Thursday, March 6, 2025
Homeರಾಜ್ಯಸಿಎಂಗೆ ತಪ್ಪದ ಮುಡಾ ಸಂಕಷ್ಟ, ವಿಭಾಗೀಯ ಪೀಠಕ್ಕೆ ಮೇಲ್ಮನವಿ

ಸಿಎಂಗೆ ತಪ್ಪದ ಮುಡಾ ಸಂಕಷ್ಟ, ವಿಭಾಗೀಯ ಪೀಠಕ್ಕೆ ಮೇಲ್ಮನವಿ

Muda Scam : appeal to division bench

ಬೆಂಗಳೂರು,ಮಾ.5– ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ( ಮುಡಾ) ಅಕ್ರಮವಾಗಿ ನಿವೇಶನ ಪಡೆದ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಲು ನಿರಾಕರಿಸಿರುವ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ, ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ.

ಪ್ರಕರಣದ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಈ ಮೇಲನವಿ ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ. ವಿಚಾರಣಾಧೀನ ನ್ಯಾಯಾಲಯಕ್ಕೆ ಸಿಆರ್‌ಪಿಸಿ ಸೆಕ್ಷನ್‌ 156(3) ಅಡಿ ಪ್ರಕರಣವನ್ನು ಸಿಬಿಐಗೆ ವಹಿಸುವ ಅಧಿಕಾರವಿಲ್ಲ.

ಈ ಅಧಿಕಾರ ಹೈಕೋರ್ಟ್‌ಗೆ ಸಂವಿಧಾನದ 22ನೇ ವಿಧಿ ಮತ್ತು ಸುಪ್ರೀಂ ಕೋರ್ಟ್‌ಗೆ ಸಂವಿಧಾನದ 32 ಅಥವಾ 142ನೇ ವಿಧಿಯಡಿ ಮಾತ್ರ ಇದೆ ಎಂಬುದನ್ನು ಅರ್ಥೈಸಿಕೊಳ್ಳುವಲ್ಲಿ ಹೈಕೋರ್ಟ್‌ ವಿಫಲವಾಗಿದೆ. ಅಲ್ಲದೇ, ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಬೇರೆ ಯಾವುದಾದರೂ ಸ್ವತಂತ್ರ ತನಿಖಾ ಸಂಸ್ಥೆ ನಡೆಸಬೇಕು ಎಂದು ಆರಂಭದಿಂದಲೂ ಕೋರುತ್ತಿರುವುದಾಗಿ ಸ್ನೇಹಮಯಿ ಕೃಷ್ಣ ವಿವರಿಸಿದ್ದಾರೆ.

ಕಳೆದ ತಿಂಗಳು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ವಿಚಾರಣಾಧೀನ ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿದ್ದಾರೆ. ಇದನ್ನು ಪ್ರಶ್ನಿಸಿ ಪ್ರತಿಭಟನಾ ಅರ್ಜಿ ಸಲ್ಲಿಸುವುದಾಗಿ ಸ್ನೇಹಮಯಿ ಕೃಷ್ಣ ವಿಚಾರಣಾ ನ್ಯಾಯಾಲಯದಲ್ಲಿ ವಾದಿಸಿದ್ದರು. ಸ್ನೇಹಮಯಿ ಕೃಷ್ಣ ಅವರು ಈ ಹಿಂದೆ ಕರ್ನಾಟಕ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು.

ಪ್ರಕರಣವನ್ನು ಲೋಕಾಯುಕ್ತದಿಂದ ಸಿಬಿಐಗೆ ವರ್ಗಾಯಿಸಬೇಕೆಂದು ಒತ್ತಾಯಿಸಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿ.ಎಂ. ಅವರಿಗೆ 14 ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಅರ್ಜಿ ಸಲ್ಲಿಸಿದ್ದರು.ಕಳೆದ ಫೆಬ್ರವರಿ 7 ರಂದು ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿತ್ತು, ಲೋಕಾಯುಕ್ತರಿಂದ ಪಕ್ಷಪಾತ ಅಥವಾ ಕಳಪೆ ತನಿಖೆಯನ್ನು ಸೂಚಿಸಲು ಯಾವುದೇ ಪುರಾವೆಗಳಿಲ್ಲ ಎಂದು ತೀರ್ಪು ನೀಡಿತ್ತು.

ಲೋಕಾಯುಕ್ತ ತನಿಖೆಯಲ್ಲಿ ಯಾವುದೇ ಪಕ್ಷಪಾತ ಅಥವಾ ಅಸಮತೋಲಿತ ವಿಧಾನವನ್ನು ದಾಖಲೆಯಲ್ಲಿರುವ ವಿಷಯವು ಸೂಚಿಸುವುದಿಲ್ಲ ಎಂದು ಹೇಳುವ ಮೂಲಕ ಕೃಷ್ಣ ಅವರ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ ಮೂರು ವಾರಗಳ ನಂತರ ಈ ಬೆಳವಣಿಗೆ ನಡೆದಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಸಿಬಿಐನಿಂದ ಹೆಚ್ಚಿನ ತನಿಖೆ ಅಥವಾ ಮರು ತನಿಖೆ ಅಗತ್ಯವಿಲ್ಲ ಎಂದು ತೀರ್ಪು ನೀಡಿದ್ದರು.

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕ ಲೋಕಾಯುಕ್ತರು ಸಿದ್ದರಾಮಯ್ಯ, ಅವರ ಪತ್ನಿ ಮತ್ತು ಇತರ ಇಬ್ಬರಿಗೆ ಕ್ಲೀನ್‌ ಚಿಟ್‌ ನೀಡಿದ ಮೂರು ವಾರಗಳ ನಂತರ ಸ್ನೇಹಮಯಿ ಕೃಷ್ಣ ಅವರು ದ್ವಿ ಸದಸ್ಯ ಪೀಠದಲ್ಲಿ ಪ್ರಶ್ನೆ ಮಾಡಿದ್ದಾರೆ. ತನಿಖೆಯು ಆರೋಪಗಳು ನಾಗರಿಕ ಸ್ವರೂಪದ್ದಾಗಿದ್ದು, ಕ್ರಿಮಿನಲ್‌ ಮೊಕದ್ದಮೆಗಳಿಗೆ ಅರ್ಹವಲ್ಲ ಎಂದು ತೀರ್ಮಾನಿಸಿತ್ತು.

RELATED ARTICLES

Latest News