ನವದೆಹಲಿ: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್ಗೆ ಸರಿಯಾಗಿ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್ ಈ ನಿರ್ಧಾರವನ್ನು ಕೈಗೊಂಡಿದೆ. ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ನಿನ್ನೆಯಷ್ಟೇ ಬಿಜೆಪಿ ಹೈಕಮಾಂಡ್ ಬಿಜೆಪಿ ಎರಡು ಬಣಗಳಿಗೆ ನೋಟಿಸ್ ನೀಡಿತ್ತು.
ಇದೀಗ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ 6 ವರ್ಷಗಳ ಕಾಲ ಉಚ್ಛಾಟನೆ ಮಾಡುವ ಮೂಲಕ ಶಿಸ್ತು ಕ್ರಮ ಕೈಗೊಂಡಿದೆ. ಆ ಮೂಲಕ ಅಶಿಸ್ತನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದೆ.ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟ ಈಗಾಗಲೇ ಹೈಕಮಾಂಡ್ ಅಂಗಳ ತಲುಪಿತ್ತು. ಅಲ್ಲದೇ ಈ ಬಗ್ಗೆ ರಾಷ್ಟ್ರೀಯ ನಾಯಕರ ಗಮನಕ್ಕೂ ಬಂದಿದ್ದು, ಹಲವು ಬಾರಿ ಚರ್ಚೆಗಳನ್ನೂ ನಡೆಸಿದ್ದರು.

ಬಿಜೆಪಿ ಶಾಸಕ ಯತ್ನಾಳ್ ಸದಾ ಪಕ್ಷದ ಹಾಗೂ ನಾಯಕರ ಬಗ್ಗೆ ಆರೋಪಗಳನ್ನು ಮಾಡುತ್ತಲೇ ಇದ್ದರು. ಅದರಲ್ಲೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಆಕ್ರೋಶ ಹೊರಹಾಕುತ್ತಲೇ ಇದ್ದರು. ಇದೀಗ ಬಸನಗೌಡ ಪಾಟೀಲ್ ಅವರನ್ನು ಬಿಜೆಪಿ ಕೇಂದ್ರ ಶಿಸ್ತು ಸಮಿತಿ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದೆ.
ವಿಶೇಷ ಎಂದರೆ, ಉಚ್ಚಾಟನೆ ಆದೇಶ ಹೊರಬೀಳುವ ಮೊದಲು ಯತ್ನಾಳ್ ಅವರು ದೆಹಲಿಯಲ್ಲೇ ಇದ್ದರು. ಎಂದಿನಂತೆ ಪಕ್ಷದ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಯಡಿಯೂರಪ್ಪ ವಿರುದ್ಧ ಬಹಿರಂಗ ಹೇಳಿಕೆ ನೀಡಿದ್ದ ಬೆನ್ನಲ್ಲೇ, ಉಚ್ಚಾಟನೆ ಆದೇಶ ಹೊರ ಬಿದ್ದಿದೆ.
ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದೆ ಮತ್ತು ಹಿಂದಿನ ಶೋಕಾಸ್ ನೋಟಿಸ್ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆ ಮತ್ತು ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ, ನೀವು ಪಕ್ಷದ ಶಿಸ್ತಿನ ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದೆ.
ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ ಮತ್ತು ನೀವು ಇಲ್ಲಿಯವರೆಗೆ ಹೊಂದಿದ್ದ ಯಾವುದೇ ಪಕ್ಷದ ಹುದ್ದೆಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಶಿಸ್ತು ಸಮಿತಿ ಎರಡು ಬಾರಿ ನೋಟಿಸ್ ನೀಡಿತ್ತು. ನೋಟಿಸ್ ನೀಡಿದ್ದರೂ ಪದೇ ಪದೇ ಪಕ್ಷದ ವಿರೋಧಿ ಚಟುವಟಿಕೆ, ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದರು. ಕೊನೆಗೆ ಫೆ.10 ರಂದು ಶೋಕಾಸ್ ನೋಟಿಸ್ಗೆ ಯತ್ನಾಳ್ ಉತ್ತರ ನೀಡಿದ್ದರು. ಯತ್ನಾಳ್ ಉತ್ತರ, ಸ್ಪಷ್ಟನೆ ಒಪ್ಪದ ಕೇಂದ್ರ ಶಿಸ್ತು ಸಮಿತಿ ಇಂದು ಈ ನಿರ್ಧಾರ ಕೈಗೊಂಡಿದೆ.