ಬೆಂಗಳೂರು,ಜೂ.30– ರಾಜಕೀಯ ಕ್ರಾಂತಿ ಎಂಬ ಅನಾವಶ್ಯಕವಾದ ಹೇಳಿಕೆಯಿಂದ ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ಒಳ್ಳೆಯದಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದರು.ಕೆಲವರಿಗೆ ಮೈಕ್ ಸಿಕ್ಕಾಗ ಮಾತನಾಡುವ ಅಭ್ಯಾಸ ಇರುತ್ತದೆ. ಅದರಿಂದ ಪಕ್ಷಕ್ಕೆ ಮತ್ತು ಸರ್ಕಾರಕ್ಕೆ ಆಗುವ ಪರಿಣಾಮಗಳ ಬಗ್ಗೆ ಯೋಚಿಸಬೇಕು. ಯಾವ ಅರ್ಥದಲ್ಲಿ ಸೆಪ್ಟೆಂಬರ್ ಕ್ರಾಂತಿ ಎಂದು ಹೇಳಿದ್ದಾರೋ ಗೊತ್ತಿಲ್ಲ. ಇದರ ಬಗ್ಗೆ ರಾಜಣ್ಣ ಅವರೇ ಸ್ಪಷ್ಟನೆ ನೀಡಬೇಕು. ಯಾವ ಕ್ರಾಂತಿ ಎಂಬುದು ನನಗಂತೂ ಅರ್ಥವಾಗುತ್ತಿಲ್ಲ ಎಂದರು.
ರಾಜಣ್ಣ ಅವರ ಹೇಳಿಕೆ ಬೆನ್ನಲ್ಲೇ ಇನ್ನಷ್ಟು ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿರುವುದು ಸರಿಯಲ್ಲ. ಯಾವ ಕ್ರಾಂತಿಯೂ ನಡೆಯುವುದಿಲ್ಲ. ನಮ ಸರ್ಕಾರ ಭದ್ರವಾಗಿರುತ್ತದೆ. ಬಿಜೆಪಿಯವರು ಪ್ರತಿ ಬಾರಿಯೂ ಮೂರು ತಿಂಗಳಿಗೆ ಸರ್ಕಾರ ಪತನವಾಗಲಿದೆ. ನಾವು ಸರ್ಕಾರ ರಚಿಸುತ್ತೇವೆ ಎಂಬ ಹಗಲುಗನಸು ಕಾಣುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಬಿಜೆಪಿಯವರು ಕೆಟ್ಟ ಸರ್ಕಾರ ನಡೆಸಿ ಹೀನಾಯವಾಗಿ ಸೋತು ಮನೆ ಸೇರಿಕೊಂಡಿದ್ದಾರೆ. ಆದರೂ ಅಧಿಕಾರದ ದುರಾಸೆ ಬಿಟ್ಟಿಲ್ಲ. ಹಿಂಬಾಗಿಲ ಮೂಲಕ ಸರ್ಕಾರ ರಚಿಸುವ ಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್ನ ಕುರಿತು ಟೀಕೆ ಮಾಡುವ ಅವರು, ಅವರ ಪಕ್ಷದಲ್ಲಿ ಎಲ್ಲವೂ ಸರಿಯಿದೆಯೇ ಎಂದು ನೋಡಿಕೊಳ್ಳಲಿ, ನಮ ತಟ್ಟೆಯಲ್ಲಿ ಸೊಳ್ಳೆ ಇದ್ದರೆ ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ. ಆರ್.ಅಶೋಕ್ ಜೋರುಜೋರಾಗಿ ಮಾತನಾಡುತ್ತಿದ್ದಾರೆ. ಮೊದಲು ಅವರ ಸ್ಥಾನ ಮುಂದುವರೆಯುತ್ತದೆಯೇ ಎಂಬುದನ್ನು ನೋಡಿಕೊಳ್ಳಲಿ. ನಮ ಸರ್ಕಾರ ಗಟ್ಟಿಯಾಗಿದೆ.
ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಎಲ್ಲರೂ ಒಟ್ಟಾಗಿದ್ದೇವೆ ಎಂದು ಹೇಳಿದರು.ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿದ್ದು, ಪಕ್ಷದ ಶಾಸಕರ ಅಭಿಪ್ರಾಯ ಆಲಿಸುತ್ತಾರೆ. ದೊಡ್ಡ ಪಕ್ಷವಾಗಿರುವುದರಿಂದ ಅಭಿಪ್ರಾಯಗಳು ಸಹಜವಾಗಿರುತ್ತವೆ. ನಾನೂ ಕೂಡ ನಾಳೆ ಅಥವಾ ನಾಡಿದ್ದು ಸುರ್ಜೇವಾಲ ಅವರನ್ನು ಭೇಟಿಯಾಗುತ್ತೇನೆ ಎಂದರು.
ಮನೆ ಹಂಚಿಕೆಗೆ ಸಂಬಂಧಪಟ್ಟಂತೆ ಲಂಚ ಪಡೆಯಲಾಗುತ್ತಿದೆ ಎಂದು ಬಿ.ಆರ್.ಪಾಟೀಲ್ ಹೇಳಿದ್ದಾರೆ. ಭ್ರಷ್ಟಾಚಾರ ಇಲ್ಲ ಎಂದು ಯಾರೂ ಹೇಳಲು ಸಾಧ್ಯವಿಲ್ಲ. ದೇಶದಲ್ಲೇ ಇದು ವ್ಯಾಪಕವಾಗಿದೆ. .ಆರ್.ಪಾಟೀಲ್ ನಿರ್ದಿಷ್ಟವಾಗಿ ದೂರು ನೀಡಿದರೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು. ನಮ ಸರ್ಕಾರ ಭ್ರಷ್ಟಾಚಾರವನ್ನು ತೊಡೆದುಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು. ಕರಾವಳಿ ಜಿಲ್ಲೆಗಳಲ್ಲಿ ಮರಳು ಗಣಿಗಾರಿಕೆಯನ್ನು ಕಾನೂನುಬದ್ಧಗೊಳಿಸಲು ತಾವು ಪ್ರಯತ್ನಿಸುತ್ತಿದ್ದು, ಕೇಂದ್ರ ಹಾಗೂ ರಾಜ್ಯಸರ್ಕಾರಗಳ ಕಾನೂನನ್ನು ಬಳಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.