Thursday, September 19, 2024
Homeರಾಜ್ಯಪೆನ್ ಡ್ರೈವ್ ಪ್ರಕರಣದ ಬಗ್ಗೆ ಮೌನ ಮುರಿದ ಬಿಜೆಪಿ

ಪೆನ್ ಡ್ರೈವ್ ಪ್ರಕರಣದ ಬಗ್ಗೆ ಮೌನ ಮುರಿದ ಬಿಜೆಪಿ

ಬೆಂಗಳೂರು,ಏ.29- ಹಾಸನ ಸಂಸದ ಪ್ರಜ್ವಲ್‌ ರೇವಣ್ಣನಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಕೊನೆಗೂ ಬಿಜೆಪಿ ವೌನ ಮುರಿದಿದೆ. ಪ್ರಕರಣ ಆಚೆ ಬಂದು ಮೂರು ದಿನವಾದರೂ ಬಾಯಿ ಬಿಡದೆ ಅಂತರ ಕಾಪಾಡಿಕೊಂಡಿದ್ದ ಬಿಜೆಪಿ ನಾಯಕರು ಮೊದಲ ಬಾರಿಗೆ ಹೇಳಿಕೆಯನ್ನು ಕೊಟ್ಟಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಎಲ್ಲರೂ ಸಮಾನರು ಎಂದು ಹೇಳಿದ್ದಾರೆ.ಎಚ್‌.ಡಿ. ಕುಮಾರಸ್ವಾಮಿ ಅವರು ಈ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಸರ್ಕಾರ ಎಸ್‌ಐಟಿ ರಚಿಸಿದೆ.

ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ ಎಂದು ಅಶೋಕ್‌ ಹೇಳಿದ್ದಾರೆ. ಇನ್ನು, ಪೆನ್‌ ಡ್ರೈವ್‌ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ರಕ್ಷಣೆ ಇಲ್ಲ ಎನ್ನುವ ಡಿ.ಕೆ. ಸುರೇಶ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಆರ್‌ ಅಶೋಕ್‌, ಈಗ ರಾಜ್ಯದಲ್ಲಿ ಅವರದ್ದೇ ಸರ್ಕಾರ ಇದೆಯಲ್ಲ, ರಕ್ಷಣೆ ಕೊಡಲಿ ಎಂದು ಆಗ್ರಹಿಸಿದ್ದಾರೆ.

ಕಾನೂನಿಗಿಂತ ಯಾರೂ ಕೂಡ ದೊಡ್ಡವರಿಲ್ಲ. ಪ್ರಜ್ವಲ್‌ ರೇವಣ್ಣ ಇರಲಿ, ಇನ್ಯಾರೇ ಇರಲಿ ತಪ್ಪು ಮಾಡಿದಾಗ ಕಾನೂನಿಗೆ ತಲೆ ಬಾಗಲೇಬೇಕು. ಈಗಾಗಲೇ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಉಪ್ಪು ತಿಂದವರು ನೀರು ಕುಡಿಯಲೇಬೇಕೆಂದು ಹೇಳಿದ್ದಾರೆ. ಯಾರನ್ನು ರಕ್ಷಣೆ ಮಾಡುವ ಉದ್ದೇಶವಿಲ್ಲ ಎಂದರು.

ಪ್ರಜ್ವಲ್‌ ರೇವಣ್ಣ ಅವರಿಗೆ ದೇಶ ಬಿಟ್ಟು ಹೋಗುವಂತೆ ಬಿಜೆಪಿಯಾಗಲಿ, ಜೆಡಿಎಸ್‌ ನಾಯಕರು ಸಲಹೆ ಕೊಟ್ಟಿಲ್ಲ. ಅಷ್ಟಕ್ಕೂ ರಾಜ್ಯ ಗುಪ್ತಚರ ವಿಭಾಗ ಮುಖ್ಯಮಂತ್ರಿ ಅಧೀನದಲ್ಲಿದೆ. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನೆ ಮಾಡಿದರು. ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬಾಗಲಕೋಟೆಯಲ್ಲಿ ಈ ಪ್ರಕರಣದ ಬಗ್ಗೆ ಮಾತನಾಡಿದ್ದು, ಎಸ್‌ಐಟಿ ತನಿಖೆ ನಡೆದು ಸತ್ಯಾಸತ್ಯತೆ ಹೊರಬರಲಿ ಎಂದು ಹೇಳಿದ್ದಾರೆ.

ನಾವು ಯಾರನ್ನು ರಕ್ಷಣೆ ಮಾಡುವುದಿಲ್ಲ. ತಪ್ಪು ಮಾಡಿದ್ದರೆ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ. ಸರ್ಕಾರ ಈಗಾಗಲೇ ಎಸ್‌ಐಟಿ ರಚಿಸಿದೆ. ತನಿಖೆ ನಂತರ ಸತ್ಯಾಸತ್ಯತೆ ಹೊರಬರಲಿದೆ. ಅಲ್ಲಿಯವರೆಗೂ ಕಾದು ನೋಡೋಣ ಎಂದರು. ಇನ್ನೊಂದೆಡೆ ಹುಬ್ಬಳ್ಳಿಯಲ್ಲಿ ಮಾತನಾಡುತ್ತಿದ್ದ ಬಿಜೆಪಿಯ ಮಾಜಿ ಶಾಸಕ ಸಿ.ಟಿ. ರವಿ, ಕಾನೂನು ಎಲ್ಲರಿಗೂ ಒಂದೇ ಇರುತ್ತದೆ ಎಂದಿದ್ದಾರೆ.

ಕಾನೂನು ತಮಗೆ ಅನ್ವಯ ಆಗಬಾರದು ಎಂದು ಕಾಂಗ್ರೆಸ್‌ ಭಾವಿಸುತ್ತದೆ. ಕಾನೂನು ಎಲ್ಲರಿಗೂ ಒಂದೇ ಎಂಬುದು ತಮ್ಮ ಭಾವನೆ ಎಂದು ಹೇಳಿದ ಸಿ.ಟಿ. ರವಿ, ಈ ಪ್ರಕರಣ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತೆ ಎಂದು ಹೇಳಲು ಆಗಲ್ಲ. ಹಾಗೆಯೇ ಪರಿಣಾಮ ಬೀರುವುದಿಲ್ಲ ಎಂದಲೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

2019ರಲ್ಲಿ ಹಾಸನದಲ್ಲಿ ಜೆಡಿಎಸ್‌ನಿಂದ ಪ್ರಜ್ವಲ್‌ ರೇವಣ್ಣಗೆ ಟಿಕೆಟ್‌ ಕೊಟ್ಟಿದ್ದರು. ಆವತ್ತು ಅವರ ಜೊತೆ ಕಾಂಗ್ರೆಸ್‌ ಇತ್ತು. ನಾವು ವಿರೋಧವಾಗಿ ಅಭ್ಯರ್ಥಿ ಹಾಕಿದ್ದೆವು. ಇದೀಗ ಪ್ರಜ್ವಲ್‌ ರೇವಣ್ಣಗೆ ಟಿಕೆಟ್‌ ಕೊಟ್ಟಿರುವುದು ನಾವಲ್ಲ, ಜೆಡಿಎಸ್‌ ಎಂದು ಸಿ.ಟಿ.ರವಿ ಹೇಳಿದ್ದಾರೆ.

RELATED ARTICLES

Latest News