ನವದೆಹಲಿ,ಆ.17- ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿ ಟಿವಿ ಚರ್ಚೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಶೆಹಜಾದ್ ಪೂನಾ ವಾಲಾ ಅವರು ಪಕ್ಷದ ಎಲ್ಲಾ ಹುದ್ದೆಗಳು ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ತುರ್ತು ಆರ್ಥಿಕ ಹಾಗೂ ವೈಯಕ್ತಿಕ ಸಂದರ್ಭಗಳ ಕಾರಣ ನೀಡಿ ಖಾಸಗಿ ವಲಯಕ್ಕೆ ಮರಳುತ್ತಿರುವುದಾಗಿ ತಿಳಿಸಿದ್ದಾರೆ.
ಎಕ್್ಸ ಖಾತೆ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಕಳುಹಿಸಿರುವ ಪತ್ರದ ಮೂಲಕ ಅವರು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಜುಲೈ 30ರಂದೇ ತಾವು ರಾಜೀನಾಮೆ ಪತ್ರವನ್ನು ಕಳುಹಿಸಿದ್ದರೂ, ಪಕ್ಷವು ಆರಂಭದಲ್ಲಿ ಅದನ್ನು ಸ್ವೀಕರಿಸಲು ನಿರಾಕರಿಸಿ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರಿತ್ತು ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಹಿರಿಯ ನಾಯಕರು ಹಾಗೂ ಸಂಘಟನೆಯ ಜತೆಗೆ ಕಳೆದ ಐದು ವರ್ಷಗಳಿಂದ ತಮಗೆ ಸಿಕ್ಕಿದ ವೇದಿಕೆ ಮತ್ತು ಅವಕಾಶಗಳಿಗೆ ಪೂನಾವಾಲ್ಲಾ ಧನ್ಯವಾದ ಅರ್ಪಿಸಿದ್ದಾರೆ. ತಾವೊಬ್ಬ ವ್ಯವಸ್ಥೆಯಿಂದ (ಸಂಘಟನೆ) ಹೊರಹೋಗುತ್ತಿರಬಹುದೇ ಹೊರತು, ಪ್ರಧಾನಿ ಮೋದಿಯವರ ದೃಷ್ಟಿಕೋನ ಹಾಗೂ ಸಿದ್ಧಾಂತದಿಂದ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜಕೀಯ ಹಿನ್ನೆಲೆ:
ವಕೀಲರಾಗಿರುವ ಶೆಹಜಾದ್ ಪೂನಾವಾಲ್ಲಾ ಅವರು ತಮ ರಾಜಕೀಯ ಜೀವನವನ್ನು ಕಾಂಗ್ರೆಸ್ ಪಕ್ಷದೊಂದಿಗೆ ಆರಂಭಿಸಿದ್ದರು. 2017ರಲ್ಲಿ ಕಾಂಗ್ರೆಸ್ನ ಆಂತರಿಕ ಚುನಾವಣಾ ಪ್ರಕ್ರಿಯೆಯನ್ನು ಬಹಿರಂಗವಾಗಿ ಪ್ರಶ್ನಿಸುವ ಮೂಲಕ ಅವರು ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದರು. ನಂತರದ ದಿನಗಳಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಯನ್ನು ಸೇರ್ಪಡೆಗೊಂಡಿದ್ದರು.
ಆಡಳಿತ ಪಕ್ಷದ ಪ್ರಮುಖ ರಾಷ್ಟ್ರೀಯ ವಕ್ತಾರರಾಗಿ ಮತ್ತು ಪ್ರಮುಖ ಧ್ವನಿಯಾಗಿ ಗುರುತಿಸಿಕೊಂಡಿದ್ದರು. ಇತ್ತೀಚೆಗೆ ಅವರು ತಮ ಸಾಮಾಜಿಕ ಜಾಲತಾಣದ ಬಯೋದಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರ ಎನ್ನುವ ವಿವರವನ್ನು ತೆಗೆದುಹಾಕುವ ಮೂಲಕ ಈ ಬೆಳವಣಿಗೆಯ ಸುಳಿವು ನೀಡಿದ್ದರು.
