ನವದೆಹಲಿ, ಜ.16- ಮುಖ್ಯಮಂತ್ರಿ ಸ್ಥಾನ ಕುರಿತು ಬಹಿರಂಗವಾಗಿ ಚರ್ಚೆ ನಡೆಸುವುದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ನಲ್ಲಿ ಕುರ್ಚಿ ಕಿತ್ತಾಟ ಚಾಲ್ತಿಯಲ್ಲಿ ಇರುವುದಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತಷ್ಟು ತುಪ್ಪ ಸುರಿದಿದ್ದಾರೆ.
ದೆಹಲಿ ಭೇಟಿ ಕೈಗೊಂಡಿರುವ ಅವರು, ಸುದ್ದಿಗಾರರೊಂದಿಗೆ ಮಾತನಾಡುವ ವೇಳೆಯಲ್ಲಿ ಅಧಿಕಾರ ಹಂಚಿಕೆ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ. ಮೈಸೂರಿನಲ್ಲಿ ರಾಹುಲ್ ಗಾಂಧಿ ಅವರ ಜೊತೆ ಸಿಎಂ ಸ್ಥಾನದ ಬಗ್ಗೆ ಚರ್ಚೆ ಮಾಡಲಾಯಿತೇ, ಮುಖ್ಯಮಂತ್ರಿ ಹುದ್ದೆ ದೊರೆಯಲಿದೆಯೇ ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡದ ಅವರು, ಮುಖ್ಯಮಂತ್ರಿ ಸ್ಥಾನ ಹೈಕಮಾಂಡ್ ಹಾಗೂ ನನ್ನ ನಡುವಣ ವಿಚಾರ. ಇದು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ ಎಂದಿದ್ದಾರೆ.
ಮೊದಲಿನಿಂದಲೂ ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್ ಕುರ್ಚಿಗಿಟ್ಟಿಸಿಕೊಳ್ಳಲು ಸತತ ಪ್ರಯತ್ನ ನಡೆಸುತ್ತಲೇ ಇದ್ದಾರೆ.ಅಧಿಕಾರ ಹಂಚಿಕೆಯ ಕುರಿತು ಸೃಷ್ಟಿಯಾಗುತ್ತಿರುವ ರಾಜಕೀಯ ವದಂತಿಗಳನ್ನು ಅಲ್ಲಗಳೆಯುವ ಬದಲಿಗೆ ನನ್ನ ಮತ್ತು ಹೈಕಮಾಂಡ್ ನಡುವಣ ವಿಷಯ ಎನ್ನುವ ಮೂಲಕ ಮತ್ತಷ್ಟು ಅನುಮಾನಗಳನ್ನು ಹುಟ್ಟು ಹಾಕಿದ್ದಾರೆ.
ಅಸ್ಸಾಂ ಚುನಾವಣೆ ಸಂಬಂಧ ಹೈಕಮಾಂಡ್ ನಾಯಕರ ಜತೆ ಸಭೆ ಇದೆ, ಈ ಸಭೆಯ ಯೋಜನೆಗಳೇನು ಎಂದು ಕೇಳಿದಾಗ, ನಮ ಪಕ್ಷದ ಯೋಜನೆಗಳನ್ನು ಬಹಿರಂಗಪಡಿಸಲು ಹೇಗೆ ಸಾಧ್ಯ? ಇದನ್ನು ಪಕ್ಷದ ಮಟ್ಟದಲ್ಲಿ ಮಾತ್ರ ಚರ್ಚೆ ಮಾಡಲಾಗುವುದು. ಸಾರ್ವಜನಿಕವಾಗಿ ಅಲ್ಲ ಎಂದಿದ್ದಾರೆ. ಏನಾದರೂ ಮಾಹಿತಿ ನೀಡುವುದಿದ್ದರೆ, ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಇದ್ದಾರೆ, ಅವರು ನೀಡುತ್ತಾರೆ. ದೆಹಲಿಯ ಪ್ರವಾಸದಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೇನೆ. ನಾಯಕರನ್ನು ಭೇಟಿ ಮಾಡುವ ಉದ್ದೇಶದಿಂದಲೇ ದೆಹಲಿಗೆ ಬಂದಿದ್ದೇನೆ, ನೋಡೋಣ ಎಂದರು.
ರಾಜ್ಯದ ನಿರಾವರಿ ವಿಷಯವಾಗಿ ಹಲವಾರು ಪ್ರಕರಣಗಳು ನ್ಯಾಯಾಲಯದ ವಿಚಾರಣೆಯಲ್ಲಿವೆ. ಈ ಸಂಬಂಧಪಟ್ಟಂತೆ ಕೇಂದ್ರ ಕಾನೂನು ಸಚಿವರು ಮತ್ತು ಕಾನೂನು ತಜ್ಞರನ್ನು ಭೇಟಿ ಮಾಡುತ್ತೇನೆ ಎಂದಿದ್ದಾರೆ.
