ಬೆಂಗಳೂರು,ಆ.18- ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ಪ್ರದೇಶದಲ್ಲಿ ಎನ್ಕೌಂಟರ್ಗೆ ಮೂವರು ಬೇಟೆಗಾರರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ನಡೆಯುತ್ತಿದ್ದು, ಆ.21ಕ್ಕೆ ಆ ವರದಿ ಸಲ್ಲಿಕೆಯಾಗುವ ಸಾಧ್ಯತೆಗಳಿವೆ ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ.15ರಂದೇ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಲಾಗಿದೆ. ಇದರ ಬಗ್ಗೆ ವಿಧಾನಮಂಡಲದ ಉಭಯ ಸದನಗಳಲ್ಲೂ ಹೇಳಿಕೆ ನೀಡಲಾಗಿದೆ. ಒಂದು ವೇಳೆ ಎನ್ಕೌಂಟರ್ಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳ ತಪ್ಪಿದ್ದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಸತ್ಯಾಸತ್ಯತೆ ವರದಿ ಬಂದ ನಂತರ ಗೊತ್ತಾಗಲಿದೆ ಎಂದರು.
ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಪ್ರತಿಕ್ರಿಯೆ ನೀಡಿದ್ದಾರೆ. ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರದ ವೇಳೆ 41 ಮಂದಿ ಮೃತಪಟ್ಟಿದ್ದರು. ನಮಲ್ಲಿನ ಸಮಸ್ಯೆ ಬಗ್ಗೆ ಅವರು ಏಕೆ ಪ್ರತಿಕ್ರಿಯಿಸುತ್ತಾರೆ ಎಂದು ಪ್ರಶ್ನಿಸಿದ ಅವರು, ಹಿಂದಿನ ಬಿಜೆಪಿ ಸರ್ಕಾರದಲ್ಲೂ ಬೇಟೆಗಾರರ ಮೇಲೆ ದಾಳಿ ಮಾಡಿರುವ ನಿದರ್ಶನಗಳಲಿದ್ದು, ಇದೇನು ಮೊದಲಲ್ಲ ಎಂದು ಅವರು ತಿಳಿಸಿದರು.
ಸಮಿಶ್ರ ಸರ್ಕಾರದ ಅವಧಿಯಲ್ಲೂ ಇಂಥ ಘಟನೆಗಳು ನಡೆದಿವೆ. ಪ್ರಸ್ತುತ ಎನ್ಕೌಂಟರ್ನಲ್ಲಿ ಯಾರದು ತಪ್ಪಿದೆ ಎಂಬುದು ವರದಿ ಬಂದ ಮೇಲೆ ಗೊತ್ತಾಗಲಿದೆ. ಆನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಬಿಡದಿ ಉಪನಗರ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟನೆ ನೀಡಿದ್ದು, ಇಷ್ಟವಿದ್ದವರು ಮಾತ್ರ ಜಮೀನು ನೀಡಲಿ. ವಿರೋಧ ಇರುವವರು ಬೇಡ. ಯಾರ ಮೇಲೂ ಒತ್ತಡ ಹೇರುತ್ತಿಲ್ಲ. ಹೀಗಾಗಿ ಪ್ರತಿಭಟನೆ ಮಾಡುವುದು ಸೂಕ್ತವಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
