ಬೆಂಗಳೂರು, ಜೂ.7- ರಾಜ್ಯದಲ್ಲಿ ಕಳೆದ 8-10 ದಿನಗಳಿಂದ ದುರ್ಬಲಗೊಂಡಿದ್ದ ನೈರುತ್ಯ ಮುಂಗಾರು ಮತ್ತೆ ಚೇತರಿಸಿಕೊಂಡಿದೆ. ರಾಜ್ಯದಲ್ಲಿ ಮತ್ತೊಂದು ಸುತ್ತಿನ ಮಳೆ ಆರಂಭವಾಗಲಿದೆ. ಇಂದಿನಿಂದ ರಾಜ್ಯದ ಕೆಲವೆಡೆ ಚದುರಿದಂತೆ ಮಳೆಯಾಗಲಿದ್ದು, ಜೂ.9ರಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ.
ಒಳನಾಡಿನಲ್ಲಿ ಟ್ರಫ್ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ರಾಜ್ಯದ ಹಲವೆಡೆ ಇಂದಿನಿಂದ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಇಂದು ಮತ್ತು ನಾಳೆ ರಾಜ್ಯದ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಜೂ.9ರಿಂದ 13ರವರೆಗೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆಗಳಿವೆ. ಅಲ್ಲದೆ ಈ ಅವಧಿಯಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಹೆಚ್ಚಾಗಲಿದೆ ಎಂದು ಅವರು ಹೇಳಿದ್ದಾರೆ. ರಾಜಧಾನಿ ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ತಿಳಿಸಿದ್ದಾರೆ.