Friday, September 20, 2024
Homeಇದೀಗ ಬಂದ ಸುದ್ದಿಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು, ಅ.27- ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬರ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರ ಈವರೆಗೂ ಒಂದು ರೂಪಾಯಿಯನ್ನು ಬಿಡುಗಡೆ ಮಾಡಿಲ್ಲ ಎಂದು ಟೀಕಿಸಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರ ಸ್ವಾಭಿಮಾನದ ಪ್ರಶ್ನೆಗಳು ಎಂಬ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ 216 ತಾಲ್ಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ. 33770 ಕೋಟಿ ರೂಪಾಯಿ ನಷ್ಟವಾಗಿದೆ. ರಾಜ್ಯ ಸರ್ಕಾರ 17,901 ಕೋಟಿ ರೂಪಾಯಿಗಳ ಪರಿಹಾರಕ್ಕಾಗಿ ಮನವಿ ಸಲ್ಲಿಸಿದೆ.

ಕೇಂದ್ರದಿಂದ ಬರ ಅಧ್ಯಯನ ತಂಡಕ್ಕೂ ರಾಜ್ಯದ ಪರಿಸ್ಥಿತಿ ಮನವರಿಕೆಯಾಗಿದೆ. ಆದರೆ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿಸಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ ಎಂದು ಪ್ರಶ್ನಿಸಿರುವ ಅವರು, ಬರ ನಿಭಾಯಿಸಲು ಈವರೆಗೂ ನಯಾಪೈಸೆ ಪರಿಹಾರದ ಹಣ ಬಿಡುಗಡೆ ಮಾಡಿಲ್ಲ.

ಪ್ರಧಾನಿ ನರೇಂದ್ರ ಮೋದಿಯವರೇ ಜಗತ್ತಿನಲ್ಲಿ ಕಷ್ಟ-ದುಃಖಕ್ಕೆ ಮಿಡಿಯುವ ನಿಮ್ಮ ವಿಶಾಲ ಹೃದಯ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ. ನಿಮ್ಮ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ ಎಂಬುದು ನನ್ನೊಬ್ಬನ ಪ್ರಶ್ನೆಯಲ್ಲ, ನಾಡಿನ ಆರುವರೆ ಕೋಟಿ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ ಎಂದಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಗನ ಮನೆಯ ಮೇಲೆ ಅರಣ್ಯ ಅಧಿಕಾರಿಗಳ ದಾಳಿ

ನಮ್ಮ ನಾಡು ಕರ್ನಾಟಕ ಎಂದು ಮರುನಾಮಕರಣಗೊಂಡು 50 ವಸಂತಗಳು ತುಂಬುತ್ತಿರುವ ಹೊತ್ತಿನಲ್ಲಿ ಕರ್ನಾಟಕವು ಸಾಗಿಬಂದ ಹಾದಿಯನ್ನು ಸ್ಮರಿಸಿಕೊಳ್ಳಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾಗಿರುವ ಅನುದಾನ, ತೆರಿಗೆಯಲ್ಲಿ ಪಾಲು, ಬರ ಮತ್ತು ಜಿಎಸ್‍ಟಿ ಪರಿಹಾರ ಪೂರ್ಣಪ್ರಮಾಣದಲ್ಲಿ ಬಂದಿಲ್ಲ.

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳು ಮತ್ತು ಐಬಿಪಿಎಸ್ ನೇಮಕಾತಿಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಎದುರಿಸಲು ಅವಕಾಶ ನೀಡದೆ ಲಕ್ಷಾಂತರ ಯುವ ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿದೆ. ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಮಾಡಲು ಪ್ರಯತ್ನಿಸಿ ಕನ್ನಡಿಗರ ಸ್ವಾಭಿಮಾನವನ್ನು ಕೆಣಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ನಾಡಿನ ರೈತರ ಜೀವನಾಧಾರವಾಗಿರುವ ಕಾವೇರಿ, ಮಹದಾಯಿ, ಕೃಷ್ಣಾ, ಭದ್ರಾಮೇಲ್ದಂಡೆ ಮೊದಲಾದ ನದಿಗಳ ನೀರಾವರಿ ಯೋಜನೆಗಳಿಗೆ ಬೆಂಬಲ ನೀಡದೆ, ಅನ್ನದಾತನನ್ನು ಸಂಕಷ್ಟಕ್ಕೆ ನೂಕಲಾಗಿದೆ. ಕನ್ನಡಿಗರೇ ಬೆವರು-ರಕ್ತ ಸುರಿಸಿ ಕಟ್ಟಿ ಬೆಳೆಸಿದ ಕರ್ನಾಟಕದ ಹೆಮ್ಮೆಯ ವಿಜಯಾ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್, ಕಾಪೆರ್ರೇಷನ್ ಬ್ಯಾಂಕ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಮೊದಲಾದ ಲಾಭದಲ್ಲಿದ್ದ ಬ್ಯಾಂಕುಗಳನ್ನು ನಷ್ಟದಲ್ಲಿದ್ದ ಬ್ಯಾಂಕುಗಳ ಜೊತೆ ವಿಲೀನ ಮಾಡಿ ಕನ್ನಡಿಗರಿಗೆ ದ್ರೋಹ ಎಸಗಲಾಗಿದೆ. ಹೀಗೆ ಕರ್ನಾಟಕದ ವಿರುದ್ಧ ಕೇಂದ್ರದ ಬಿಜೆಪಿ ಸರ್ಕಾರ ನಡೆಸುತ್ತಿರುವ ಅನ್ಯಾಯದ ಸರಮಾಲೆ ಮುಂದುವರೆದಿದೆ, ನಿರಂತರವಾಗಿ ಸ್ವಾಭಿಮಾನಿ ಕನ್ನಡಿಗರನ್ನು ನಿರ್ಲಕ್ಷಿಸಿ ಅವಮಾನಿಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಹುಲಿ ಉಗುರು ಪ್ರಕರಣದಲ್ಲಿ ವರ್ತೂರು ಸಂತೋಷ್‍ಗೆ ಜಾಮೀನು

ಕೇಂದ್ರ ಬಿಜೆಪಿ ಸರ್ಕಾರದ ಈ ನಡವಳಿಕೆಗಳು ಒಕ್ಕೂಟ ವ್ಯವಸ್ಥೆಯ ಮೂಲ ಆಶಯಕ್ಕೆ ವಿರುದ್ಧವಾಗಿರುವುದರಿಂದ ಅದರ ವಿರುದ್ಧ ಧ್ವನಿಯೆತ್ತುವುದು ಅನಿವಾರ್ಯವೆಂದು ಭಾವಿಸಿ, ಇಂದಿನಿಂದ ಸ್ವಾಭಿಮಾನಿ…ಕನ್ನಡಿಗರಪ್ರಶ್ನೆ ಎಂಬ ಹ್ಯಾಷ್‍ಟ್ಯಾಗ್ ಅಡಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನವನ್ನು ಕೈಗೊಳ್ಳಲಾಗುತ್ತಿದೆ.

RELATED ARTICLES

Latest News