ಬೆಂಗಳೂರು, ಜ.25-ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಸ್ವಾಭಿಮಾನಿ ಕನ್ನಡಿಗರು ಕಿತ್ತೊಗೆಯುವ ದಿನ ಬಹಳ ದೂರವಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ಹಿಂದೂ ಸ ಮಾಜೋತ್ಸವ ಕಾರ್ಯಕ್ರಮಕ್ಕೆ ನಿರ್ಬಂಧ ಹಾಕಿರುವ ಸರ್ಕಾರದ ವಿರುದ್ಧ ತಮ್ಮ ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ಹೊರಹಾಕಿರುವ ಅವರು, ಕರ್ನಾಟಕದಲ್ಲಿರುವುದು ಪ್ರಜಾಪ್ರಭುತ್ವನಾ? ಪೊಲೀಸ್ ರಾಜ್ಯಾನಾ? ರಾಜ್ಯಪಾಲರ ಅಂಕಿತ ಬೀಳದೆ, ಸರ್ಕಾರದ ಗೆಜೆಟ್ನಲ್ಲಿ ಅಧಿಕತವಾಗಿ ಪ್ರಕಟಗೊಳ್ಳದೆ ಒಂದು ಮಸೂದೆ ಕಾನೂನಾಗುವುದಿಲ್ಲ ಎನ್ನುವ ಕನಿಷ್ಠ ಜ್ಞಾನ ಸ್ವಯಂಘೋಷಿತ ಸಂವಿಧಾನ ತಜ್ಞರು, ವಕೀಲರೂ ಆಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಇನ್ನೂ ಅಧಿಕೃತವಾಗಿ ಜಾರಿಯೇ ಆಗದ ಒಂದು ಮಸೂದೆಯನ್ನು ಉಲ್ಲೇಖಿಸಿ ಪೊಲೀಸರು ವಿಪಕ್ಷದ ಕಾರ್ಯಕರ್ತರಿಗೆ ಬೆದರಿಕೆ ಹಾಕುತ್ತಾರೆ ಎಂದರೆ ರಾಜ್ಯದಲ್ಲಿ ಪೊಲೀಸ್ ಕಚೇರಿಗಳು ಹೇಗೆ ಕಾಂಗ್ರೆಸ್ ಪಕ್ಷದ ಕಚೇರಿಗಳಾಗಿ ಮಾರ್ಪಟ್ಟಿವೆ ಎನ್ನುವುದಕ್ಕೆ ಸ್ಪಷ್ಟ ನಿದರ್ಶನವಾಗಿದೆ ಎಂದು ವಾಗ್ದಳಿ ನಡೆಸಿದ್ದಾರೆ.
ಕೇಸರಿ, ಕುಂಕುಮ ಎಂದರೆ ದ್ವೇಷ ಕಾರುವ ಕಾಂಗ್ರೆಸ್ ಪಕ್ಷ, ಹಿಂದೂಗಳ, ಹಿಂದೂ ಧರ್ಮದ ಬಗ್ಗೆ ಎಷ್ಟು ಪೂರ್ವಗ್ರಹ ಪೀಡಿತವಾಗಿದೆ ಎಂದರೆ ರಾಜ್ಯದಲ್ಲಿ ಮುಕ್ತವಾಗಿ ಗಣೇಶ ವಿಸರ್ಜನೆ ಮೆರವಣಿಗೆ ಮಾಡುವುದು ತಪ್ಪು, ಶೋಭಾಯಾತ್ರೆ, ಹಿಂದೂ ಸಮಾಜೋತ್ಸವ ಮಾಡುವುದೂ ತಪ್ಪು ಎನ್ನುವ ಪರಿಸ್ಥಿತಿ ತಂದಿಟ್ಟಿದೆ ಎಂದು ಟೀಕಿಸಿದ್ದಾರೆ.
