ಬೆಂಗಳೂರು, ಫೆ.10- ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದು, ಅಲ್ಲಿ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಮಾಗಡಿ ಕ್ಷೇತ್ರದ ಶಾಸಕ ಹೆಚ್.ಸಿ.ಬಾಲಕೃಷ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ಭೇಟಿ ನೀಡುವುದರಲ್ಲಿ ವಿಶೇಷತೆ ಏನಿಲ್ಲ. ಪಕ್ಷ ಹಾಗೂ ಸರ್ಕಾರದ ಕೆಲಸಗಳಿಗೆ ಭೇಟಿ ನೀಡಿರುತ್ತಾರೆ. ವರಿಷ್ಠರ ಜೊತೆ ಚರ್ಚೆ ಮಾಡುತ್ತಾರೆ ಎಂದು ಹೇಳಿದರು.
ನಾಯಕತ್ವ ಬದಲಾವಣೆ ಕುರಿತು ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ಮತ್ತು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಅವರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಅವರಿಬ್ಬರು ವಿಶೇಷ ವ್ಯಕ್ತಿಗಳು. ಅವರು ನೀಡುವ ಹೇಳಿಕೆಗಳಿಗೆ ಅವರೇ ಸ್ಪಷ್ಟನೆ ನೀಡಬೇಕು ಎಂದರು.
ನಾಯಕತ್ವದ ವಿಚಾರವಾಗಿ ಹೈಕಮಾಂಡ್ ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ. ಇದರಲ್ಲಿ ರಾಜ್ಯದ ಯಾವ ನಾಯಕರು ಹೇಳಿಕೆ ನೀಡಿದರೂ ಪ್ರಯೋಜನ ಇಲ್ಲ ಎಂದರು.
ಗುತ್ತಿಗೆ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಮೀಸಲಾತಿ ನೀಡಿರುವುದು ಹಾಗೂ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿರುವುದನ್ನು ಹೆಚ್.ಸಿ.ಬಾಲಕೃಷ್ಣ ಸಮರ್ಥಿಸಿಕೊಂಡರು. ಸಾಮಾಜಿಕವಾಗಿ ಹಿಂದುಳಿದವರನ್ನು ಮುಖ್ಯ ವಾಹಿನಿಗೆ ತರುವುದು ಕಾಂಗ್ರೆಸ್ ಸರ್ಕಾರದ ಮೂಲ ಉದ್ದೇಶ. ಎಲ್ಲಾ ಸಮುದಾಯಕ್ಕೂ ನಮ ಸರ್ಕಾರದಲ್ಲಿ ಸಮಾನ ಆದ್ಯತೆ ನೀಡಲಾಗುತ್ತಿದೆ. ಪರಿಶಿಷ್ಟರು, ಅಲ್ಪಸಂಖ್ಯಾತರು ಸೇರಿ ತುಳಿತಕ್ಕೆ ಒಳಗಾದವರನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಸೂಕ್ತ ಯೋಜನೆಗಳನ್ನು ರೂಪಿಸಲಾಗುತ್ತದೆ ಎಂದು ಹೇಳಿದರು.
ವಿರೋಧ ಪಕ್ಷದವರಿಗೆ ಬೇರೆ ವಿಷಯಗಳಿಲ್ಲ. ಅದಕ್ಕಾಗಿ ದುರುದ್ದೇಶಪೂರ್ವಕವಾಗಿ ಅಲ್ಪಸಂಖ್ಯಾತರನ್ನು ನೆಪ ಮಾಡಿಕೊಂಡು ರಾಜಕೀಯ ದುರುದ್ದೇಶದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅಸಮಧಾನ ವ್ಯಕ್ತ ಪಡಿಸಿದರು.
