Friday, September 20, 2024
Homeಇದೀಗ ಬಂದ ಸುದ್ದಿಟಿಕೆಟ್‌ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ : ಸಿ.ಪಿ.ಯೋಗೇಶ್ವರ್‌

ಟಿಕೆಟ್‌ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ : ಸಿ.ಪಿ.ಯೋಗೇಶ್ವರ್‌

ಬೆಂಗಳೂರು,ಆ.12- ಒಂದು ವೇಳೆ ಮುಂಬರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನನಗೆ ಬಿಜೆಪಿ ವತಿಯಿಂದ ಟಿಕೆಟ್‌ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಹೇಳಿಕೆ ನೀಡಿದ್ದಾರೆ.

ಈ ಮೂಲಕ ಪಕ್ಷವು ಟಿಕೆಟ್‌ ನೀಡದಿದ್ದರೆ, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮುನ್ಸೂಚನೆ ಕೊಟ್ಟಿದ್ದು, ಅವರ ನಡೆ ಬಿಜೆಪಿ ಹಾಗೂ ಜೆಡಿಎಸ್‌‍ಗೆ ದೊಡ್ಡ ತಲೆನೋವಾಗುವ ಸಂಭವವಿದೆ.

ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉಪಚುನಾವಣೆಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ, ಪಕ್ಷೇತರನಾಗಿ ಮತ್ತೆ ಗೆದ್ದು ಎನ್‌ಡಿಎ ಭಾಗವಾಗುತ್ತೇನೆ. ಏನೇನು ರಾಜಕೀಯ ತಿರುವು ಪಡೆದುಕೊಳ್ಳುತ್ತದೆ ಎನ್ನುವುದನ್ನು ಮುಂದೆ ನೋಡೋಣ ಎಂದು ಸೂಚ್ಯವಾಗಿ ತಿಳಿಸಿದರು.

ನನ್ನ ತಾಲೂಕಿನ ಜನ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಯಾವುದೇ ಚಿನ್ಹೆಯ ಅಡಿ ನಿಂತರೂ ಗೆಲ್ಲಿಸುತ್ತಾರೆ. ಕ್ಷೇತ್ರದ ಸಮಾನ ಮನಸ್ಕ ವೇದಿಕೆಯಿಂದಲೂ ಸ್ಪರ್ಧೆಗೆ ಒತ್ತಾಯ ಇದೆ. ನಾನು ಕಾಂಗ್ರೆಸ್‌‍ಗೆ ಹೋಗುವ ಬಗ್ಗೆ ಆಲೋಚನೆ ಮಾಡಿಲ್ಲ. ಯಾರೂ ನನ್ನನ್ನು ಮಾತನಾಡಿಸಲಿಲ್ಲ. ಡಿಕೆಶಿ ಅವರು ಏನೇನೋ ಮಾತನಾಡುತ್ತಾರೆ. ಅದು ಅವರ ರಾಜಕೀಯ ತಂತ್ರಗಾರಿಕೆ. ಅವರಿಗೆ ಯಾವಾಗ ಏನು ಮಾತಾಡಬೇಕು ಎಂದು ಗೊತ್ತಿದೆ ಎಂದು ಹೇಳಿದರು.

ನನಗೂ ಕುಮಾರಸ್ವಾಮಿಯವರಿಗೂ ಭಿನ್ನಾಭಿಪ್ರಾಯ ಏನಿದೆ? ನಮ ಮಧ್ಯೆ ಬಿರುಕು ಮೂಡಿಸುವ ಪ್ರಯತ್ನವನ್ನು ಡಿಕೆಶಿ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಅವರು ಮನಸ್ಸು ಬದಲಾಯಿಸಬಹುದು. ಕುಮಾರಸ್ವಾಮಿ ಒಪ್ಪದಿದ್ದರೆ ಮುಂದಿನ ದಾರಿ ನೋಡೋಣ ಎಂದು ತಿಳಿಸಿದರು.

ಾನು ಚನ್ನಪಟ್ಟಣ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಅಲ್ಲಿ ಸ್ಪರ್ಧಿಸುವಂತೆ ಜನರು ಕೂಡ ಒತ್ತಡ ಹಾಕುತ್ತಿದ್ದಾರೆ. ನಾವೆಲ್ಲರೂ ಸಮಾನ ಮನಸ್ಕರು ಸಭೆ ಸೇರಿದ್ದೇವೆ. ಯಾವುದೇ ಕಾರಣಕ್ಕೂ ಚನ್ನಪಟ್ಟಣ ಕ್ಷೇತ್ರವನ್ನು ಕಾಂಗ್ರೆಸ್‌‍ಗೆ ಬಿಟ್ಟು ಕೊಡಬಾರದು. ಆ ಕ್ಷೇತ್ರವನ್ನು ಎನ್‌ಡಿಎ ವಶಕ್ಕೆ ತಗೊಳ್ಳಬೇಕು ಎಂದು ನಿರ್ಣಯಿಸಿದ್ದೇವೆ.

ಇದೇ ಕಾರಣಕ್ಕೆ ನಾನು ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮನಸ್ಸು ಮಾಡಿದ್ದೇನೆ. ಅದಕ್ಕಾಗಿ ಇಂದು ದಿಲ್ಲಿಗೆ ತೆರಳುತ್ತಿದ್ದೇನೆ. ಅಲ್ಲಿ ವರಿಷ್ಠರನ್ನು ಭೇಟಿಯಾಗಿ ಚರ್ಚೆ ನಡೆಸುತ್ತೇನೆ. ಆಗಸ್ಟ್‌ 16ರಂದು ಮತ್ತೆ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗುವ ಯೋಜನೆಯೂ ಇದೆ ಎಂದು ಯೋಗೇಶ್ವರ್‌ ತಿಳಿಸಿದ್ದಾರೆ.

ಈಗಾಗಲೇ ನಮ ರಾಜ್ಯ ನಾಯಕರು ಕೂಡ ನನ್ನ ಸ್ಪರ್ಧೆಯ ಬಗ್ಗೆ ಭರವಸೆ ನೀಡಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಸ್ವಲ್ಪ ಮುಂಗೋಪ ಅಷ್ಟೇ. ಆದರೆ ಅಂತಿಮವಾಗಿ ಅವರ ಜತೆ ವರಿಷ್ಠರು ಮಾತಾಡಿದ ಬಳಿಕ ನನ್ನ ಸ್ಪರ್ಧೆಗೆ ಅವರೂ ಒಪ್ಪಿಗೆ ಸೂಚಿಸುವ ಭರವಸೆ ಇದೆ.

ಕಳೆದ ಬಾರಿ ಮೈತ್ರಿ ಮಾಡಿಕೊಳ್ಳುವಂತೆ ಹೇಳಿದವನೇ ನಾನು. ಬಿಜೆಪಿ ಮೈತ್ರಿ ಮಾಡಿಕೊಳ್ಳದಿದ್ದರೆ ನಮ ಭಾಗದಲ್ಲಿ ಜೆಡಿಎಸ್‌‍ ಕಥೆ ಏನಾಗುತ್ತಿತ್ತು? ಹೀಗಾಗಿ ಎರಡು ಪಕ್ಷಗಳ ಒಮತದ ಅಭ್ಯರ್ಥಿ ನಾನೇ ಆಗುವ ವಿಶ್ವಾಸ ಇದೆ ಎಂದು ಅವರು ಹೇಳಿದ್ದಾರೆ.

RELATED ARTICLES

Latest News