ಬೆಂಗಳೂರು,ಫೆ.5- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯದಲ್ಲಿನ ಪಕ್ಷದ ಆಂತರಿಕ ಬಂಡಾಯ, ನಾಯಕತ್ವ ಗದ್ದಲ ಹಾಗೂ ಸಂಘಟನಾತಕ ಬೆಳವಣಿಗೆಗಳ ಕುರಿತು ಚರ್ಚಿಸಲು ದಿಢೀರ್ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ನಿಂದ ಬುಲಾವ್ ಬಂದ ಬೆನ್ನಲ್ಲೇ ಈ ಭೇಟಿ ನಡೆದಿದ್ದು,
ನೂತನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪ್ರಮುಖ ನಾಯಕರ ಭೇಟಿ ಮಾಡಿ, ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತಾಗಿ ಮಾಹಿತಿ ನೀಡುವ ಸಾಧ್ಯತೆ ಇದೆ.
ರಾಜ್ಯ ಬಿಜೆಪಿಯ ಆಂತರಿಕ ರಾಜಕಾರಣದಲ್ಲಿ ಹಠಾತ್ ಬೆಳವಣಿಗೆಗಳು ಕಂಡು ಬಂದಿರುವ ಸಂದರ್ಭದಲ್ಲೇ, ವಿಜಯೇಂದ್ರ ಅವರು ದಿಢೀರ್ ದೆಹಲಿಗೆ ತೆರಳಿದ್ದು, ಈ ಬೆಳವಣಿಗೆ ನಾಯಕತ್ವ ಬದಲಾವಣೆ ಕುರಿತು ಗುಲ್ಲೆದ್ದಿವೆ. ಹೈಕಮಾಂಡ್ ನಿರ್ಧಾರವನ್ನು ಯಾರೂ ಊಹಿಸಲು ಸಾಧ್ಯವಿಲ್ಲ, ಆದರೆ, ಎಲ್ಲಾ ಬಣಗಳನ್ನು ಒಟ್ಟಿಗೆ ಕರೆದೊಯ್ಯುವ ವ್ಯಕ್ತಿಯನ್ನು ಆಯ್ಕೆ ಮಾಡುವ ವಿಶ್ವಾಸವಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬಿಜೆಪಿಯ ಪ್ರಭಾವಿ ನಾಯಕರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮರು ನೇಮಕ ಮಾಡಲು ಸಿದ್ಧರಾಗಿದ್ದು, ಇತರರು ಬೇರೆಯದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆನ್ನಲಾಗಿದೆ.
ಪ್ರಸ್ತುತ ಕೇಂದ್ರ ಕೃಷಿ ಸಚಿವರಾಗಿರುವ ಚೌಹಾಣ್ ಅವರು,ಸದ್ಯದಲ್ಲೇ ರಾಜ್ಯಕ್ಕೆ ಬಂದು ಪಕ್ಷದ ರಾಜ್ಯಾಧ್ಯಕ್ಷರ ಹೆಸರನ್ನು ಘೋಷಿಸುವ ನಿರೀಕ್ಷೆಯಿದೆ. ವಿಜಯೇಂದ್ರ ಅವರ ದೆಹಲಿ ಭೇಟಿಯನ್ನು ಖಾಸಗಿ ಭೇಟಿ ಎಂದು ಹೇಳಲಾಗುತ್ತಿತ್ತು. ಇದು ನಾಯಕತ್ವ ವಿಚಾರಕ್ಕೆ ಸಂಬಂಧಿಸಿದ್ದು ಎನ್ನಲಾಗುತ್ತಿದ್ದು, ಭೇಟಿ ವೇಳೆ ರಾಷ್ಟ್ರೀಯ ನಾಯಕರೊಂದಿಗೆ ನಾಯಕತ್ವ ವಿಚಾರ ಕುರಿತು ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
ಒಂದು ಕಡೆಗೆ ಬಿಜೆಪಿಯಲ್ಲಿ ಒಗ್ಗಟ್ಟಿಲ್ಲ ಎಂಬ ವಿಪಕ್ಷಗಳ ಟೀಕೆಗಳು ಇದ್ದಾಗಲೇ ಗಾಲಿ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ನಡುವಿನ ಭಿನ್ನಾಭಿಪ್ರಾಯ ಬಹಿರಂಗವಾಗಿ ಸ್ಫೋಟವಾಗಿದೆ.
ಈ ಎಲ್ಲಾ ಬೆಳವಣಿಗೆಗಳಿಂದ ಕರ್ನಾಟಕ ಬಿಜೆಪಿಯು ತೀವ್ರ ಮುಜುಗರಕ್ಕೀಡಾಗಿದೆ. ಅತ್ತ, ಬಿಜೆಪಿ ಭಿನ್ನಮತೀಯ ತಂಡದವರು ನಾವು ಇಟ್ಟ ಹೆಜ್ಜೆ ಹಿಂದಿಡುವುದಿಲ್ಲ.
ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿಯೇ ತೀರುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಇಂಥ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಮಾಡುವುದು ಸೂಕ್ತವಾದ ನಿರ್ಧಾರವೇ? ಎಂಬಿತ್ಯಾದಿ ವಿಚಾರಗಳನ್ನು ಹೈಕಮಾಂಡ್ ಮುಂದಿಡಲು ವಿಜಯೇಂದ್ರ ಬಣ ನಿರ್ಧರಿಸಿದೆ ಎನ್ನಲಾಗಿದೆ.
ಬಿ.ವೈ.ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಯಬಾರದು ಎಂದು ರೆಬೆಲ್ ಬಣ ಪಟ್ಟು ಹಿಡಿದಿದೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮುಂದುವರಿಸುವುದಾದರೆ ಚುನಾವಣೆಯಲ್ಲಿ ತಮ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂಬ ಎಚ್ಚರಿಕೆ ನೀಡಿದೆ. ಇದು ಹೈಕಮಾಂಡ್ ತಲೆ ನೋವಿಗೆ ಕಾರಣವಾಗಿದೆ.
