ಲಕ್ನೋ, ಮೇ.15-ಇಲ್ಲಿನ ಮೋಹನ್ ಲಾಲ್ಗಂಜ್ ಪ್ರದೇಶದಲ್ಲಿ ಮುಂಜಾನೆ ಚಲಿಸುತ್ತಿದ್ದ ಖಾಸಗಿ ಬಸ್ಗೆ ಬೆಂಕಿ ಹೊತ್ತಿಕೊಂಡು ಇಬ್ಬರು ಮಕ್ಕಳು ಸೇರಿದಂತೆ ಐದು ಮಂದಿ ಸಾವನ್ನಪ್ಪಿದ್ದಾರೆ. ಲಕ್ಷೆದ ಹೊರವಲಯದಲ್ಲಿರುವ ಪ್ರಮುಖ ರಸ್ತೆಯಾದ ಕಿಸಾನ್ ಪಥ್ನಲ್ಲಿ ಬೆಳಿಗ್ಗೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ಬಸ್ 80 ಪ್ರಯಾಣಿಕರಿದ್ದರು ಮತ್ತು ಇದು ಬಿಹಾರದ ಬೇಗುಸರಾಯ್ನಿಂದ ದೆಹಲಿಗೆ ತೆರಳುತ್ತಿದ್ದಾಗ ಮಾರ್ಗಮಧ್ಯೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಸಹಾಯಕ ಪೊಲೀಸ್ ಆಯುಕ್ತ ರಜನೀಶ್ ವರ್ಮಾ ಹೇಳಿದ್ದಾರೆ. ಬಸ್ನ ಗೇರ್ಬಾಕ್ಸ್ ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಬೆಂಕಿ ಹೊತ್ತಿಕೊಂಡಾಗ ಹೆಚ್ಚಿನ ಪ್ರಯಾಣಿಕರು ನಿದ್ರಿಸುತ್ತಿದ್ದರು. ಹವಾನಿಯಂತ್ರಿತ ಹೊಂದಿದ್ದ ಹಿನ್ನಲೆಯಲ್ಲಿ ವೇಗವಾಗಿ ಹರಡಿತು.
ಎಚ್ಚತ್ತ ಚಾಲಕ ಬಸ್ ನಿಲಿಸಿದಾಗ ಕೆಲವು ಪ್ರಯಾಣಿಕರು ಜೀವು ಉಳಿಸಿಕೊಳ್ಳಲು ತಮ್ಮ ವಸ್ತುಗಳನ್ನು ಅಲ್ಲೆ ಬಿಟ್ಟ ಹೊರಗೆ ಬಂದಿದ್ದಾರೆ. ಈ ವೇಳೆ ಇಬ್ಬರು ಮಹಿಳೆಯರು, ಇಬ್ಬರು ಮಕ್ಕಳು ಮತ್ತು ಒಬ್ಬ ಪುರುಷ ಹೊರಬರಲು ಸಾಧ್ಯವಾಗದೆ ಸಜೀವ ದಹನಗೊಂಡಿದ್ದಾರೆ. ಇತರ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆ ಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಜ್ವಾಲೆಗಳು ಸುಮಾರು ಒಂದು ಕಿಲೋಮೀಟರ್ ದೂರದಿಂದ ಗೋಚರಿಸುತ್ತಿದ್ದವು. ಬೆಂಕಿ ಹೊತ್ತಿಕೊಂಡ ತಕ್ಷಣ ಬಸ್ ನಿಲ್ಲಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ತಲುಪಿ ಅರ್ಧ ಗಂಟೆಯೊಳಗೆ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು. ಬಸ್ನ ತುರ್ತು ನಿರ್ಗಮನ ಬಾಗಿಲು ತೆರೆಯಲು ವಿಫಲವಾದ ಕಾರಣ ಹಿಂಭಾಗದಲ್ಲಿ ಕುಳಿತಿದ್ದ ಪ್ರಯಾಣಿಕರು ಒಳಗೆ ಸಿಲುಕಿಕೊಂಡಿದ್ದಾರೆ.ಬೆಂಕಿಯ ನಿಖರವಾದ ಕಾರಣವನ್ನು ನಿರ್ಧರಿಸಲು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. |