ಬೆಂಗಳೂರು,ಜೂ.16- ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಸಂಬಂಧ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ನಾಳೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲು ರಾಜ್ಯ ಬಿಜೆಪಿ ತೀರ್ಮಾನಿಸಿದೆ. ಸಿಎಂ, ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ಮತ್ತು ಸಿಎಂ ನಿವಾಸ ಮುತ್ತಿಗೆ ಕಾರ್ಯಕ್ರಮ ಹಮಿಕೊಳ್ಳಲಾಗಿದ್ದು, ಪ್ರತಿಭಟನೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಮಂಡಲದ ಉಭಯ ಸದನಗಳ ಪ್ರತಿಪಕ್ಷದ ನಾಯಕರಾದ ಆರ್.ಅಶೋಕ್, ಚಲುವಾದಿ ನಾರಾಯಣಸ್ವಾಮಿ, ಶಾಸಕರು, ವಿಧಾನ ಪರಿಷತ್ ಸದಸ್ಯರು ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ.
ಕಾಲ್ತುಳಿತ ಪ್ರಕರಣ ಸರಕಾರಕ್ಕೆ ತೀವ್ರ ಮುಜುಗರ ತಂದಿದ್ದರೂ ಪ್ರತಿಪಕ್ಷಗಳು ಕೇವಲ ಸಾಮಾಜಿಕ ಜಾಲತಾಣಕ್ಕೆ ಸೀಮಿತವಾಗಿವೆ ಎಂಬ ಆರೋಪ ಕೇಳಿಬಂದಿತ್ತು. ಆದರೀಗ ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಬಿಜೆಪಿ ತೀರ್ಮಾನಿಸಿದೆ. ಇದಾದ ಬಳಿಕ ಸ್ಥಳೀಯ ನಾಯಕರ ನೇತೃತ್ವದಲ್ಲಿ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಬೇಕೆಂಬ ಸೂಚನೆ ನೀಡಲಾಗಿದೆ. ಕಾಲ್ತುಳಿತದ ಇಡೀ ಘಟನೆಯ ಹೊಣೆಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹೊತ್ತು ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತಿರುವ ಬಿಜೆಪಿ ರಾಜ್ಯ ಮಟ್ಟದ ಪ್ರತಿಭಟನೆಯನ್ನು ನಡೆಸಲು ಮುಂದಾಗಿದೆ. ಪ್ರತಿಭಟನೆಯಲ್ಲಿ ಕನಿಷ್ಠ 10 ಸಾವಿರ ಜನರನ್ನು ಸೇರಿಸುವ ಸಾಧ್ಯತೆ ಇದೆ. ಈ ಮೂಲಕ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ದಪಡಿಸಿಕೊಂಡಿದೆ.
ಇದೇ ವೇಳೆ ಜಾತಿ ಗಣತಿಯ ಮರು ಸಮಿಕ್ ಸರಕಾರ ತೀರ್ಮಾನಿಸಿರುವುದನ್ನು ವಿರೋಧಿಸಲು ಪಕ್ಷ ತೀರ್ಮಾನಿಸಲಾಗಿದೆ. ವಿಜಯೋತ್ಸವಕ್ಕೆ ಭದ್ರತೆ ಒದಗಿಸಲು ಆಗುವುದಿಲ್ಲ ಎಂದು ಪೊಲೀಸ್ ಇಲಾಖೆ ಹೇಳಿತ್ತು. ಆದರೆ ಸರಕಾರ ಅದೇ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಿದೆ. ಖಡಕ್ ಪೊಲೀಸ್ ಕಮಿಷನರ್ ಮೇಲೆ ಕ್ರಮ ತೆಗೆದುಕೊಂಡಿದ್ದಾರೆ. ಈ ಎಲ್ಲ ಕೇಸ್ ಮುಚ್ಚಿಹಾಕಲು ಜಾತಿಗಣತಿ ಅಡ್ಡ ತಂದಿದ್ದಾರೆ. ಕಾಲ್ತುಳಿತದ ಘಟನೆಯ ನೇರ ಹೊಣೆ ಸಿಎಂ, ಡಿಸಿಎಂ ಹೊರಬೇಕು. ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂಬುದು ಬಿಜೆಪಿ ಒತ್ತಾಯವಾಗಿದೆ.