ಬೆಂಗಳೂರು,ಸೆ.15- ಯಾವುದೋ ವಿಚಾರಕ್ಕೆ ಯುವಕನೊಂದಿಗೆ ಜಗಳವಾಡಿದ ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೆಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಕೊಲೆಯಾದ ಯುವಕನನ್ನು ಮಹೇಶ್ (18) ಎಂದು ಗುರುತಿಸಲಾಗಿದೆ. ಈತ ಕೂಲಿಕಾರ್ಮಿಕ.
ಮಹೇಶ್ ಕೆಲಸ ಮುಗಿಸಿ ಎಲ್ಲೆಂದರಲ್ಲಿ ರಾತ್ರಿ ಮಲಗಿಕೊಂಡು ಕಾಲ ಕಳೆಯುತ್ತಿದ್ದನು. ಅದರಂತೆ ನಿನ್ನೆ ರಾತ್ರಿ 11 ಗಂಟೆ ಸುಮಾರಿನಲ್ಲಿ ರಾಮಟೆಂಟ್ ರಸ್ತೆ ಬದಿ ಮಲಗಿದ್ದನು. ಆ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ದುಷ್ಕರ್ಮಿಗಳು ಯಾವುದೋ ವಿಚಾರಕ್ಕೆ ಈತನೊಂದಿಗೆ ಜಗಳವಾಡಿದ್ದಾರೆ. ಒಂದು ಹಂತದಲ್ಲಿ ದುಷ್ಕರ್ಮಿಗಳು ಮಹೇಶ್ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಇಂದು ಬೆಳಗ್ಗೆ 6 ಗಂಟೆ ಸುಮಾರಿನಲ್ಲಿ ಈ ಮಾರ್ಗದಲ್ಲಿ ಹೋಗುತ್ತಿದ್ದವರು ಯುವಕನ ಶವ ಕಂಡು ಪೊಲೀಸರಿಗೆ ತಿಳಿಸಿದ್ದಾರೆ.ಸುದ್ದಿ ತಿಳಿದ ಕೆಜೆ ಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಈ ಯುವಕನನ್ನು ಯಾವ ವಿಚಾರಕ್ಕೆ ಯಾರು ಕೊಲೆ ಮಾಡಿದ್ದಾರೆ ಎಂಬ ಬಗ್ಗೆ ತನಿಖೆ ಕೈಗೊಂಡಿರುವ ಪೊಲೀಸರು ಘಟನಾ ಸ್ಥಳದ ಸುತ್ತಮುತ್ತಲಿನ ರಸ್ತೆಗಳಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ.
