ಬೆಂಗಳೂರು, ಮಾ.7-ರಾಜ್ಯದ ಆಯ್ದ 10 ಜಿಲ್ಲೆಗಳಲ್ಲಿನ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು 2025-26ನೇ ಸಾಲಿನಲ್ಲಿ 50 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.
ವಿಧಾನಸಭೆಯಲ್ಲಿ 2025-26ನೇ ಸಾಲಿನ ಆಯವ್ಯಯ ಮಂಡಿಸಿದ ಅವರು, ರಾಜ್ಯದ ಪ್ರಮುಖ ಧಾರ್ಮಿಕ ಸ್ಥಳವಾದ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಹಾಗೂ ಬೆಂಗಳೂರಿನಲ್ಲಿರುವ ದೇವಿಕಾರಾಣಿ ರೋರಿಚ್ ಎಸ್ಟೇಟ್ ಅನ್ನು ವಿಶೇಷ ಬಂಡವಾಳ ಯೋಜನೆಯಡಿ ಒಟ್ಟಾರೆ 199 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.
ರಾಜ್ಯದ ನೂತನ ಪ್ರವಾಸೋದ್ಯಮ ನೀತಿ 2024-29ನ್ನು ಜಾರಿಗೊಳಿಸಿದ್ದು, ಈ ನೀತಿಯಿಂದ ರಾಜ್ಯದಲ್ಲಿ 8000 ಕೋಟಿ ರೂ. ಹೂಡಿಕೆಯ ನಿರೀಕ್ಷೆ ಹಾಗೂ 1.5 ಲಕ್ಷ ಉದ್ಯೋಗ ಸೃಜನೆ ಗುರಿ ಹೊಂದಿದ್ದೇವೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಅಭಿವೃದ್ಧಿ ಹಾಗೂ ರಸ್ತೆಬದಿ ಸೌಲಭ್ಯಗಳನ್ನು ಉನ್ನತೀಕರಿಸುವ ಮೂಲಕ ಶೈಕ್ಷಣಿಕ, ಆರೋಗ್ಯ, ಸಾಹಸ, ಪರಿಸರ, ಜಲಸಾರಿಗೆ ಹಾಗೂ ಕಡಲ ತೀರದ ಪ್ರವಾಸೋದ್ಯಮಗಳಿಗೆ ಲಭ್ಯವಿರುವ ಅವಕಾಶಗಳನ್ನು ಉಪಯೋಗಿಸಿಕೊಳ್ಳಲಾಗುವುದು ಎಂದು ಅವರು ಹೇಳಿದರು.
ಯುನೆಸ್ಕೋ ಪಾರಂಪರಿಕ ಪ್ರವಾಸಿ ತಾಣಗಳ ಪಟ್ಟಿಗೆ ಸೇರ್ಪಡೆಗೊಂಡಿರುವ ಬೇಲೂರು-ಹಳೇಬೀಡು-ಸೋಮನಾಥಪುರ ಪ್ರವಾಸಿ ತಾಣಗಳಲ್ಲಿ ಮೂಲಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು. ಪ್ರವಾಸಿಗರ ಸುರಕ್ಷತೆಗಾಗಿ ಪ್ರವಾಸಿ ತಾಣಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರವಾಸಿ ಮಿತ್ರರಿಗೆ ತರಬೇತಿ ನೀಡಿ ಅವರ ಸಂಖ್ಯೆಯನ್ನು 1000ಕ್ಕೆ ಹೆಚ್ಚಿಸಲಾಗುವುದು ಹಾಗೂ ಪ್ರವಾಸಿಗರಿಗೆ ಮಾಹಿತಿ ನೀಡಲು 24X7 ಪ್ರವಾಸಿ ಸಹಾಯವಾಣಿ ತೆರೆಯಲಾಗುವುದು ಎಂದು ಅವರು ತಿಳಿಸಿದರು.
ರಾಜ್ಯದ ಸ್ಮಾರಕಗಳ ಸಂರಕ್ಷಣೆಗೆ ಅಗತ್ಯವಾಗಿರುವ ಮೂಲಸೌಕರ್ಯಗಳನ್ನು ಸೃಷ್ಟಿಸಲು 25 ಸ್ಮಾರಕಗಳನ್ನು ದತ್ತು ನೀಡಲಾಗಿದೆ. ಮುಂದಿನ ಹಂತದಲ್ಲಿ ಇನ್ನೂ ಹೆಚ್ಚಿನ ಸ್ಮಾರಕಗಳನ್ನು ನಮ್ಮ ಸ್ಮಾರಕ ಡಿಜಿಟಲ್ ವೇದಿಕೆಯ ಮುಖಾಂತರ ದತ್ತು ನೀಡಲು ಉದ್ದೇಶಿಸಲಾಗಿದೆ ಎಂದರು. ರಾಜ್ಯದ ಪ್ರವಾಸಿ ತಾಣಗಳ ಸಮಗ್ರ ಮಾಹಿತಿಯನ್ನು ಸಂಗ್ರಹಿಸಲು ಒನ್ ಟ್ಯಾಕ್ ಡಿಜಿಟಲ್ ಗ್ರಿಡ್ ಅನ್ನು ಉಪಯೋಗಿಸಲಾಗುವುದು. ಐತಿಹಾಸಿಕ ಲಕ್ಕುಂಡಿಯಲ್ಲಿನ ಪಾರಂಪರಿಕ ದೇವಾಲಯಗಳನ್ನು ವಿಶ್ವಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೊಳಿಸಲು ಅಗತ್ಯ ಸೌಕರ್ಯಗಳನ್ನು ಒದಗಿಸಲಾಗುವುದು.
ಪ್ರಾಚ್ಯಾವಶೇಷಗಳ ಸಂರಕ್ಷಣೆಗಾಗಿ ಬಯಲು ವಸ್ತು ಸಂಗ್ರಹಾಲಯವನ್ನು ಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದರು. ರಾಜ್ಯದ ಸಂಸ್ಕೃತಿ, ನಾಗರಿಕತೆಯ ಉಗಮ, ವಿಕಾಸಗಳೂ ಸೇರಿದಂತೆ ಐತಿಹಾಸಿಕ ಸಾಮಾಜಿಕ ಸಂಗತಿಗಳನ್ನು ಬಿಂಬಿಸುವ ರಾಜ್ಯಮಟ್ಟದ ವಸ್ತು ಸಂಗ್ರಹಾಲಯವನ್ನು ಮೈಸೂರು ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಪ್ರಕಟಿಸಿದರು.