ಬೆಂಗಳೂರು, ಫೆ.17- ಮೆಟ್ರೋ ರೈಲು ಪ್ರಯಾಣದರ ಏರಿಕೆಗೂ ರಾಜ್ಯ ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರವೇ ಸಮಿತಿಯನ್ನು ರಚನೆ ಮಾಡಲಿದ್ದು, ಆ ಸಮಿತಿ ಶಿಫಾರಸ್ಸಿನ ಮೇಲೆ ಕೇಂದ್ರ ನಗರಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿಗಳು ದರ ಏರಿಕೆಗೆ ನಿರ್ಧಾರ ಮಾಡಿದ್ದಾರೆ ಎಂದರು.
ದರ ಏರಿಕೆ ಸಮಿತಿ ಮಾಡುವ ಶಿಫಾರಸ್ಸನ್ನು ಮೆಟ್ರೋ ಮಂಡಳಿ ಸಭೆಯಲ್ಲಿ ಮಂಡಿಸಿ ಅನುಮತಿ ಪಡೆದ ನಂತರ ಜಾರಿಗೆ ತರಲಾಗುತ್ತದೆ. ಮೆಟ್ರೋ ರೈಲು ಪ್ರಯಾಣದರ ಏರಿಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಯಾವುದೇ ಶಿಫಾರಸ್ಸು ಸಲ್ಲಿಸುವುದಿಲ್ಲ. ಇದು ಎಲ್ಲಾ ರಾಜ್ಯಗಳಿಗೂ ಅನ್ವಯವಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ನಾಯಕರು ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಜನರಿಗೆ ಹೊರೆಯಾಗುತ್ತಿದ್ದು, ಕೇಂದ್ರ ಸರ್ಕಾರ ಅನುದಾನ ನೀಡಲಿ, ಬಿಜೆಪಿಯವರು ಈ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು. ಪ್ರಧಾನಿ ನರೇಂದ್ರಮೋದಿಯವರನ್ನು ಕೇಳಲು ಬಿಜೆಪಿಯವರಿಗೆ ಧಮ್ ಇಲ್ಲ ಎಂದರು.
ಜನರ ಹಿತದೃಷ್ಟಿಯಿಂದ ಪ್ರಯಾಣ ದರ ಕಡಿಮೆ ಮಾಡಲು ಸಿಎಂ ಸಿದ್ದರಾಮಯ್ಯ ಅವರು ಮೆಟ್ರೋ ರೈಲು ನಿಗಮಕ್ಕೆ ಪತ್ರ ಬರೆದಿದ್ದರು ಬಿಎಂಆರ್ಸಿಎಲ್ನ ವ್ಯವಸ್ಥಾಪಕರು, ಕೇಂದ್ರ ನಗರಾಭಿವೃದ್ಧಿ ಕಾರ್ಯದರ್ಶಿ ಅವರೊಂದಿಗೆ ಮಾತನಾಡಿ ದರ ಕಡಿಮೆ ಮಾಡಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಮೆಟ್ರೋ ರೈಲು ಪ್ರಯಾಣ ದರ ಏರಿಕೆ ವಿಚಾರದಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ ಎಂದ ಅವರು, ಮೆಟ್ರೊ ಕಾಯ್ದೆ ಅನುಸಾರ ಸಮಿತಿ ರಚನೆಯಾಗಲಿದೆ. ಆ ಸಮಿತಿಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರು, ಕೇಂದ್ರ ನಗರಾಭಿವೃದ್ಧಿ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ, ರಾಜ್ಯ ಸರ್ಕಾರದ ಒಬ್ಬರು ಸಮಿತಿಯ ಸದಸ್ಯರಾಗಿದ್ದಾರೆ. ಈ ಸಮಿತಿ ಪ್ರಯಾಣದರ ಏರಿಕೆ ಬಗ್ಗೆ ಕೇಂದ್ರ ಸರ್ಕಾರದ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿಗೆ ವರದಿ ಸಲ್ಲುತ್ತದೆಯೇ ಹೊರತು ರಾಜ್ಯ ಸರ್ಕಾರಕ್ಕೆ ಅಲ್ಲ ಎಂದರು.
ಕೇಂದ್ರ ಸಚಿವರಾದ ಅಶ್ವಿನಿ ಶ್ರೀವೈಷ್ಣವ್, ಪ್ರಹ್ಲಾದ್ ಜೋಷಿ, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಸಂಸದರಾದ ಪಿ.ಸಿ.ಮೋಹನ್ ತೇಜಸ್ವಿ ಸೂರ್ಯ ಅವರು ಮೆಟ್ರೋ ಪ್ರಯಾಣ ದರ ಏರಿಕೆ ಬಗ್ಗೆ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ನಾವೇ ಮೆಟ್ರೋ ತಂದಿದ್ದು ಎಂದು ಪೋಸ್ ಕೊಡುತ್ತಾರೆ. ಇಂಥ ಆರೋಪಗಳ ಬಂದಾಗ ರಾಜ್ಯ ಸರ್ಕಾರದ ಮೇಲೆ ಹಾಕುತ್ತಾರೆ ಎಂದು ಹೇಳಿದರು.
ಮೆಟ್ರೊ ರೈಲು ಇರುವ ಎಲ್ಲಾ ರಾಜ್ಯಗಳಲ್ಲೂ ಇದೇ ರೀತಿ ದರ ಏರಿಕೆ ಕೋರಿ ಕೇಂದ್ರ ಸರ್ಕಾರ ಪತ್ರ ಸಲ್ಲಿಸಲಾಗುತ್ತಿದೆ. ಕೇಂದ್ರ ಸರ್ಕಾರವು ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಸಮಿತಿಯನ್ನು ರಚಿಸುತ್ತದೆ. ಅದೇ ರೀತಿ ಬೆಂಗಳೂರು ಮೆಟ್ರೋ ರೈಲು ನಿಗಮವು ಪತ್ರ ಬರೆದಿದೆ. ಅದರಂತೆ ಸಮಿತಿ ರಚನೆಯಾಗಿದೆ ಎಂದು ಸ್ಪಷ್ಟಪಡಿಸಿದರು.