ಯಲಹಂಕ : ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಹಿರಿಯ ಬಿಜೆಪಿ ಮುಖಂಡ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಮತ್ತು ಬಮೂಲ್ ಮಾಜಿ ಅಧ್ಯಕ್ಷ ದಿಬ್ಬೂರು ಜಯಣ್ಣ ಅವರನ್ನು ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ. ಎಸ್.ಪಾಟೀಲ್ ನಡಹಳ್ಳಿ ಅವರು ಆಯ್ಕೆ ಮಾಡಿದ್ದಾರೆ.
ಯಲಹಂಕ ಕ್ಷೇತ್ರ ಬಿಜೆಪಿ ಅಧ್ಯಕ್ಷರಾಗಿ ಸತತ ಎರಡು ಬಾರಿ ಸೇವೆ ಸಲ್ಲಿಸಿರುವ ದಿಬ್ಬೂರು ಜಯಣ್ಣ ಬೆಂಗಳೂರು ನಗರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಸಹ ಕಾರ್ಯನಿರ್ವಹಿಸಿದ್ದು, ‘ನಂದಿನಿ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್’ ನ ಹಾಲಿ ಅಧ್ಯಕ್ಷರಾಗಿ ಸಹ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕಳೆದ 40 ವರ್ಷಗಳಿಂದ ಯಲಹಂಕ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಸುಭದ್ರವಾಗಿ ಕಟ್ಟುವಲ್ಲಿ ದಿಬ್ಬೂರು ಜಯಣ್ಣ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಅವರ ಬಲಗೈ ಬಂಟ, ಅತ್ಯಾಪ್ತ ಅಭಿಮಾನಿ ಎಂಬ ಅಭಿಧಾನಕ್ಕೆ ಪಾತ್ರರಾಗಿರುವ ದಿಬ್ಬೂರು ಜಯಣ್ಣ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಮತ್ತು ಬಮೂಲ್ ಅಧ್ಯಕ್ಷರಾಗಿಯೂ ಸಹ ಕಾರ್ಯನಿರ್ವಹಿಸಿರುವ ಅನುಭವ ಹೊಂದಿದ್ದಾರೆ.
ಶಾಸಕ ಎಸ್ ಆರ್ ವಿಶ್ವನಾಥ್ ಅವರ ಮಾರ್ಗದರ್ಶನದಲ್ಲಿ ಯಲಹಂಕ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಸದೃಢವಾಗಿ ಬೆಳೆಸುವಲ್ಲಿ ದಿಬ್ಬೂರು ಜಯಣ್ಣ ಅವರ ಪಾತ್ರ ಹಿರಿದಾದದು. ಬಿಜೆಪಿ ಪಕ್ಷಕ್ಕೆ ಅವರು ನೀಡಿರುವ ಈ ಸೇವೆಯನ್ನು ಗುರುತಿಸಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿಗಳನ್ನಾಗಿ ಆಯ್ಕೆ ಮಾಡಲಾಗಿದೆ.
ಈ ಕುರಿತು ದಿಬ್ಬೂರು ಜಯಣ್ಣ ಅವರು ಪ್ರತಿಕ್ರಿಯಿಸಿ ಮಾತನಾಡಿ ‘ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿರುವುದು ಸಂತೋಷ ಉಂಟು ಮಾಡಿದ್ದು, ಪಕ್ಷದ ಬೆಳವಣಿಗೆಯ ದಿಸೆದಲ್ಲಿ ಜವಾಬ್ದಾರಿ ಹೆಚ್ಚಿಸಿದೆ. ನನಗೆ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿಯ ಈ ಹುದ್ದೆ ದೊರೆಯುವಲ್ಲಿ ಅಮೂಲ್ಯ ಸಹಕಾರ ನೀಡಿರುವ ನನ್ನ ಆದರ್ಶ ನಾಯಕರಾದ ಎಸ್.ಆರ್.ವಿಶ್ವನಾಥ್ ಅವರಿಗೆ ಹಾಗೂ ರೈತ ಮೋರ್ಚಾ ರಾಜ್ಯಾಧ್ಯಕ್ಷರಾದ ಎ.ಎಸ್. ಪಾಟೀಲ್ ನಡಹಳ್ಳಿ ಅವರಿಗೆ ಈ ಸಂದರ್ಭದಲ್ಲಿ ಧನ್ಯವಾದ ಹೇಳಲಿಚ್ಚಿಸುತ್ತೇನೆ. ಅವರ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಬಿಜೆಪಿ ರೈತ ಮೋರ್ಚಾವನ್ನು ಹೆಚ್ಚು ಸದೃಢಗೊಳಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.
