ದೊಡ್ಡಬಳ್ಳಾಪುರ, ಆ.31- ರೈಲ್ವೆ ಹಳಿಯ ಮೇಲೆ ಸಾಗುತ್ತಿದ್ದ ಇಬ್ಬರು ಮಹಿಳೆಯರು ಹಾಗೂ ಒಂದು ಮಗು ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಸೋಮವಾರ ಬೆಳ್ಳಂಬೆಳಗ್ಗೆ ನಡೆದಿದೆ.ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣ ಹಾಗೂ ಮುತ್ತೂರು ನಡುವಿನ ರೈಲ್ವೆ ಹಳಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೃತರ ಹೆಸರು ಮತ್ತು ವಿಳಾಸ ಇನ್ನೂ ಪತ್ತೆಯಾಗಿಲ್ಲ.
ಮುತ್ತೂರು ಕಡೆಯಿಂದ ರೈಲಿನಲ್ಲಿ ಪ್ರಯಾಣಿಸಲು ರೈಲ್ವೆ ನಿಲ್ದಾಣದತ್ತ ಹಳಿಯ ಮೇಲೆಯೇ ನಡೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಎರಡು ಹಳಿಗಳಿರುವ ಈ ಪ್ರದೇಶದಲ್ಲಿ ತಿರುವು ಇದ್ದು, ರೈಲು ಯಾವ ಹಳಿಯಲ್ಲಿ ಬರುತ್ತಿದೆ ಎಂಬುದು ತಿಳಿಯದೆ ಮಹಿಳೆಯರು ಮತ್ತು ಮಗು ರೈಲಿಗೆ ಸಿಲುಕಿರಬಹುದು ಎನ್ನಲಾಗಿದೆ. ಆದರೆ, ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ರೈಲ್ವೆ ಪೊಲೀಸರ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.
ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದ ರಭಸಕ್ಕೆ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದು, ಮೃತರ ಗುರುತು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ.
