ಬೆಂಗಳೂರು, ಫೆ.7- ಸುದ್ದಗುಂಟೆ ಪಾಳ್ಯದಲ್ಲಿ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಸಾದಿಕ್ ಪಾಷ ಎಂಬಾತ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.
ಲೋ ಬಿಪಿ ಮತ್ತು ಹೈ ಶುಗರ್ನಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ, ಹೆಚ್ಚಿನ ಚಿಕಿತ್ಸೆಗಾಗಿ ಜೈಲಿನ ಅಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದ.
ಕಳೆದ 2020ರಲ್ಲಿ ಸುದ್ದಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತನಿಖೆ ಕೈಗೊಂಡು ಸಾದಿಕ್ ಸೇರಿದಂತೆ ಆರು ಶಂಕಿತರನ್ನು ಬಂಧಿಸಲಾಗಿತ್ತು. ಪ್ರಸ್ತುತ ಸಾದಿಕ್ ಸಾವಿನ ಹಿನ್ನೆಲೆಯಲ್ಲಿ ಜೈಲಿನ ಅಧಿಕಾರಿಗಳು ಅಗತ್ಯ ಕಾನೂನು ಪ್ರಕ್ರಿಯೆ ಕೈಗೊಂಡಿದ್ದಾರೆ. ಎನ್ಐಎ ಅಧಿಕಾರಿಗಳಿಗೂ ಕೂಡ ಈ ಕುರಿತು ಮಾಹಿತಿ ನೀಡಲಾಗಿದೆ.
