Thursday, June 26, 2025
Homeರಾಜ್ಯಮಳೆ ಅಬ್ಬರ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಳೆ ಅಬ್ಬರ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ದ.ಕನ್ನಡ/ಉ.ಕನ್ನಡ,ಜೂ.12-ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ದ.ಕನ್ನಡ/ಉ.ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮುಂಗಾರು ಮಳೆ ಆರ್ಭಟ ಹೆಚ್ಚಾಗಿದ್ದು, ಹಲವೆಡೆ ಜನರ ಜೀವನ ಅಸ್ತವ್ಯಸ್ಥವಾಗಿದ್ದು, ಮತ್ತೆ ಕೆಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಾರವಾರ, ಮಂಗಳೂರು, ಉಡುಪಿ, ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.
ದ.ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ ಪ್ರಾಥಮಿಕ ಪ್ರೌಢಶಾಲೆ ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದೆ.

ಅವಳಿ ನಗರ ಹುಬ್ಬಳ್ಳಿ-ಧಾರವಾಡದಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಹೊಲಗದ್ದೆಗಳು ಜಲಾವೃತಗೊಂಡಿವೆ. ಮನೆಗಳಿಗೆ ನೀರು ನುಗ್ಗಿ ಹಲವು ಪ್ರದೇಶಗಳ ಜನ ರಾತ್ರಿಯಿಡೀ ಜಾಗರಣೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹುಬ್ಬಳ್ಳಿಯಲ್ಲಿ ಭಾರೀ ಮಳೆಗೆ ವ್ಯಕ್ತಿಯೊಬ್ಬ ಕೊಚ್ಚಿ ಹೋಗಿದ್ದಾನೆ. ಹುಸೇನ ಮಾಬುಸಾಬ ಕಳಸ (55) ಬಿರಬಂದ ಒನಿಯ ನಿವಾಸಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ. ಬೈಕ್‌ನಲ್ಲಿ ಬರುತ್ತಿದ್ದ ವೇಳೆ ನಗರದ ಮಾವನೂರ ರೋಡ್‌ ಬ್ರಿಡ್ಜ ಹತ್ತಿರ, ಚರಂಡಿಯ ಮಳೆ ನೀರಿಗೆ ಕೊಚ್ಚಿ ಹೋಗಿದ್ದಾನೆ, ಬೈಕ್‌ ಹಿಂದೆ ಕುಳಿತ ವ್ಯಕ್ತಿ ಮಹದ್‌ ರಫೀಕ್‌ ಮುಲ್ಲಾ ಪಾರಾಗಿದ್ದಾರೆೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಹುಬ್ಬಳ್ಳಿಯ ಹುಣಕಲ್‌ ಕೆರೆ ಕೋಡಿ ಬಿದ್ದು ತುಂಬಿ ಹರಿದಿದೆ. ಧಾರವಾಡ ಜಿಲ್ಲೆಯ ಬೆಣ್ಣೆಹಳ್ಳ ಮತ್ತು ತುಪ್ಪರಿಹಳ್ಳದ ಅಚ್ಚುಕಟ್ಟು ಪ್ರದೇಶದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ ಪ್ರವಾಹ ಪರಿಸ್ಥಿತಿ ಉಂಟಾಗುವ ಆತಂಕ ಎದುರಾಗಿದೆ. ನವಲುಗುಂದ ತಾಲೂಕಿನ ಯಮನೂರು ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿ ಜನರು ನೀರನ್ನು ಹೊರಹಾಕಲು ಹರಸಾಹಸ ಪಡುತ್ತಿದ್ದ ದೃಶ್ಯ ಕಂಡುಬಂದಿತು. ಹುಬ್ಬಳ್ಳಿಯ ನೇಕಾರನಗರ ವಾರ್ಡ್‌ನ ರಂಭಾಪುರ ಕಾಲೋನಿಯಲ್ಲಿ ನೂರಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಅವಳಿನಗರದಲ್ಲಿ ಅನಾವಶ್ಯವಾಗಿ ಜನರು ಮನೆಯಿಂದ ಹೊರಬರಬಾರದು ಎಂದು ಮಹಾನಗರ ಪಾಲಿಕೆ ಮನವಿ ಮಾಡಿದೆ.

ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಸೂಚಿಸಿದೆ. ಧಾರವಾಡ ಜಿಲ್ಲೆಗೆ ಈಗಾಗಲೇ ರೆಡ್‌ ಅಲರ್ಟ್‌ ಘೋಷಿಸಿದೆ. ದಾವಣಗೆರೆ ಜಿಲ್ಲೆಯಾದ್ಯಂತ ಕೂಡ ಭಾರೀ ಮಳೆ ಬಿದ್ದಿದೆ. ಪೂರ್ವ ಮುಂಗಾರಿನಿಂದ ಹೊಲಗದ್ದೆಗಳನ್ನು ಹದ ಮಾಡಿಟ್ಟುಕೊಂಡು ಬಿತ್ತನೆ ಮಾಡಿಕೊಂಡಿದ್ದ ರೈತಾಪಿ ವರ್ಗಕ್ಕೆ ನಿನ್ನೆಯಿಂದ ಮಳೆ ಸುರಿಯುತ್ತಿರುವುದರಿಂದ ಸಂತಸ ಉಂಟಾಗಿದೆ. ದ.ಕನ್ನಡ, ಧಾರವಾಡ, ಉ.ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಭಾರೀ ಮಳೆ ಬೀಳೂವ ಸೂಚನೆಯಿದ್ದು, ಕಟ್ಟೆಚ್ಚರ ವಹಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ನೀರು ಇರುವ ತಗ್ಗುಪ್ರದೇಶ, ಕೆರೆ, ನದಿನೀರು, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗೃತಿ ವಹಿಸಲು ಸೂಚನೆ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದುಕೊಂಡು ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ನಿರ್ವಹಿಸಬೇಕು. ಪ್ರವಾಸಿಗರು, ಸಾರ್ವಜನಿಕರು ನದಿ ತೀರ ಮತ್ತು ಸಮುದ್ರ ತೀರಕ್ಕೆ ತೆರಳಬಾರದು. ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರ ತೆರೆದು ಸನ್ನದ್ಧರಾಗಿಟ್ಟುಕೊಳ್ಳಬೇಕೆಂದು ಸೂಚಿಸಲಾಗಿದೆ.

RELATED ARTICLES

Latest News