ಬೆಂಗಳೂರು,ಮಾ.4- ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ಕಾಲಕಾಲಕ್ಕೆ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ಜೆಡಿಎಸ್ ಜಾತ್ಯತೀತ ದಳದ ಶಾಸಕರು ಇಂದು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ನಿನ್ನೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ಕುಮಾರಸ್ವಾಮಿ ಹಾಗೂ ಇತರ ನಾಯಕರ ನೇತೃತ್ವದಲ್ಲಿ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಾಗಿತ್ತು.ಇಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ಬಾಬು ನೇತೃತ್ವದಲ್ಲಿ ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಶಾಸಕರಾದ ಶರವಣ, ಮಂಜೇಗೌಡ, ಎಂ.ಟಿ.ಕೃಷ್ಣಪ್ಪ, ಶಾರದ ಪೂರ್ವಿನಾಯಕ್, ಕರ್ರೆಯಮ, ಹರೀಶ್ಗೌಡ, ಬಾಲಕೃಷ್ಣ ಮತ್ತಿತರರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸುರೇಶ್ಬಾಬುರವರು ರಾಜ್ಯಸರ್ಕಾರ ಮಹಿಳೆಯರಿಗೆ ಅನ್ಯಾಯ ಮಾಡುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಹಣವನ್ನು ಸ್ವಂತ ಹಣವೆಂಬಂತೆ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ. ಯಾವಾಗ ಬೇಕೋ ಆಗ ಮಾತ್ರ ಜಮೆ ಮಾಡುತ್ತಾರೆ. ಬಹುತೇಕ ಚುನಾವಣಾ ಸಂದರ್ಭದಲ್ಲೇ ಗೃಹಲಕ್ಷ್ಮಿ ಹಣ ಬಿಡುಗಡೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ವೆಂಕಟೇಶ್ ಅವರು ಅಧಿಕಾರಿಗಳಿಗೆ ಫೋನಿನಲ್ಲಿ ಧಮ್ಕಿ ಹಾಕಿದ್ದಾರೆ. ಆ ವೇಳೆ ನಮ ಪಕ್ಷದ ವಿರುದ್ಧ ಅವಾಚ್ಯ ಶಬ್ದವನ್ನು ಬಳಕೆ ಮಾಡಿದ್ದಾರೆ. ಇದರ ಬಗ್ಗೆ ನಾವು ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡುತ್ತೇವೆ. ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಮೈಕ್ರೋ ಫೈನಾನ್್ಸ ಹಾವಳಿ ರಾಜ್ಯದಲ್ಲಿ ಹೆಚ್ಚಾಗಿದೆ. ಗುತ್ತಿಗೆದಾರರ ಬಾಕಿ ಬಿಲ್ಗಳು ಬಿಡುಗಡೆಯಾಗುತ್ತಿಲ್ಲ. ಎಸ್ಸಿಪಿ/ಟಿಎಸ್ಪಿ ಹಣ ದುರ್ಬಳಕೆಯಾಗುತ್ತದೆ. ಸಚಿವರೊಬ್ಬರು ಜೈಲಿಗೆ ಹೋಗಿಬಂದರೂ ಸರ್ಕಾರಕ್ಕೆ ಬುದ್ಧಿ ಬಂದಿಲ್ಲ. ಮುಂದಿನ ದಿನಗಳಲ್ಲಿ ಜನ ಸರ್ಕಾರಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು.
ಶಾಸಕ ಎಂ.ಪಿ.ಕೃಷ್ಣಪ್ಪ ಮಾತನಾಡಿ, ಗ್ಯಾರಂಟಿ ಯೋಜನೆಯ ಹಣ ಬಿಡುಗಡೆಗೆ ದಿನಾಂಕ ನಿಗದಿ ಮಾಡಬೇಕು. ಚುನಾವಣೆ ಬಂದಾಗ 2 ಸಾವಿರ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದು, ಉಳಿದಂತೆ ಅದನ್ನು ಮುಂದೂಡಿಕೆ ಮಾಡುವುದು ಸರಿಯಲ್ಲ ಎಂದರು. ಜಿ.ಪಂ. ಹಾಗೂ ತಾ.ಪಂ. ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಾಣುವುದು ಸ್ಪಷ್ಟವಾಗಿದೆ. ಅದಕ್ಕಾಗಿಯೇ ಚುನಾವಣೆಯನ್ನು ಮುಂದೂಡಿಕೆ ಮಾಡಿಕೊಂಡು ಬರುತ್ತಿದ್ದಾರೆ. ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆ ಹಣದಿಂದ ಕಾಂಗ್ರೆಸ್ಗೆ ಲಾಭವಾಗುವುದಿಲ್ಲ ಎಂದು ಹೇಳಿದರು.