ಬೆಂಗಳೂರು,ಮಾ.14- ಪಂಚಾಯತ್ರಾಜ್ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳ ಮುಂಬಡ್ತಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಅರ್ಜಿ ಇತ್ಯರ್ಥವಾದ ತಕ್ಷಣವೇ ಆದಷ್ಟು ಬೇಗ ಇದರ ಬಗ್ಗೆ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದ್ದಾರೆ.
ವಿಧಾನಪರಿಷತ್ನಲ್ಲಿ ಬಿಜೆಪಿ ಸದಸ್ಯ ಚಿದಾನಂದಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪಿಡಿಒಗಳಿಗೆ 10ರಿಂದ 11 ವರ್ಷಗಳ ಕಾಲ ಮುಂಬಡ್ತಿ ನೀಡಲು ಸಾಧ್ಯವಾಗಿರಲಿಲ್ಲ. ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿರುವುದರಿಂದ ನಾವು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲು ಆಗುವುದಿಲ್ಲ. ರಿಟ್ ಅರ್ಜಿ ಇತ್ಯರ್ಥವಾದ ತಕ್ಷಣವೇ ಮುಂಬಡ್ತಿ ನೀಡುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಆಶ್ವಾಸನೆ ನೀಡಿದರು.
ಕೆಲವು ಕಡೆ 2ರಿಂದ 3 ಪಂಚಾಯ್ತಿಗಳನ್ನು ಓರ್ವ ಪಿಡಿಒಗಳೇ ಕಾರ್ಯ ನಿರ್ವಹಿಸುತ್ತಾರೆ. ಇದರಿಂದ ಕಾರ್ಯ ನಿರ್ವಹಣೆ ಸರ್ಪಕವಾಗಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪವಿದೆ. ಮುಂಬಡ್ತಿ ನೀಡಲು ನಾವು ಮುಕ್ತ ಮನಸ್ಸು ಹೊಂದಿದ್ದೇವೆ ಎಂದು ಹೇಳಿದರು.
ಕರ್ನಾಟಕ ಲೋಕಸೇವಾ ಆಯೋಗದ ಮೂಲಕ 247 ಪಿಡಿಒ ನೇಮಕಾತಿಗೆ ಸಂಬಂಧಿಸಿದಂತೆ ಪಟ್ಟಿಯನ್ನು ಪ್ರಕಟಿಸುವಂತೆ ಅಲ್ಲಿನ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದೆ. ಪರೀಕ್ಷೆ ನಡೆದು ಎರಡೂವರೆ ತಿಂಗಳು ಆಗಿರುವುದರಿಂದ ಏಕೆ ವಿಳಂಬವಾಗುತ್ತದೆ ಎಂದು ಕೇಳಿದ್ದೇವೆ. ಅಂತಿಮ ಪಟ್ಟಿಯನ್ನು ಪ್ರಕಟಿಸಿದ ನಂತರ ನಮಗೆ 247 ಹುದ್ದೆಗಳು ಲಭ್ಯವಾಗಲಿವೆ. ಇದರಿಂದ ಒಬ್ಬರಿಗೆ ಒಂದೇ ಪಂಚಾಯ್ತಿಯಲ್ಲಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದರು.
ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ದೇಶದಲ್ಲೇ ಅತಿದೊಡ್ಡ ಭ್ರಷ್ಟಾಚಾರ ನಡೆದಿದೆ. ಇಲ್ಲಿ 350 ಕೋಟಿ ರೂ. ಹಗರಣವಾಗಿರುವುದು ಕಂಡುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 37 ಪಿಡಿಒ, ಇಒ ಮತ್ತಿತರ ಅಧಿಕಾರಿಗಳನ್ನು ಅಮಾನತುಪಡಿಸಲಾಗಿದೆ ಎಂದು ತಿಳಿಸಿದರು.
ಈ ರೀತಿ ಆಗದಂತೆ ನಾವು ಸೋಷಿಯಲ್ ಆಡಿಟ್ ನಡೆಸುತ್ತಿದ್ದೇವೆ. ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಲಾಗುವುದು. 10ರಿಂದ 12 ವರ್ಷ ಉದ್ಯೋಗ ಖಾತ್ರಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪವಿದೆ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ವಿವರವನ್ನು ನೀಡಲಾಗುವುದೆಂದು ಮಾಹಿತಿ ನೀಡಿದರು.
ನರೇಗಾ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಒಟ್ಟು 344 ಸಹಾಯಕ ನಿರ್ದೇಶಕ ಹುದ್ದೆಗಳು ಖಾಲಿಯಿವೆ. ಇದನ್ನು ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲಾಗುವುದು. ಯಾರಿಗೂ ಕಾರ್ಯ ಒತ್ತಡವಾಗದಂತೆ ಕ್ರಮ ಕೈಗೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಕ್ರಮ ವಹಿಸುವುದಾಗಿ ತಿಳಿಸಿದರು.