವಿರೋಧಿಸದೆ ಮೌನವಾಗಿದ್ದುದು ಆ ಭಾಷಣಕ್ಕೆ ನೀಡಿದ ಪರೋಕ್ಷ ಬೆಂಬಲದಂತಿದೆ ಎಂದು ಟೀಕಿಸಿದ್ದಾರೆ. ಅಲ್ಲದೆ, ಈ ಸಂಪೂರ್ಣ ಘಟನೆಯ ವೀಡಿಯೊ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ತನಿಖಾಧಿಕಾರಿಗಳಿಗೆ ಅಧಿಕೃತವಾಗಿ ಒದಗಿಸುವುದಾಗಿ ಕಾಂಗ್ರೆಸ್ ಮುಖಂಡರು ಸ್ಪಷ್ಟಪಡಿಸಿದ್ದಾರೆ.
