ನವದೆಹಲಿ, ಏ.29– ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಮೊದಲ ಬಾರಿಗೆ ನಾಳೆ ಬೆಳಿಗ್ಗೆ ಕೇಂದ್ರ ಸಚಿವ ಸಂಪುಟ ಸಭೆ ಸೇರಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ಸಭೆ ಕರೆಯಲಾಗಿದ್ದು, ಪಹಲ್ಗಾಮ್ ಘಟನೆ ಕುರಿತು ಕೇಂದ್ರ ಸರ್ಕಾರವು ಕೆಲವು ಮಹತ್ವದ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಇದೆ. ಕಳೆದ ವಾರ ಕೇಂದ್ರ ಸಚಿವ ಸಂಪುಟದ ಯಾವುದೇ ಸಭೆ ನಡೆದಿರಲಿಲ್ಲ. ಏಪ್ರಿಲ್ 23 ರಂದು ಭದ್ರತೆ ಕುರಿತ ಸಂಪುಟ ಸಮಿತಿ ಸಭೆ ನಡೆಸಿ ಭಯೋತ್ಪಾದಕ ದಾಳಿಯನ್ನು ಖಂಡಿಸಲಾಗಿತ್ತು.
ಇನ್ನೊಂದೆಡೆ ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಉದ್ಭವವಾಗಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಚೀನಾ ಹೇಳಿದೆ. ಪಾಕಿಸ್ತಾನದ ವಿದೇಶಾಂಗ ಸಚಿವ ಮೊಹಮ್ಮದ್ ಇಶಾಕ್ ದಾರ್ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿರುವ ಚೀನಾದ ವಿದೇಶಾಂಗ ಸಚಿವ ವಾಂಗ್ಯಿ, ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಉಭಯ ದೇಶಗಳು ಸಂಯಮದಿಂದ ವರ್ತಿಸಬೇಕು ಎಂದು ಸಲಹೆ ನೀಡಿದ್ದಾರೆ.
ಭಾರತ-ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಪಹಲ್ಗಾಮ್ ವಿಚಾರವಾಗಿ ಉದ್ಭವವಾಗಿರುವ ಬಿಕ್ಕಟ್ಟನ್ನು ಉಭಯ ದೇಶಗಳು ಶಾಂತ ರೀತಿಯಲ್ಲಿ ಬಗೆಹರಿಸಿಕೊಳ್ಳಬೇಕು ಎಂಬುದು ನಮ್ಮ ನಿಲುವು. ಈ ನಿಟ್ಟಿನಲ್ಲಿ ಎರಡೂ ದೇಶಗಳಿಗೆ ಅಗತ್ಯ ನೆರವನ್ನು ನೀಡಲು ಚೀನಾ ಸಿದ್ಧವಿದೆ ಎಂದು ವಾಂಗ್ಯಿ ಹೇಳಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ತನಿಖೆ ನಡೆಸುವುದನ್ನು ಚೀನಾ ಬೆಂಬಲಿಸುತ್ತದೆ. ಆದರೆ, ಈ ವಿಚಾರದಲ್ಲಿ ಉಭಯ ದೇಶಗಳು ಸಂಯಮದಿಂದ ವರ್ತಿಸಬೇಕು ಮತ್ತು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪ್ರಯತ್ನಿಸಬೇಕು ಎಂದು ವಾಂಗ್ಯಿ ಮನವಿ ಮಾಡಿದ್ದಾರೆ.
ಭಯೋತ್ಪಾದನೆಯನ್ನು ಎದುರಿಸುವುದು ಎಲ್ಲಾ ರಾಷ್ಟ್ರಗಳ ಜವಾಬ್ದಾರಿಯಾಗಿದೆ. ಭಯೋತ್ಪಾದನೆ ವಿರುದ್ಧ ಪಾಕಿಸ್ತಾನ ಕೈಗೊಂಡ ಕ್ರಮಗಳನ್ನು ಚೀನಾ ಬೆಂಬಲಿಸುತ್ತದೆ ಎಂದು ಗ್ಲೋಬಲ್ ಟೈಮ್ಸೌ ವರದಿ ಮಾಡಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಬಗ್ಗೆ, ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಅವರು ಚೀನಾದ ವಿದೇಶಾಂಗ ಸಚಿವ ವಾಂಗ್ಯಿ ಅವರಿಗೆ ಮಾಹಿತಿ ನೀಡಿದ್ದಾರೆ. ಪಾಕಿಸ್ತಾನದ ವಿರುದ್ಧ ಭಾರತ ತೆಗೆದುಕೊಳ್ಳುತ್ತಿರುವ ಕಠಿಣ ಕ್ರಮಗಳ ಬಗ್ಗೆ, ಇಶಾಕ್ ದಾರ್ ಅವರು ವಾಂಗ್ಯಿ ಅವರಿಗೆ ವಿವರಣೆ ನೀಡಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.
ಪಹಲ್ಗಾಮ್ ದಾಳಿಯ ವಿಚಾರವಾಗಿ ಚೀನಾ ಅತ್ಯಂತ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ. ಭಾರತದ ಅಸಮಾಧಾನಕ್ಕೆ ಕಾರಣವಾಗುವ ರೀತಿಯಲ್ಲಿ ಪಾಕಿಸ್ತಾನ ಪರವಾಗಿ ಯಾವುದೇ ಹೇಳಿಕೆ ನೀಡದಿರುವ ನಿರ್ಣಯ ಕೈಗೊಂಡಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆ ಪಹಲ್ಗಾಮ್ ಭಯೋತ್ಪಾದಕ ದಾಳಿಯ ತನಿಖೆಯನ್ನು ಕೈಗೆತ್ತಿಕೊಂಡಿದೆ. ಎನ್ಐಎ ಅಽಕಾರಿಗಳು ದಾಳಿ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸಾಕ್ಷ್ಯಗಳು ನಾಶವಾಗದಂತೆ ಆ ಪ್ರದೇಶವನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಏಪ್ರಿಲ್ 22ರಂದು ನಡೆದ ಭಯಾನಕ ದಾಳಿಯ ಬಗ್ಗೆ ಪ್ರತ್ಯಕ್ಷದರ್ಶಿಗಳ ವಿಚಾರಣೆ ನಡೆಸಲಾಗುತ್ತಿದೆ.
ಪಹಲ್ಗಾಮ್ ಉಗ್ರ ದಾಳಿಯಿಂದಾಗಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ತೀರಾ ಹದಗೆಟ್ಟಿದೆ. ಪಾಕಿಸ್ತಾನದ ವಿರುದ್ಧ ಭಾರತ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಇದರಿಂದ ಪಾಕಿಸ್ತಾನ ಒತ್ತಡಕ್ಕೆ ಸಿಲುಕಿದೆ.