ಬೆಂಗಳೂರು, ಆ.28- ಭಯೋತ್ಪಾದಕ ಕೃತ್ಯಗಳನ್ನು ನಿಗ್ರಹಿಸುವುದು ಹಾಗೂ ತುರ್ತು ಸಂದರ್ಭಗಳಲ್ಲಿ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುವ ಸಾಮರ್ಥ್ಯ ಹೆಚ್ಚಿಸಲು ರಾಜ್ಯ ಪೊಲೀಸ್ ಪಡೆಗೆ ರಾಷ್ಟ್ರೀಯ ಭದ್ರತಾ ಪಡೆ (ಎನ್ಎಸ್ಜಿ) ಒಂದು ತಿಂಗಳ ವಿಶೇಷ ತರಬೇತಿ ನೀಡಲಿದೆ.ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು.
ರಾಷ್ಟ್ರೀಯ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ ಹಾಗೂ ಸಾಮಾಜಿಕ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಭಯೋತ್ಪಾದನೆ ವಿರುದ್ಧದ ಹೋರಾಟ ಅತ್ಯಂತ ಮಹತ್ವದ್ದಾಗಿದೆ. ಭಯೋತ್ಪಾದಕ ಕೃತ್ಯಗಳು ಸಂಭವಿಸಿದ ಸಂದರ್ಭದಲ್ಲಿ ಸಾವು-ನೋವು ತಡೆಯುವುದು ಹಾಗೂ ಪರಿಸ್ಥಿತಿ ವಿಕೋಪಕ್ಕೆ ತಿರುಗದಂತೆ ನಿಯಂತ್ರಿಸುವಲ್ಲಿ ಪೊಲೀಸರು ಸದಾ ಸನ್ನದ್ಧರಾಗಿರುವುದು ನಿರ್ಣಾಯಕ ಎಂದು ಕಾರ್ಯಕ್ರಮದಲ್ಲಿ ತಿಳಿಸಲಾಯಿತು.
ತರಬೇತಿ ಅವಧಿಯಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆ, ಡ್ರೋನ್ ವಿರೋಧಿ ಕಾರ್ಯಾಚರಣೆ, ನಿರಾಯುಧ ಸಮರ ಕಲೆ, ಸ್ನೈಪರ್ ತರಬೇತಿ, ಸ್ಫೋಟಕ ಸಾಧನಗಳ ವಿರುದ್ಧ ಕಾರ್ಯಾಚರಣೆ, ಬಾಂಬ್ ನಿಷ್ಕ್ರಿಯಗೊಳಿಸುವಿಕೆ ಸೇರಿದಂತೆ ವಿವಿಧ ವಿಶೇಷ ಕಾರ್ಯಾಚರಣಾ ಕ್ಷೇತ್ರಗಳಲ್ಲಿ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತದೆ.
ರಾಜ್ಯದ ವಿವಿಧ ಕಾರ್ಯಾಚರಣಾ ಹಾಗೂ ಸಹಾಯಕ ಘಟಕಗಳಿಂದ ಆಯ್ಕೆ ಮಾಡಲಾದ ಸಿಬ್ಬಂದಿಗೆ ವ್ಯವಸ್ಥಿತ ತರಬೇತಿ ನೀಡುವ ಮೂಲಕ ಕರ್ನಾಟಕ ಪೊಲೀಸರ ವಿಶೇಷ ಕಾರ್ಯಾಚರಣಾ ಸಾಮರ್ಥ್ಯವನ್ನು ಹೆಚ್ಚಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.
ಒಂದು ತಿಂಗಳ ಅವಧಿಯಲ್ಲಿ ಕರ್ನಾಟಕ ಪೊಲೀಸ್ ಪಡೆಯ ಸುಮಾರು 500 ಸಿಬ್ಬಂದಿಗೆ ವಿವಿಧ ವಿಶೇಷ ಕಾರ್ಯಾಚರಣಾ ಕ್ಷೇತ್ರಗಳಲ್ಲಿ ತರಬೇತಿ ನೀಡಲಾಗುತ್ತದೆ. ಎನ್ಎಸ್ಜಿ ವತಿಯಿಂದ ಆಯೋಜಿಸಿರುವ ಈ ವಿಶೇಷ ತರಬೇತಿ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಪಡೆಯ ಸಾಮರ್ಥ್ಯವರ್ಧನಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶ್ಲಾಘಿಸಿ, ಎನ್ಎಸ್ಜಿಗೆ ಕೃತಜ್ಞತೆ ಸಲ್ಲಿಸಿದರು.
