Friday, September 20, 2024
Homeರಾಜ್ಯಉತ್ತರ ಒಳನಾಡಿನಲ್ಲೂ ಭಾರೀ ಮಳೆ ಮುನ್ಸೂಚನೆ, ಆರೆಂಜ್‌ ಅಲರ್ಟ್‌ ಘೋಷಣೆ

ಉತ್ತರ ಒಳನಾಡಿನಲ್ಲೂ ಭಾರೀ ಮಳೆ ಮುನ್ಸೂಚನೆ, ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು, ಆ.1-ಕರಾವಳಿ, ಮಲೆನಾಡಿನ ಜೊತೆಗೆ ಉತ್ತರ ಕರ್ನಾಟಕ ಭಾಗದಲ್ಲೂ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಭಾರತೀಯ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.ಅರಬ್ಬೀ ಸಮುದ್ರದಲ್ಲಿ ಕೇರಳದ ಕರಾವಳಿಯಿಂದ ಗುಜರಾತಿನವರೆಗೂ ಸಮುದ್ರಮಟ್ಟದಲ್ಲಿ ಉಂಟಾಗಿರುವ ಮೇಲುಬ್ಬರ(ಟ್ರಫ್‌)ದ ಪರಿಣಾಮದಿಂದ ಭಾರೀ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಇಂದು ಮತ್ತು ನಾಳೆ ವ್ಯಾಪಕ ಪ್ರಮಾಣದ ಮಳೆಯಾಗಲಿದೆ. ಕೆಲವೆಡೆ ಭಾರೀ ಮಳೆಯಾಗಬಹುದು. ಇದರಿಂದ ರಸ್ತೆ ಸಂಚಾರಕ್ಕೆ ಕೆಲವೆಡೆ ಅಡಚಣೆಗಳು, ನದಿಗಳಲ್ಲಿ ಪ್ರವಾಹ, ಭೂಕುಸಿತ ಉಂಟಾಗುವ ಸಾಧ್ಯತೆಗಳು ಇವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಉಲ್ಲೇಖಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.

ನಿರಂತರವಾಗಿ ಅಧಿಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಲಿದೆ. ಪ್ರವಾಹ ಉಂಟಾಗುವುದರಿಂದ ನದಿ ತೀರದ ಪ್ರದೇಶಗಳ ಜನವಸತಿಗಳ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಜಾನುವಾರುಗಳ ಸಹಿತ ಜನರು ತೆರಳಲು ಸೂಚಿಸಿದೆ.

ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಒಂದೆರಡು ಕಡೆ ಮಾತ್ರ ಭಾರೀ ಮಳೆಯಾಗಬಹುದು ಎಂದು ಹೇಳಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗು ಮುನ್ಸೂಚನೆಗಳಿದ್ದು, ಉಳಿದಂತೆ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ತಿಳಿಸಿದೆ.

ಆದರೆ, ಈಗಾಗಲೇ ನಿರಂತರ ಮಳೆಗೆ ಜಲಾಶಯಗಳು ಭರ್ತಿಯಾಗಿದ್ದು, ಭಾರೀ ಪ್ರಮಾಣದಲ್ಲಿ ಕೃಷ್ಣಾ ಹಾಗೂ ಕಾವೇರಿ ಕೊಳ್ಳದ ನದಿಗಳಲ್ಲಿ ನೀರು ಹರಿಯುತ್ತಿದೆ. ಇದರಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ವರ್ಷ ಮುಂಗಾರು ಹಂಗಾಮಿನ ಮಳೆ ಕೊರತೆಯಿಂದ ರಾಜ್ಯ ಬರದಿಂದ ತತ್ತರಿಸಿದ್ದರೆ, ಈ ವರ್ಷ ಅಧಿಕ ಮಳೆಯಿಂದ ಅತಿವೃಷ್ಟಿ ಹಾಗೂ ನೆರೆಹಾವಳಿಯಿಂದ ಸಂಕಷ್ಟ ಉಂಟಾಗಿದೆ.

RELATED ARTICLES

Latest News