ಹುಬ್ಬಳ್ಳಿ/ಚಿಕ್ಕಮಗಳೂರು,ಜೂ.13- ಮುಂಗಾರು ಮಳೆಯ ಅಬ್ಬರಕ್ಕೆ ಉತ್ತರಕರ್ನಾಟಕ ತತ್ತರಗೊಂಡಿದೆ. ಮಲೆನಾಡು ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಜೋರಾಗಿದ್ದು, ಹಳ್ಳಕೊಳ್ಳಗಳು ತುಂಬಿ, ನದಿಗಳು ಉಕ್ಕಿಹರಿಯುತ್ತಿವೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಭಾರೀ ಮಳೆಗೆ ಇಬ್ಬರು ಸಾವನ್ನಪ್ಪಿದ್ದಾರೆ. ಗೋಕಾಕ್ನಲ್ಲಿ ಒಬ್ಬರು ಬಲಿಯಾಗಿದ್ದಾರೆ. ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ನದಿಗಳು ಉಕ್ಕಿ ಹರಿದು, ಹೊಲಗದ್ದೆಗಳು ಜಲಾವೃತಗೊಂಡಿವೆ. ಬೆಣ್ಣೆಹಳ್ಳ ತುಂಬಿ ಹರಿದ ಪರಿಣಾಮ ಹಲವು ಗ್ರಾಮಗಳಿಗೆ ನೀರು ನುಗ್ಗಿ ಜನ ಮನೆಯಿಂದ ನೀರನ್ನು ಹೊರಹಾಕುವಲ್ಲಿ ಹರಸಾಹಸ ಪಡುತ್ತಿದ್ದಾರೆ. ಕಾರವಾರ, ಗದಗ ನಗರಗಳಲ್ಲೂ ಕೂಡ ಭಾರೀ ಮಳೆ ಬಿದ್ದ ಪರಿಣಾಮ ರಸ್ತೆಗಳೆಲ್ಲಾ ಜಲಾವೃತಗೊಂಡಿವೆ. ಹೊಲಗದ್ದೆಗಳಿಗೆ ನೀರು ನುಗ್ಗಿದೆ. ಹಲವು ಮನೆಗಳು ಕುಸಿತವಾಗಿವೆ. ನೂರಾರು ಎಕರೆಯಲ್ಲಿದ್ದ ಬೆಳೆ ನಾಶವಾಗಿದೆ.
ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ನಿನ್ನೆ ಹುಬ್ಬಳ್ಳಿ ನೇಕಾರ ನಗರದಲ್ಲಿ ಮಳೆಯಲ್ಲಿ ಬೈಕ್ ಸವಾರ ಹುಸೇನ್ ಕೊಚ್ಚಿ ಹೋಗಿ ಸಾವನ್ನಪ್ಪಿದ್ದು, ಹಿಂಬದಿ ಸವಾರನನ್ನು ರಕ್ಷಿಸಲಾಗಿದೆ. ಹುಬ್ಬಳ್ಳಿಯಾದ್ಯಂತ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಹುಬ್ಬಳ್ಳಿ ತಾಲ್ಲೂಕಿನ ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸಾವಿರಾರು ಎಕರೆ ಜಮೀನು ಜಲಾವೃತಗೊಂಡು ಬೆಳೆ ನಷ್ಟ ಉಂಟಾಗಿದೆ.
ಆರಂಭದಲ್ಲಿ ಮುಂಗಾರುಮಳೆ ಅಬ್ಬರಿಸುತ್ತಿದ್ದು, ಉತ್ತರ ಕನ್ನಡ, ಕರಾವಳಿ, ಮಧ್ಯಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನು ಒಂದು ವಾರ ಕಾಲ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ.