ಬೆಂಗಳೂರು, ಜೂ.9- ಗೃಹ ಸಚಿವ ಡಾ. ಜಿ ಪರಮೇಶ್ವರ್ ಇಂದು ಬೆಳಗ್ಗೆ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಅವರನ್ನು ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ. ಪರಮೇಶ್ವರ್ ಅವರ ಶೈಕ್ಷಣಿಕ ಸಂಸ್ಥೆಗಳ ಮೇಲೆ ಇತ್ತೀಚೆಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿ, ಎರಡು ದಿನ ದಾಖಲಾತಿಗಳ ಪರಿಶೋಧನೆ ನಡೆಸಿದ್ದರು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಕಾಲ್ತುಳಿತ ಪ್ರಕರಣದಲ್ಲಿ ಹನ್ನೊಂದು ಮಂದಿ ಅಮಾಯಕರು ಜೀವ ಕಳೆದುಕೊಂಡಿದ್ದರು. ಈ ಪ್ರಕರಣದಲ್ಲಿ ಬಿಜೆಪಿ ಆರಂಭದಲ್ಲಿ ಸಚಿವ ಪರಮೇಶ್ವರ್ ಅವರ ರಾಜೀನಾಮೆಗೆ ಒತ್ತಾಯಿಸಿತ್ತು.
ಇದ್ದಕ್ಕಿದ್ದಂತೆ ಬಿಜೆಪಿಯ ಬೇಡಿಕೆ ಬದಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಪಟ್ಟು ಹಿಡಿದಿವೆ. ಸೋಮಣ್ಣ ಅವರು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ. ಆದರೆ ಪರಮೇಶ್ವರ್ ವಿಷಯ ಬಂದಾಗ ಮೃದು ಧೋರಣೆ ಅನುಸರಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಸೋಮಣ್ಣ ಮತ್ತು ಪರಮೇಶ್ವರ್ ಭೇಟಿ ನಾನಾ ಚರ್ಚೆಗಳಿಗೆ ಕಾರಣವಾಗಿದೆ.ಸೋಮಣ್ಣ ಅವರ ಭೇಟಿಯ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಿಂದ ತುಮಕೂರಿಗೆ ಹೋಗುವಾಗ ಕಣ್ಣು ಮುಚ್ಚಿ ತೆಗೆಯುವಷ್ಟರಲ್ಲಿ ತಲುಪಿರುತ್ತೇವೆ. ತುಮಕೂರು ಎಲ್ಲಿ ಇದೆ ಎಂಬುದೇ ಗೊತ್ತಾಗುವುದಿಲ್ಲ. ಅದಕ್ಕಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತುಮಕೂರು ಪ್ರದೇಶದ ಆರಂಭದಲ್ಲಿ ಸ್ವಾಗತ ಕಮಾನು ಅಳವಡಿಸಲು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 5 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ ಎಂದು ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರದ ಸ್ಥಳೀಯ ನಿರ್ದೇಶಕರು ಸ್ವಾಗತಕಮಾನು ಅಳವಡಿಕೆಗೆ ಅನುಮತಿ ನಿರಾಕರಿಸಿದ್ದಾರೆ. ಇದಕ್ಕಾಗಿ ಸೋಮಣ್ಣ ಅವರನ್ನು ಭೇಟಿ ಮಾಡಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಂದ ಅನುಮತಿ ಕೊಡಿಸುವಂತೆ ಮನವಿ ಮಾಡಿದ್ದೇನೆ ಎಂದರು. ರಾಮನಗರವನ್ನು ಬೆಂಗಳೂರಿಗೆ ಸೇರಿಸಿಕೊಂಡಂತೆ ತುಮಕೂರನ್ನು ಅಭಿವೃದ್ಧಿ ದೃಷ್ಟಿಯಿಂದ ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರಿಸುವಂತೆ ಮನವಿ ಮಾಡಿದ್ದೇವೆ.ತುಮಕೂರಿಗೆ ಮೆ ಟ್ರೋ ರೈಲ್ವೆ ಯೋಜನೆ ನಿರ್ಮಾಣವಾಗಬೇಕು ಎಂಬ ಬೇಡಿಕೆಗೆ ಸೋಮಣ್ಣ ಕೂಡ ಬೆಂಬಲ ವ್ಯಕ್ತ ಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಇಂದು ಸೋಮಣ್ಣ ಅವರ ಜೊತೆ ಚರ್ಚೆ ನಡೆಸಲಾಗಿದೆ ಎಂದರು.
ಮೆಟ್ರೊ ಮತ್ತು ಸಬರ್ಬಂದ್ ರೈಲ್ ಎರಡೂ ಕೂಡ ತುಮೂರಿಗೆ ಬರುವುದು ಒಳ್ಳೆಯದು. ಅಲ್ಲಿ ಬೃಹತ್ ಕೈಗಾರಿಕಾ ಪಾರ್ಕ್ ನಿರ್ಮಾಣವಾಗಿದೆ. ಉದ್ಯೋಗವಕಾಶಗಳು ಹೆಚ್ಚುತ್ತಿವೆ ಎಂದರು.ಜಿಲ್ಲೆಯಿಂದ ಹಲವರು ನೀರಾವರಿ ಯೋಜನೆಗಳ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಅವುಗಳ ಅಂಗೀಕಾರಕ್ಕೆ ಸಂಬಂಧ ಪಟ್ಟಂತೆಯೂ ಸೋಮಣ್ಣ ಅವರೊಂದಿಗೆ ಚರ್ಚಿಸಲಾಗಿದೆ. ಅವರು ನೀರಾವರಿ ಸಚಿವರಾಗಿರವುದರಿಂದ ಶೀಘ್ರ ನಿರ್ಧಾರ ತೆಗೆದುಕೊಳ್ಳಲು ಅನುಕೂಲವಾಗಲಿದೆ ಎಂದರು.