ಕೋಲಾರ,ಜೂ.24-ಮಾವಿನ ಹಣ್ಣಿಗೆ ಬೆಂಬಲ ಬೆಲೆಗೆ ಪಟ್ಟು ಹಿಡಿದು ಕೋಲಾರದಲ್ಲಿ ಮಾವು ಬೆಳೆಗಾರರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.ನಗರದ ಹೊರ ವಲಯದ ಕೊಂಡರಾಜನಹಳ್ಳಿ ಬಳಿ ಬೆಂಗಳೂರು-ಚೆನೈ ರಾಷ್ಟ್ರೀಯ ಹೆದ್ದಾರಿ ತಡೆದು, ಮಾವಿನ ಹಣ್ಣನ್ನು ರಸ್ತೆಯಲ್ಲಿ ಸುರಿದು ರೈತರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ 22 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಬಂದ್, ಹೋರಾಟ ಮಾಡಿದರೂ ಪ್ರಯೋಜನವಾಗಿಲ್ಲ. ಇದರಿಂದ ಹೆದ್ದಾರಿ ತಡೆದು ರೈತರು ಪ್ರತಿಭಟನೆ ಆರಂಭಿಸಿದ್ದಾರೆ.
ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನು ನೀಡುವಂತೆ ರೈತರು ಒತ್ತಾಯಿಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಶಾಸಕರ ವಿರುದ್ಧ ಧಿಕ್ಕಾರ ಕೂಗಿ ರೈತರು ಆಕ್ರೋಶ ಹೊರಹಾಕುತ್ತಿದ್ದಾರೆ.
ಮಾವು ಬೆಳೆಗಾರರನ್ನು ಸರ್ಕಾರ ಬೀದಿಗೆ ತಳ್ಳಿದೆ ಇತ್ತೀಚೆಗೆ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರು ಮಾವು ಬೆಳೆಗೆ ಬೆಂಬಲ ಬೆಲೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು ಆದರೆ ಅದನ್ನು ಮರೆತ್ತಿದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯಿಂದ ಹೆದ್ದಾರಿಯಲ್ಲಿ ಟ್ರಫಿಕ್ ಜಾಮ್ ಉಂಟಾಗಿದ್ದು ಬಹುದೂರ ವಾಹನಗಳು ನಿಂತಲ್ಲೇ ನಿಂತುಕೊಂಡಿದೆ.ರೈತರ ಮನವೊಲಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.