ಬೆಂಗಳೂರು, ಜು.30 – ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ನೀಡಿರುವ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನ ಕುಡಿಯುವ ನೀರಿನ ಲಭ್ಯತೆ ಕುರಿತು ಆತಂಕ ವ್ಯಕ್ತವಾಗಿದೆ. ಸದ್ಯದ ಸಂಗ್ರಹವನ್ನು ಗಮನಿಸಿದರೆ ಮುಂದಿನ ಐದರಿಂದ ಆರು ತಿಂಗಳವರೆಗೆ ಮಾತ್ರ ನೀರು ಪೂರೈಸಲು ಸಾಧ್ಯ ಎಂದು ತಿಳಿದುಬಂದಿದೆ.
ಈ ಕುರಿತಂತೆ ಸ್ಪಷ್ಟನೆ ನೀಡಿರುವ ಬೆಂಗಳೂರು ಜಲಮಂಡಳಿ ಅಧ್ಯಕ್ಷೆ ಡಾ. ಎನ್. ಮಂಜುಳಾ ಅವರು, ಸದ್ಯ ಕೃಷ್ಣರಾಜಸಾಗರ ಜಲಾಶಯದಲ್ಲಿ ಒಟ್ಟು 20 ಟಿಎಂಸಿ ನೀರಿನ ಸಂಗ್ರಹವಿದ್ದು, ಅದರಲ್ಲಿ ಬಳಕೆಗೆ ಯೋಗ್ಯವಾಗಿರುವುದು ಕೇವಲ 14 ಟಿಎಂಸಿ ಮಾತ್ರ ಹೀಗಾಗಿ ಇರುವ ನೀರಿನ ಲಭ್ಯತೆ ಆಧಾರದ ಮೇಲೆ ಇನ್ನು ಐದು ತಿಂಗಳ ಕಾಲ ಬೆಂಗಳೂರಿಗೆ ನೀರು ನೀಡಬಹುದು ಅಮೇಲೆ ಏನು ಮಾಡುವುದು ಎನ್ನುವುದು ತಿಳಿಯುತ್ತಿಲ್ಲ ಎಂದಿದ್ದಾರೆ.
.ಈ ನೀರಿನ ಸಂಗ್ರಹದಿಂದ ರಾಜಧಾನಿಗೆ ಮುಂದಿನ ಐದಾರು ತಿಂಗಳವರೆಗೆ ಕುಡಿಯುವ ನೀರಿನ ಪೂರೈಕೆ ಸಾಧ್ಯವಾಗಲಿದೆ. ಆದರೆ ಈ ಅವಧಿಯಲ್ಲಿ ಸಮರ್ಪಕ ಮಳೆಯಾಗದಿದ್ದರೆ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.
ಮಳೆ ಉತ್ತಮವಾಗಿ ಆದರೆ ಪರಿಸ್ಥಿತಿ ಸುಧಾರಿಸಲಿದೆ ಎಂಬ ನಿರೀಕ್ಷೆ ಇದೆ. ಆದರೆ ಮಳೆ ಕೈಕೊಟ್ಟರೆ ಬೆಂಗಳೂರಿನ ನೀರಿನ ಪೂರೈಕೆಯ ಮೇಲೆ ಒತ್ತಡ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಪರಿಸ್ಥಿತಿಯನ್ನು ಜಲಮಂಡಳಿ ನಿರಂತರವಾಗಿ ಪರಿಶೀಲಿಸುತ್ತಿದೆ ಎಂದು ತಿಳಿಸಿದರು. ಆದೇಶದ ಹಿನ್ನೆಲೆಯಲ್ಲಿ ಕಾವೇರಿ ನೀರಿನ ಹಂಚಿಕೆ ವಿಚಾರ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಸಂದರ್ಭದಲ್ಲೇ, ಬೆಂಗಳೂರಿನ ಕುಡಿಯುವ ನೀರಿನ ಭದ್ರತೆಯೂ ಪ್ರಮುಖ ವಿಚಾರವಾಗಿ ಹೊರಹೊಮ್ಮಿದೆ.
